9 ಶಾಸಕರೊಂದಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸಭೆ ನಡೆಸಲಿದ್ದು, ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿದ್ದಾರೆ. ಈ ವೇಳೆ ಅಭಿವೃದ್ಧಿ ವಿಚಾರಗಳ ಚರ್ಚೆ ನಡೆಸಲಿದ್ದಾರೆ. 

ಬೆಂಗಳೂರು [ಸೆ.14]: ಸರ್ಕಾರದ ಸುಭದ್ರತೆ ದೃಷ್ಟಿಯಿಂದ ಶಾಸಕರ ವಿಶ್ವಾಸ ಗಳಿಸಲು ಮುಂದಾಗಿರುವ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರು ವಿವಿಧ ಜಿಲ್ಲೆಗಳ ಶಾಸಕರೊಂದಿಗೆ ಅಭಿವೃದ್ಧಿ ಕುರಿತು ಚರ್ಚಿಸುವ ಸಂಬಂಧ ಶನಿವಾರ ಒಂಬತ್ತು ಜಿಲ್ಲೆಗಳ ಶಾಸಕರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹಿಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿದ್ದ ಎಚ್‌.ಡಿ.ಕುಮಾರಸ್ವಾಮಿ ಅವರು ಮಿತ್ರಪಕ್ಷಗಳ ಶಾಸಕರ ವಿಶ್ವಾಸ ಉಳಿಸಿಕೊಳ್ಳುವಲ್ಲಿ ವಿಫಲವಾಗಿದ್ದರಿಂದಲೇ ಮುಂದೆ ಅದು ಬಂಡಾಯಕ್ಕೆ ತಿರುಗಿ ಸರ್ಕಾರ ಪತನಗೊಳ್ಳುವಂತಾಯಿತು ಎಂಬ ಆರೋಪಕ್ಕೆ ತುತ್ತಾಗಿದ್ದರು. ಈ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸಿರುವ ಯಡಿಯೂರಪ್ಪ ಅವರು ಶಾಸಕರೊಂದಿಗೆ ಸಭೆಗಳನ್ನು ಆರಂಭಿಸಿದ್ದಾರೆ.

ಶನಿವಾರ ಮುಖ್ಯಮಂತ್ರಿಗಳ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ಚಿಕ್ಕಮಗಳೂರು ಮತ್ತು ಮೈಸೂರು ಜಿಲ್ಲೆಗಳ ಶಾಸಕರೊಂದಿಗೆ ಪ್ರತ್ಯೇಕ ಸಭೆ ಕರೆದಿದ್ದಾರೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಈಗಾಗಲೇ ಒಂದೊಂದು ಜಿಲ್ಲೆಯಂತೆ ಕೆಲವು ಜಿಲ್ಲೆಗಳ ಶಾಸಕರೊಂದಿಗೆ ಸಭೆಗಳನ್ನು ನಡೆಸಿದ್ದ ಯಡಿಯೂರಪ್ಪ ಅವರು ಶನಿವಾರ ಎರಡು ಅಥವಾ ಮೂರು ಜಿಲ್ಲೆಗಳಂತೆ ಒಟ್ಟು ಒಂಬತ್ತು ಜಿಲ್ಲೆಗಳ ಶಾಸಕರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಬಹುತೇಕ ಬಿಜೆಪಿ ಶಾಸಕರೇ ಆಗಮಿಸಲಿದ್ದು, ಆಯಾ ಜಿಲ್ಲೆಗಳ ಮತ್ತು ಶಾಸಕರ ಕ್ಷೇತ್ರಗಳ ಅಭಿವೃದ್ಧಿ ಕಾರ್ಯಗಳು, ಬಾಕಿ ಉಳಿದಿರುವ ಯೋಜನೆಗಳ ಬಗ್ಗೆ ಚರ್ಚಿಸಿ ಸಾಧ್ಯವಾದಷ್ಟುತಕ್ಷಣವೇ ಪರಿಹಾರ ಕಲ್ಪಿಸಿಕೊಡಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.