ಸಮ್ಮಿಶ್ರ ಸರ್ಕಾರದಲ್ಲಿ ವಿವಿಧ ಇಲಾಖೆಗಳ ವರ್ಗಾವಣೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎನ್ನಲಾದ ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಅವರ ಕಾರ್ಯವೈಖರಿ ಬಗ್ಗೆ ಕಾಂಗ್ರೆಸ್‌ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು : ಸಮ್ಮಿಶ್ರ ಸರ್ಕಾರದಲ್ಲಿ ವಿವಿಧ ಇಲಾಖೆಗಳ ವರ್ಗಾವಣೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎನ್ನಲಾದ ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಅವರ ಕಾರ್ಯವೈಖರಿ ಬಗ್ಗೆ ಕಾಂಗ್ರೆಸ್‌ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Add Asianetnews Kannada as a Preferred SourcegooglePreferred

ಕಾಂಗ್ರೆಸ್‌ ಸಚಿವರಿಗೆ ಸಂಬಂಧಿಸಿದ ಇಲಾಖೆಗಳಲ್ಲಿನ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯಲ್ಲಿ ರೇವಣ್ಣ ಅವರು ಹಸ್ತಕ್ಷೇಪ ಮಾಡುತ್ತಿರುವುದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಗುರುವಾರ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್‌ ಅವರು ನೇರವಾಗಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೇ ಹೇಳಿದ್ದಾರೆ ಎನ್ನಲಾಗಿದೆ.

ಸಭೆಯಲ್ಲಿ ಮಾತನಾಡಿದ ಉಭಯ ನಾಯಕರು, ಜಲಸಂಪನ್ಮೂಲ ಇಲಾಖೆಯಲ್ಲಿ 23, ಬಿಬಿಎಂಪಿಯಲ್ಲಿ 5, ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿನ 6 ಸೇರಿದಂತೆ ಒಟ್ಟು 53 ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಈ ಬಗ್ಗೆ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಸಹ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂತಹ ಕೆಲಸಗಳನ್ನು ಸಹಿಸಿಕೊಳ್ಳಲಾಗದು ಎಂದರು. 

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಇನ್ನು ಮುಂದೆ ಇಂತಹ ಎಡವಟ್ಟು ಸಂಭವಿಸದಂತೆ ಎಚ್ಚರ ವಹಿಸುವುದಾಗಿ ಭರವಸೆ ನೀಡಿದರು ಎಂದು ತಿಳಿದು ಬಂದಿದೆ. 

ಪರಂ ತೇಪೆ: ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್‌, ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಯಾವುದೇ ಸಮಸ್ಯೆ ಉಂಟಾಗಿಲ್ಲ. ಈಗ ವರ್ಗಾವಣೆಯಾಗಿರುವ ಅಧಿಕಾರಿಗಳ ಪಟ್ಟಿಯನ್ನು ಕಳೆದ ಸರ್ಕಾರದ ಅವಧಿಯಲ್ಲಿ ನಾವೇ ಸಿದ್ಧಪಡಿಸಿದ್ದೆವು. ಅದನ್ನು ಹೊಸ ಸರ್ಕಾರ ಜಾರಿಗೆ ತಂದಿದೆಯಷ್ಟೇ ಎಂದು ತೇಪೆ ಹಚ್ಚುವ ಪ್ರಯತ್ನ ಮಾಡಿದರು.