ಮುಖ್ಯಮಂತ್ರಿಯಿಂದಲೇ ಅನಿರ್ದಿಷ್ಟಾವಧಿ ಉಪವಾಸ
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮಧ್ಯಪ್ರದೇಶದಲ್ಲಿ ರೈತ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ ಜನಾಂದೋಲನ ರೂಪ ಪಡೆದಿದೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಇಂದಿನಿಂದ ಅನಿರ್ದಿಷ್ಟಾವಧಿ ಉಪವಾಸ ನಡೆಸುತ್ತಿದ್ದಾರೆ. ಪರಿಸ್ಥಿತಿ ಸಹಜ ಸ್ಥಿತಿಗೆ ಬರುವವರೆಗೆ ಉಪವಾಸ ನಡೆಸುವುದಾಗಿ ಹೇಳಿದ್ದಾರೆ.
ನವದೆಹಲಿ (ಜೂ.10): ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮಧ್ಯಪ್ರದೇಶದಲ್ಲಿ ರೈತ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ ಜನಾಂದೋಲನ ರೂಪ ಪಡೆದಿದೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಇಂದಿನಿಂದ ಅನಿರ್ದಿಷ್ಟಾವಧಿ ಉಪವಾಸ ನಡೆಸುತ್ತಿದ್ದಾರೆ. ಪರಿಸ್ಥಿತಿ ಸಹಜ ಸ್ಥಿತಿಗೆ ಬರುವವರೆಗೆ ಉಪವಾಸ ನಡೆಸುವುದಾಗಿ ಹೇಳಿದ್ದಾರೆ.
ಶಿವರಾಜ್ ಸಿಂಗ್ ಭೂಪಾಲ್’ನ ದುಸ್ಸೆಹ್ರಾ ಮೈದಾನದಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು ರೈತರು ಇಲ್ಲಿಗೆ ಬಂದು ತಮ್ಮ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಬಹುದು. ನಾನವರಿಗೆ ಸಹಾಯ ಮಾಡುತ್ತೇನೆಂದು ಭರವಸೆ ನೀಡಿದ್ದಾರೆ. ನಾನು ನನ್ನ ಕಚೇರಿಯಲ್ಲಿ ಕುಳಿತುಕೊಳ್ಳುವುದಿಲ್ಲ. ಇಲ್ಲಿಂದಲೇ ನನ್ನ ಕರ್ತವ್ಯ ನಿರ್ವಹಿಸುತ್ತೇನೆ ಎಂದಿದ್ದಾರೆ.
ನನಗೆ ನಿಮ್ಮ ಸಮಸ್ಯೆ ಅರ್ಥವಾಗುತ್ತದೆ. ನಿಮ್ಮ ಶ್ರಮ ವ್ಯರ್ಥವಾಗುವುದಿಲ್ಲ. ರಾಜ್ಯ ಸರ್ಕಾರವು ರೈತರಿಂದ ಉತ್ಪನ್ನಗಳನ್ನು ಖರೀದಿಸಿ ಲಾಭದ ಬೆಲೆಯನ್ನು ನೀಡಲಿದೆ. ಸರ್ಕಾರ ಕೃಷಿ ಸಾಲದ ಮೇಲಿನ ಬಡ್ಡಿಯನ್ನು ಮನ್ನಾ ಮಾಡುವ ಚಿಂತನೆ ನಡೆಸಿದೆ. ಇದರಿಂದ 6 ಲಕ್ಷ ರೈತರಿಗೆ ಉಪಯೋಗವಾಗಲಿದೆ. ನಾನು ರೈತನಾಗಿ ನಿಮ್ಮ ಕಷ್ಟಗಳನ್ನು ಅರ್ಥ ಮಾಡಿಕೊಳ್ಳುತ್ತೇನೆ ಎಂದು ಭಾವನಾತ್ಮಕವಾಗಿ ಕರೆ ನೀಡಿದ್ದಾರೆ.