ರಾಜ್ಯಾದ್ಯಂತ ಶಾಲಾ ತರಗತಿಗಳು ಪುನರ್‌ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ಬೆಂಗಳೂರು (ಜೂ. 01): ರಾಜ್ಯಾದ್ಯಂತ ಶಾಲಾ ತರಗತಿಗಳು ಪುನರ್‌ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Add Asianetnews Kannada as a Preferred SourcegooglePreferred

ವಿಧಾನಸಭೆ ಸಮಿತಿ ಕೊಠಡಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್‌, ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜ್‌ಕುಮಾರ್‌ ಕತ್ರಿ, ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಾದ ಸಿ. ಶಿಖಾ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಈ ವೇಳೆ ಶಾಲಾ-ಕಾಲೇಜುಗಳು ಪುನರ್‌ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಕುಮಾರಸ್ವಾಮಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಪಠ್ಯಪುಸ್ತಕ ಹಾಗೂ ಸಮವಸ್ತ್ರ ವಿತರಣೆ ವಿಳಂಬದ ಬಗ್ಗೆ ಪ್ರತಿ ವರ್ಷವೂ ದೂರುಗಳು ಬರುತ್ತವೆ. ಪ್ರತಿ ವರ್ಷವೂ ಅಧಿಕಾರಿಗಳು ತರಗತಿಗಳು ಆರಂಭವಾಗುವ ಮೊದಲೇ ಪಠ್ಯಪುಸ್ತಕ ವಿತರಿಸುವುದಾಗಿ ಹೇಳುತ್ತೀರಿ. ಆದರೂ, ಪ್ರತಿ ವರ್ಷವೂ ಸಮಸ್ಯೆ ಉಂಟಾಗುತ್ತದೆ. ಈ ಬಗ್ಗೆ ಸೂಕ್ತ ಗಮನ ನೀಡಿ ಎಂದು ನಿರ್ದೇಶನ ನೀಡಿದರು.

ಅಲ್ಲದೆ, ಆರ್‌ಟಿಇ ಅಡಿ ದಾಖಲಾಗುವ ಮಕ್ಕಳ ಪೋಷಕರಿಂದ ಖಾಸಗಿ ಶಾಲೆಗಳು ಸುಲಿಗೆ ಮಾಡುತ್ತಿವೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಜತೆಗೆ ಖಾಸಗಿ ಶಾಲೆಗಳಿಂದ ಶುಲ್ಕದ ಹೆಸರಿನಲ್ಲಿ ಶೋಷಣೆ ನಡೆಯುತ್ತಿದೆ. ಹೀಗಾಗಿ ಖಾಸಗಿ ಶಾಲೆಗಳ ಶೋಷಣೆಗೆ ಕಡಿವಾಣ ಹಾಕಿ ಪೋಷಕರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವಂತೆ ಕ್ರಮ ವಹಿಸಬೇಕು. ಅಲ್ಲದೆ, ಸರ್ಕಾರಿ ಶಾಲೆಗಳಲ್ಲಿ ಅಗತ್ಯ ಮೂಲಸೌಕರ್ಯ, ಪಠ್ಯಪುಸ್ತ, ಸಮವಸ್ತ್ರ, ಶೂ-ಸಾಕ್ಸ್‌ ವಿತರಣೆಗೆ ಆದ್ಯತೆ ನೀಡಬೇಕು ಎಂದು ಸೂಚಿಸಿದರು ಎಂದು ಮೂಲಗಳು ತಿಳಿಸಿವೆ.

ಶಿಕ್ಷಕರ ವರ್ಗಾವಣೆ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಆಡಳಿತಾತ್ಮಕ ಕ್ರಮ ಕೈಗೊಳ್ಳುವ ಅಗತ್ಯವಿದೆ. ಶಿಕ್ಷಕರ ವರ್ಗಾವಣೆ ಕಳೆದ ಒಂದು ವರ್ಷದಿಂದ ವಿಳಂಬವಾಗುತ್ತಿದೆ ಎಂದು ಅಧಿಕಾರಿಗಳು ಗಮನಕ್ಕೆ ತಂದರು. ತಕ್ಷಣ ಮಕ್ಕಳ ತರಗತಿಗಳು ಸುಸೂತ್ರವಾಗಿ ನಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಿ. ಮುಂದಿನ ಸಭೆಯಲ್ಲಿ ಈ ಬಗ್ಗೆ ವಿವರವಾಗಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳೋಣ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು ಎಂದು ತಿಳಿದುಬಂದಿದೆ.