‘ಲೋಕ’ ಚುನಾವಣೆ ನಂತರದ ಬಗ್ಗೆ ಎಂ.ಬಿ.ಪಾಟೀಲ್ ಹೊಸ ಸುಳಿವು
ಕಾಂಗ್ರೆಸ್ ಮುಖಂಡ ಎಂ.ಬಿ.ಪಾಟೀಲ್ ಮಹತ್ವದ ಸುಳಿವೊಂದನ್ನು ನೀಡಿದ್ದಾರೆ. ಲೋಕಸಭಾ ಚುನಾವಣೆ ಬಳಿಕ ನಡೆಯುವ ಬೆಳವಣಿಗೆಯ ಬಗ್ಗೆ ಅವರು ಸುಳಿವೊಂದನ್ನು ನೀಡಿದ್ದಾರೆ.
ವಿಜಯಪುರ : ಚುನಾವಣೆಯಲ್ಲಿ ಹಿನ್ನಡೆಯಾದ ಹಿನ್ನೆಲೆಯಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮ ವಿವಾದದಿಂದ ಕಾಂಗ್ರೆಸ್ ಪಕ್ಷ ದೂರ ಸರಿದರೂ, ಮಾಜಿ ಸಚಿವರೂ ಆಗಿರುವ ಬಬಲೇಶ್ವರ ಕ್ಷೇತ್ರದ ಶಾಸಕ ಎಂ.ಬಿ.ಪಾಟೀಲ್ ಹೋರಾಟ ಮುಂದುವರಿಸುವ ಸುಳಿವು ನೀಡಿದ್ದಾರೆ.
ಕೇಂದ್ರ ಸರ್ಕಾರ ಲಿಂಗಾಯತ ಪ್ರತ್ಯೇಕ ಧರ್ಮದ ಪ್ರಸ್ತಾವನೆಯನ್ನು ತಿರಸ್ಕರಿಸಿರುವುದು ಸರಿಯಲ್ಲ. ಪಾರ್ಲಿಮೆಂಟ್ ಚುನಾವಣೆ ನಂತರ ಪ್ರತ್ಯೇಕ ಲಿಂಗಾಯತ ಧರ್ಮ ಕುರಿತ ಹೋರಾಟದ ಮುಂದಿನ ನಡೆ ನಿರ್ಧರಿಸಲಾಗುವುದು ಅವರು ಹೇಳಿದ್ದಾರೆ.
ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟವನ್ನು ಕೈಗೆತ್ತಿಕೊಂಡರೆ, ಅದಕ್ಕೆ ರಾಜಕೀಯ ಬಣ್ಣ ಬಳಿಯಲಾಗುತ್ತದೆ. ಅದಕ್ಕೆ ಅವಕಾಶ ನೀಡಬಾರದು. ಆದರೆ, ಲೋಕಸಭೆ ಚುನಾವಣೆ ಬಳಿಕ ಮೈದಾನ ಖುಲ್ಲಾ ಇರುತ್ತದೆ. ಆಗ ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟ ಕೈಗೊಳ್ಳುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಹೇಳಿದರು.