ಕೇಂದ್ರೀಯ ತೆರಿಗೆ ಆದಾಯದಲ್ಲಿ ರಾಜ್ಯಗಳಿಗೆ ದಕ್ಕಬೇಕಿರುವ ಪಾಲನ್ನು ಪ್ರತಿ ತಿಂಗಳ ಬದಲಾಗಿ ಮೂರು ತಿಂಗಳಿಗೊಮ್ಮೆ ಪಾವತಿ ಮಾಡುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಇದು ರಾಜ್ಯಗಳ ಚಿಂತೆಗೆ ಕಾರಣವಾಗಿದ್ದು, ಈಗಾಗಲೇ ಪಶ್ಚಿಮ ಬಂಗಾಳ ಹಾಗೂ ತೆಲಂಗಾಣ ಸರ್ಕಾರ ಗಳು ಕೇಂದ್ರ ಸರ್ಕಾರದ ಕ್ರಮವನ್ನು ಅತ್ಯುಗ್ರವಾಗಿ ವಿರೋಧಿಸಿವೆ.

ನವದೆಹಲಿ(ಅ.16): ಕೇಂದ್ರೀಯ ತೆರಿಗೆ ಆದಾಯದಲ್ಲಿ ರಾಜ್ಯಗಳಿಗೆ ದಕ್ಕಬೇಕಿರುವ ಪಾಲನ್ನು ಪ್ರತಿ ತಿಂಗಳ ಬದಲಾಗಿ ಮೂರು ತಿಂಗಳಿಗೊಮ್ಮೆ ಪಾವತಿ ಮಾಡುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಇದು ರಾಜ್ಯಗಳ ಚಿಂತೆಗೆ ಕಾರಣವಾಗಿದ್ದು, ಈಗಾಗಲೇ ಪಶ್ಚಿಮ ಬಂಗಾಳ ಹಾಗೂ ತೆಲಂಗಾಣ ಸರ್ಕಾರ ಗಳು ಕೇಂದ್ರ ಸರ್ಕಾರದ ಕ್ರಮವನ್ನು ಅತ್ಯುಗ್ರವಾಗಿ ವಿರೋಧಿಸಿವೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೇಂದ್ರೀಯ ತೆರಿಗೆಯಲ್ಲಿ ರಾಜ್ಯ ಸರ್ಕಾರಗಳಿಗೆ ಶೇ.42 ರಷ್ಟು ಪಾಲು ಬರುತ್ತದೆ. ಈ ಮೊತ್ತವನ್ನು ಪ್ರತಿ ತಿಂಗಳ ಒಂದನೇ ತಾರೀಖಿನಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಪಾವತಿ ಮಾಡುತ್ತದೆ. ಆ.16ರಂದು ರಾಜ್ಯ ಗಳಿಗೆ ಪತ್ರ ಬರೆದಿರುವ ಕೇಂದ್ರ ಸರ್ಕಾರ, ಮುಂದಿನ ಮಾರ್ಚ್ ಅಂತ್ಯದವರೆಗೆ 1ನೇ ತಾರೀಖಿನ ಬದಲಾಗಿ 15ನೇ ತಾರೀಖಿನಂದು ತೆರಿಗೆ ಪಾಲು ಸಂದಾಯ ಮಾಡಲಾಗುತ್ತದೆ. ಮುಂದಿನ ಹಣಕಾಸು ವರ್ಷದಿಂದ ಪ್ರತಿ ತ್ರೈಮಾಸಿಕಕ್ಕೊಮ್ಮೆ ಪಾಲು ನೀಡಲಾಗುತ್ತದೆ ಎಂದು ಹೇಳಿದೆ.

ಹಣಕಾಸು ವರ್ಷದ ಆರಂಭದ ತಿಂಗಳುಗಳಲ್ಲಿ ತೆರಿಗೆ ಸಂಗ್ರಹ ಕಡಿಮೆ ಪ್ರಮಾಣದಲ್ಲಿರುತ್ತದೆ. ಅಂತಹ ಸಂದ‘ರ್ ದಲ್ಲಿ ರಾಜ್ಯಗಳಿಗೆ ತೆರಿಗೆ ಪಾಲು ನೀಡಲು ಕೇಂದ್ರ ಸರ್ಕಾರ ಸಾಲ ಮಾಡಬೇಕಾದ ಪರಿಸ್ಥಿತಿ ಇದೆ. ಹೀಗಾಗಿ ಮೂರು ತಿಂಗಳಿಗೊಮ್ಮೆ ತೆರಿಗೆ ಆದಾಯ ಹಂಚುವ ಕ್ರಮಕ್ಕೆ ಮುಂದಾಗಲಾಗಿದೆ ಎಂದು ಹಣಕಾಸು ಸಚಿವಾಲಯದ ಮೂಲಗಳು ತಿಳಿಸಿವೆ. ಆದರೆ ಕೇಂದ್ರ ಸರ್ಕಾರದಿಂದ ಬರುವ ತೆರಿಗೆ ಆದಾಯವನ್ನೇ ನೆಚ್ಚಿಕೊಂಡು ರಾಜ್ಯಗಳು ಪ್ರತಿ ತಿಂಗಳು ಸರ್ಕಾರಿ ನೌಕರರ ಸಂಬಳ, ಪಿಂಚಣಿ, ಭತ್ಯೆ, ಆಡಳಿತ ವೆಚ್ಚ ಹಾಗೂ ಸಾಲದ ಬಡ್ಡಿಯನ್ನು ಪಾವತಿಸುತ್ತಿವೆ. ಇದರಿಂದ ರಾಜ್ಯ ಸರ್ಕಾರಗಳಿಗೆ ಸಮಸ್ಯೆಯಾಗುತ್ತದೆ. ಸಂಬಳ, ಪಿಂಚಣಿ, ಬಡ್ಡಿ ವೆಚ್ಚಗಳನ್ನು ಮುಂದೂಡಲು ಆಗುವುದಿಲ್ಲ ಎಂದು ಆರ್ಥಿಕ ತಜ್ಞ ಮೋಹನ ಗುರುಸ್ವಾಮಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಹೊಸ ಕ್ರಮಕ್ಕೆ ಪಶ್ಚಿಮ ಬಂಗಾಳ ಹಾಗೂ ತೆಲಂಗಾಣ ಸರ್ಕಾರಗಳು ಈಗಾಗಲೇ ವಿರೋಧ ವ್ಯಕ್ತಪಡಿಸಿವೆ. ಇದು ಸೂಕ್ತವಲ್ಲ. ಈ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಆಗ್ರಹಿಸಿವೆ. ಪ್ರತಿ ತಿಂಗಳ ಆರಂಭದಲ್ಲಿ ರಾಜ್ಯ ಸರ್ಕಾರ ಗಳ ಬೊಕ್ಕಸದ ಮೇಲೆ ಹಣಕಾಸು ಒತ್ತಡ ಇರುತ್ತದೆ. ತೆರಿಗೆ ಆದಾಯ ಸಂದಾಯವನ್ನು ತಡ ಮಾಡಿದರೆ ರಾಜ್ಯ ಸರ್ಕಾರಗಳು ಸಾಲ ಮಾಡಬೇಕಾಗುತ್ತದೆ. ಇದರಿಂದ ಈಗಾಗಲೇ ಇರುವ ಬಡ್ಡಿ ಹೊರೆ ಮತ್ತಷ್ಟು ಹೆಚ್ಚಾಗುತ್ತದೆ ಎಂದು ಪಶ್ಚಿಮ ಬಂಗಾಳದ ಹಣಕಾಸು ಸಚಿವ ಅಮಿತ್ ಮಿತ್ರಾ ಅವರು ಹೇಳಿದ್ದಾರೆ.