ರಾಜಕೀಯಕ್ಕೆ ಗುಡ್ ಬೈ ಹೇಳ್ತಾರಾ ಚೆಲುವರಾಯ ಸ್ವಾಮಿ ?
ಕಾಂಗ್ರೆಸ್ ಮುಖಂಡ ಚೆಲುವರಾಯ ಸ್ವಾಮಿ ಮುಂಬರುವ ಯಾವ ಚುನಾವಣೆಗಳಲ್ಲಿಯೂ ತಾವು ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿಕೊಂಡಿದ್ದಾರೆ.
ನಾಗಮಂಗಲ[ಮೇ 26] : ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಚೆಲುವರಾಯ ಸ್ವಾಮಿ ಮುಂಬರುವ ಯಾವ ಚುನಾವಣೆ ಗಳಲ್ಲಿಯೂ ತಾವು ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿಕೊಂಡಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾಗಮಂಗಲ ಕ್ಷೇತ್ರದಿಂದ ಸ್ಪರ್ಧೆ ಮಾಡಿ ಪರಾಜಿತ ಗೊಂಡಿರುವ ಅವರು ಇದೀಗ ಈ ಹೇಳಿಕೆಯನ್ನು ನೀಡಿದ್ದಾರೆ.
ಸಂಸತ್ ಉಪ ಉಪ ಚುನಾವಣೆ, ಸಾರ್ವತ್ರಿಕ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ. ನಾಗಮಂಗಲ ಕ್ಷೇತ್ರದಲ್ಲಿ ಜನಪ್ರತಿನಿಧಿಯಾಗಿರುವ ಅಥವಾ ಕೆಲಸ ಮಾಡುವ ಯೋಗ್ಯತೆ ನನಗಿಲ್ಲ. ನನಗೆ ಮತ ನೀಡಿರುವ, ನೀಡದಿರುವ ಎಲ್ಲಾ ಮತದಾರರಿಗೂ ಕೃತಜ್ಞತೆ ಎಂದು ಹೇಳಿದ್ದಾರೆ.
ಅಲ್ಲದೇ ಕಾಂಗ್ರೆಸ್ ಪಕ್ಷದ ಜಿಲ್ಲಾ ನಾಯಕತ್ವವೂ ನನಗೆ ಬೇಡ. ನಾನೊಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷದಲ್ಲಿ ಮುಂದು ವರೆಯುತ್ತೇನೆ ಎಂದು ನಾಗಮಂಗಲದಲ್ಲಿ ಚೆಲುವರಾಯಸ್ವಾಮಿ ಹೇಳಿದರು.
ಇದೇ ವೇಳೆ ಮೈತ್ರಿ ಸರ್ಕಾರದ ಬಗ್ಗೆಯೂ ಕೂಡ ಪ್ರಸ್ತಾಪ ಮಾಡಿದ್ದು, ಯಾರೂ ಕೂಡ ಏಕಪಕ್ಷೀಯವಾದ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ಬಿಜೆಪಿ ಪಕ್ಷವನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಈಗ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ ಎಂದಿದ್ದಾರೆ. ಆದರೆ ವೈಯಕ್ತಿಕವಾಗಿ ಕುಮಾರಸ್ವಾಮಿ ಅವರ ಬಳಿ ಹೊಂದಾಣಿಕೆಯ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.