ಕೇಂದ್ರ ಜಲ ಆಯೋಗದ ಅಧ್ಯಕ್ಷ ಜಿ.ಎಸ್. ಝಾ ನೇತೃತ್ವದ ತಂಡವು ಕರ್ನಾಟಕ ಹಾಗೂ ತಮಿಳುನಾಡಿನ ಕಾವೇರಿ ಕೊಳ್ಳಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿತ್ತು.

ನವದೆಹಲಿ (ಅ.17): ಕಾವೇರಿ ನದಿ ನೀರು ಹಂಚಿಕೆ ವಿವಾದದ ಹಿನ್ನೆಲೆಯಲ್ಲಿ ವಾಸ್ತವ ಸ್ಥಿತಿ ಅಧ್ಯಯನ ಮಾಡಿರುವ ಕೇಂದ್ರ ಜಲ ಆಯೋಗದ ಅಧ್ಯಕ್ಷ ಜಿ.ಎಸ್. ಝಾ ನೇತೃತ್ವದ ಕೇಂದ್ರ ಅಧ್ಯಯನ ತಂಡದ ವರದಿ ಇಂದು ಸುಪ್ರೀಂ ಕೋರ್ಟ್​ಗೆ ಸಲ್ಲಿಕೆಯಾಗಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಾವೇರಿ ಜಲಾನಯನ ಭಾಗದಲ್ಲಿ ವಸ್ತುಸ್ಥಿತಿ ಅಧ್ಯಯನಕ್ಕಾಗಿ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಆದೇಶಿಸಿತ್ತು. ಅದರಂತೆ ಕೇಂದ್ರ ಸರ್ಕಾರ ತಂಡ ರಚಿಸಿ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಿಗೆ ಕಳುಹಿಸಿತ್ತು.

12 ಅಧಿಕಾರಿಗಳನ್ನು ಒಳಗೊಂಡ ಉನ್ನತ ಮಟ್ಟದ ತಾಂತ್ರಿಕ ಅಧ್ಯಯನ ಸಮಿತಿ ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ತಲಾ ಎರಡು ದಿನಗಳ ಕಾಲ ವಾಸ್ತವ ಸ್ಥಿತಿಯನ್ನು ಅಧ್ಯಯನವನ್ನು ಮಾಡಿತ್ತು.

ಕರ್ನಾಟಕದ ಹೇಮಾವತಿ, ಕೆಆರ್ ಎಸ್ ಜಲಾಶಯಗಳು ಹಾಗೂ ಅಚ್ಚುಕಟ್ಟು ಪ್ರದೇಶಗಳ ವಾಸ್ತವ ಸ್ಥಿತಿ ಅಧ್ಯಯನ ಮಾಡಿತ್ತು. ಅದೇರೀತಿ ತಮಿಳುನಾಡಿನ ಭವಾನಿ ಮತ್ತು ಮೆಟ್ಟೂರು ಜಲಾಶಯಗಳ ವಸ್ತುಸ್ಥಿತಿಯನ್ನು ತಂಡ ಪರಿಶೀಲನೆ ನಡೆಸಿತ್ತು.

ಬಳಿಕ ದೆಹಲಿಗೆ ಮರಳಿರುವ ತಂಡ ಮಾಹಿತಿಯನ್ನು ಆಧರಿಸಿ ತನ್ನ ವರದಿಯನ್ನು ಕೇಂದ್ರ ಜಲಸಂಪನ್ಮೂಲ ಇಲಾಖೆಗೆ ಸಲ್ಲಿಸಿದೆ. ಈ ವರದಿಯನ್ನು ಕೇಂದ್ರ ಇಂದು ಸುಪ್ರೀಂ ಕೋರ್ಟ್​ಗೆ ಸಲ್ಲಿಸಲಿದೆ.

ಈ ತಜ್ಞರ ತಂಡದ ವರದಿ ಆಧರಿಸಿ ಇಂದು ಸುಪ್ರೀಂ ಕೋರ್ಟ್​ನ ದ್ವಿಸದಸ್ಯ ಪೀಠ ಆದೇಶ ನೀಡಲಿದೆ.