ಮಹಾರಾಷ್ಟ್ರದ ವರ್ಧಾ ಜಿಲ್ಲೆಯಲ್ಲಿರುವ ಮಹಾತ್ಮಾ ಗಾಂಧಿ ಅವರ ಸೇವಾಗ್ರಾಮ ಆಶ್ರಮದಲ್ಲಿ ಗಾಂಧಿ ಜಯಂತಿ ನಿಮಿತ್ತ ನಡೆದ ‘ಕಾಂಗ್ರೆಸ್‌ ಕಾರ್ಯಕಾರಿಣಿ ಸಮಿತಿ’ ಸಭೆಯಲ್ಲಿ  ಪ್ರಧಾನಿ ನರೇಂದ್ರ ಮೋದಿ ವಿರುದ್ಧ ‘2ನೇ ಸ್ವಾತಂತ್ರ್ಯ ಸಂಗ್ರಾಮ’ಕ್ಕೆ ಕಾಂಗ್ರೆಸ್‌ ಪಕ್ಷ ಕರೆ ನೀಡಿದೆ.

ಸೇವಾಗ್ರಾಮ :  ನರೇಂದ್ರ ಮೋದಿ ಸರ್ಕಾರದ ವಿರುದ್ಧ ‘2ನೇ ಸ್ವಾತಂತ್ರ್ಯ ಸಂಗ್ರಾಮ’ಕ್ಕೆ ಕಾಂಗ್ರೆಸ್‌ ಪಕ್ಷ ಕರೆ ನೀಡಿದೆ. ‘ಮಹಾತ್ಮಾ ಗಾಂಧೀಜಿ ಅವರ ಹತ್ಯೆಗೆ ದ್ವೇಷ ಮತ್ತು ಹಿಂಸೆ ಕಾರಣವಾಗಿತ್ತು. ಈಗ ಇದೇ ದ್ವೇಷ ಮತ್ತು ಹಿಂಸೆಯನ್ನು ಮೋದಿ ಸರ್ಕಾರ ಪ್ರಚುರಪಡಿಸುತ್ತಿದ್ದು, ಅದರ ವಿರುದ್ಧ 2ನೇ ಸ್ವಾತಂತ್ರ್ಯ ಸಂಗ್ರಾಮ ನಡೆಸಬೇಕಿದೆ’ ಎಂದು ಪಕ್ಷ ಹೇಳಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಹಾರಾಷ್ಟ್ರದ ವರ್ಧಾ ಜಿಲ್ಲೆಯಲ್ಲಿರುವ ಮಹಾತ್ಮಾ ಗಾಂಧಿ ಅವರ ಸೇವಾಗ್ರಾಮ ಆಶ್ರಮದಲ್ಲಿ ಗಾಂಧಿ ಜಯಂತಿ ನಿಮಿತ್ತ ನಡೆದ ‘ಕಾಂಗ್ರೆಸ್‌ ಕಾರ್ಯಕಾರಿಣಿ ಸಮಿತಿ’ ಸಭೆಯಲ್ಲಿ ಈ ಮಹತ್ವದ ನಿರ್ಣಯವನ್ನು ಅಂಗೀಕರಿಸಲಾಯಿತು.

ಇದೇ ವೇಳೆ, ದಿಲ್ಲಿಯ ಹೊರವಲಯದಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಪೊಲೀಸರು ನಡೆಸಿದ ಬಲಪ್ರಯೋಗವನ್ನು ಸಭೆ ಖಂಡಿಸಿತು. ಸಭೆಯಲ್ಲಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಹಾಗೂ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಮೊದಲಾದವರಿದ್ದರು.

ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್‌ ಮುಖ್ಯ ವಕ್ತಾರ ರಣದೀಪ್‌ ಸುರ್ಜೇವಾಲಾ, ‘ಕಾಂಗ್ರೆಸ್‌ ಕಾರ್ಯಕಾರಿಣಿ ಸಭೆಯು ಗಾಂಧೀಜಿ ಅವರ ಭಾರತೀಯ ಚಿಂತನಾ ಪ್ರಕ್ರಿಯೆಯನ್ನು ಸ್ಮರಿಸುತ್ತ 2 ನಿರ್ಣಯಗಳನ್ನು ಅಂಗೀಕರಿಸಿದೆ. ಮೊದಲನೆಯದಾಗಿ, ‘ಲಾಲ್‌ ಬಹಾದ್ದೂರ್‌ ಶಾಸ್ತ್ರಿ ಅವರ ‘ಜೈ ಜವಾನ್‌ ಜೈ ಕಿಸಾನ್‌’ ಎಂಬುದು ಕೇವಲ ಘೋಷಣೆಯಲ್ಲ. ಅದು ಜೀವನ ಶೈಲಿ. ರೈತರ ಹಿತಾಸಕ್ತಿಗಾಗಿ ಹೋರಾಡಲು ಕಾಂಗ್ರೆಸ್‌ ಬದ್ಧವಾಗಿದೆ’ ಎಂಬ ಗೊತ್ತುವಳಿ ಸ್ವೀಕರಿಸಲಾಗಿದೆ’ ಎಂದರು.

ಇದೇ ವೇಳೆ, ‘ಮೋದಿ ಸರ್ಕಾರವು ದ್ವೇಷ, ಭಯ, ವಿಭಜನಕಾರಿ ನೀತಿ, ಧ್ರುವೀಕರಣ, ಚರ್ಚೆ-ವಿರೋಧದ ದನಿ ಅಡಗಿಸುವಿಕೆಯಂತಹ ಕೃತ್ಯಗಳಲ್ಲಿ ತೊಡಗಿದೆ. ಇದರ ವಿರುದ್ಧ ‘ದ್ವಿತೀಯ ಸ್ವಾತಂತ್ರ್ಯ ಸಂಗ್ರಾಮ’ ನಡೆಸಲು ಕಾಂಗ್ರೆಸ್‌ ಪಕ್ಷ ಎರಡನೇ ಗೊತ್ತುವಳಿ ಅಂಗೀಕರಿಸಿದೆ’ ಎಂದರು.

‘ಮೋದಿ ಸರ್ಕಾರವು ಭಾರತದ ಬಹುತ್ವದ ವಿರುದ್ಧವಾಗಿದೆ. ದ್ವೇಷ, ದ್ರೋಹ ಹಾಗೂ ಸುಳ್ಳುಗಾರಿಕೆಯ ರಾಜಕೀಯದಲ್ಲಿ ತೊಡಗಿದೆ. ಗಾಂಧೀಜಿ ಬಗ್ಗೆ ಭಾಷಣದಲ್ಲಿ ಮಾತಾಡೋದು ಸುಲಭ. ಅದು ಕೇವಲ ರಾಜಕೀಯ ಅವಕಾಶವಾದಿತನ’ ಎಂದು ಟೀಕಿಸಿದರು.

‘ಮೋದಿ ಅವರು ಅಧಿಕಾರದ ಅಮಲಿನಲ್ಲಿ ತೇಲುತ್ತಿದ್ದಾರೆ. ಇದನ್ನು ಖಂಡಿಸುವ ಕಾಂಗ್ರೆಸ್‌ ಪಕ್ಷ ಯಾವತ್ತೂ ರೈತರ ಪರ ಹೋರಾಡಲಿದೆ’ ಎಂದೂ ಅವರು ಸುರ್ಜೇವಾಲಾ ಹೇಳಿದರು.