ರಂಗೇರಿದ ಚುನಾವಣಾ ಕಣ : ಮುಂದುವರೆದ ಪಕ್ಷಾಂತರ ಪರ್ವ
ರಾಜ್ಯದಲ್ಲಿ ಎರಡು ಕ್ಷೇತ್ರಗಳಲ್ಲಿ ಉಪ ಚುನಾವಣೆ ರಂಗೇರಿದ್ದು, ಅಭ್ಯರ್ಥಿಗಳು ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ.
ಕಲಬುರಗಿ : ಉಮೇಶ್ ಜಾಧವ್ ರಾಜೀನಾಮೆಯಿಂದ ತೆರವಾಗಿದ್ದ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಕಣ ರಂಗೇರಿದೆ.
ಕಾಂಗ್ರೆಸ್ ಅಭ್ಯರ್ಥಿ ಸುಬಾಷ ರಾಠೋಡ್ ಮತ್ತು ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾಧವ್ ಬಿರುಸಿನ ಪ್ರಚಾರ ಕೈಗೊಳ್ಳುತ್ತಿದ್ದಾರೆ.
ಈ ನಡುವೆ ಪಕ್ಷಾಂತರ ಪರ್ವ ಸಹ ಮುಂದುವರೆದಿದ್ದು, ಒಂದೆಡೆ ನೂರಾರು ಯುವಕರು ಬಿಜೆಪಿಗೆ ಸೇರ್ಪಡೆಯಾದರೆ, ಇನ್ನೊಂದೆಡೆ ನೂರಾರು ಯುವಕರು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.
ಕಾಂಗ್ರೆಸ್ ಮತ್ತು ಬಿಜೆಪಿಯ ಪ್ರಚಾರ ಸಮಾವೇಶಗಳಲ್ಲಿ ಆಯಾ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮವೇ ಪ್ರಮುಖವಾಗುತ್ತಿದೆ. ತಮ್ಮ ಪಕ್ಷಕ್ಕೆ ಸೇರ್ಪಡೆಯಾಗುವವರಿಗೆ ಮುಖಂಡರು ಪಕ್ಷದ ಧ್ವಜ ನೀಡುವುದು, ಪಕ್ಷದ ಗುರುತಿನ ಶಾಲು ಹಾಕಿ ಬರಮಾಡಿಕೊಳ್ಳುವುದು ಸಾಮಾನ್ಯವಾಗಿದೆ.
ಕಾಂಗ್ರೆಸ್ ಬಿಜೆಪಿ ಎರಡೂ ಪಕ್ಷಗಳಿಗೂ ಕೂಡ ಉಪಚುನಾವಣೆ ತೀವ್ರ ಪ್ರತಿಷ್ಠೆ ಪ್ರಶ್ನೆಯಾಗಿರುವುದರಿಂದ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಶುರುವಾಗಿದೆ.