ವಿಧಾನಸಭಾ ಚುನಾವಣೆಗೆ ರಣತಂತ್ರ ರೂಪಿಸಲು ಹಾಗೂ ಅಭ್ಯರ್ಥಿಗಳ ಮೊದಲ ಪಟ್ಟಿಅಖೈರುಗೊಳಿಸಲು ಸೋಮವಾರದಿಂದ ಮೂರು ದಿನಗಳ ಕಾಲ ನಗರದಲ್ಲಿ ಕಾಂಗ್ರೆಸ್‌ ಪಕ್ಷದ ರಾಜ್ಯ ಚುನಾವಣಾ ಸಮಿತಿ ಸಭೆ ನಡೆಯಲಿದೆ.

ಬೆಂಗಳೂರು : ವಿಧಾನಸಭಾ ಚುನಾವಣೆಗೆ ರಣತಂತ್ರ ರೂಪಿಸಲು ಹಾಗೂ ಅಭ್ಯರ್ಥಿಗಳ ಮೊದಲ ಪಟ್ಟಿಅಖೈರುಗೊಳಿಸಲು ಸೋಮವಾರದಿಂದ ಮೂರು ದಿನಗಳ ಕಾಲ ನಗರದಲ್ಲಿ ಕಾಂಗ್ರೆಸ್‌ ಪಕ್ಷದ ರಾಜ್ಯ ಚುನಾವಣಾ ಸಮಿತಿ ಸಭೆ ನಡೆಯಲಿದೆ.

ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌, ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್‌ ನೇತೃತ್ವದಲ್ಲಿ ದೇವನಹಳ್ಳಿ ಸಮೀಪದ ರೆಸಾರ್ಟ್‌ನಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ ಸುಮಾರು 100ಕ್ಕೂ ಹೆಚ್ಚು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸುವ ಪ್ರಕ್ರಿಯೆ ನಡೆಯಲಿದೆ.

ರಾಜ್ಯ ಕಾಂಗ್ರೆಸ್‌ ಚುನಾವಣಾ ಸಮಿತಿಯು ಇತ್ತೀಚೆಗೆ ದೇವನಹಳ್ಳಿಯಲ್ಲಿ ಸಭೆ ಸೇರಿ ಹಾಲಿ ಶಾಸಕರು ಇರದ ಕ್ಷೇತ್ರಗಳಿಗೆ ಪಟ್ಟಿಸಿದ್ಧಪಡಿಸುವ ಪ್ರಯತ್ನ ನಡೆಸಿತ್ತು. ಆದರೆ ತಮ್ಮ ಹಿಂಬಾಲಕರಿಗೆ ಟಿಕೆಟ್‌ ಕೊಡಿಸಬೇಕು ಎಂಬ ಉಮೇದಿಗೆ ಬಿದ್ದ ಹಿರಿಯ ನಾಯಕರ ಧೋರಣೆಯಿಂದಾಗಿ ಹಲವು ಕ್ಷೇತ್ರಗಳ ಹೆಸರು ಅಂತಿಮಗೊಳಿಸುವಾಗ ತೀವ್ರ ಮಾತಿನ ಚಕಮಕಿ ನಡೆದಿತ್ತು.

ವಿಶೇಷವಾಗಿ ಲೋಕೋಪಯೋಗಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಹಾಗೂ ಹಿರಿಯ ನಾಯಕ ವೀರಪ್ಪ ಮೊಯ್ಲಿ ನಡುವೆ ವಾಕ್ಸಮರ ನಡೆದಿತ್ತು. ಅಲ್ಲದೆ ಡಿ.ಕೆ.ಶಿವಕುಮಾರ್‌ ಹಾಗೂ ಮಹದೇವಪ್ಪ ನಡುವೆಯೂ ಮಾತಿನ ಚಕಮಕಿ ನಡೆದಿತ್ತು.

ಸೋಮವಾರದಿಂದ ಪ್ರಾರಂಭವಾಗಲಿರುವ ಸಭೆಯಲ್ಲಿ ಪಕ್ಷದ ಶಾಸಕರನ್ನು ಹೊಂದಿರುವ ಕ್ಷೇತ್ರಗಳ ಬಗ್ಗೆಯೂ ಚರ್ಚೆ ಮಾಡಲಾಗುವುದು. ವಯಸ್ಸಾದ 10ಕ್ಕೂ ಹೆಚ್ಚು ಮಂದಿ ಶಾಸಕರಿಗೆ ಟಿಕೆಟ್‌ ನೀಡಬೇಕೇ ಬೇಡವೇ ಎಂಬ ಬಗ್ಗೆ ಹಾಗೂ ಟಿಕೆಟ್‌ ತಪ್ಪುವ ಶಾಸಕರ ಕುಟುಂಬಸ್ಥರಿಗೆ ಟಿಕೆಟ್‌ ನೀಡುವ ಬಗ್ಗೆಯೂ ಚರ್ಚೆಗೆ ಬರಲಿದೆ.

ಈ ವೇಳೆಯೂ ಕೈತಪ್ಪಲಿರುವ ಸ್ಥಾನಗಳಲ್ಲಿ ತಮ್ಮ ಬೆಂಬಲಿಗರಿಗೆ ಟಿಕೆಟ್‌ ನೀಡಬೇಕು ಎಂದು ಹಿರಿಯ ನಾಯಕರು ಧ್ವನಿ ಎತ್ತುವ ಸಾಧ್ಯತೆ ಇದೆ. ಹೀಗಾಗಿ ಸೋಮವಾರದ ಸಭೆಯಲ್ಲೂ ಕಾಂಗ್ರೆಸ್‌ ನಾಯಕರ ನಡುವೆ ಮಾತಿನ ಚಕಮಕಿ ನಿರೀಕ್ಷಿಸಲಾಗಿದೆ. ಕಳೆದ ಸಭೆಯಲ್ಲಿ ವೀರಪ್ಪ ಮೊಯ್ಲಿ ಹಾಗೂ ಮಹದೇವಪ್ಪ ನಡುವಿನ ಚಕಮಕಿಯು ಟ್ವೀಟ್‌ ರೂಪ ಪಡೆದು ರಾಜ್ಯ ರಾಜಕೀಯದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿತ್ತು.

ಟಿಕೆಟ್‌ ಹಂಚಿಕೆ ಬಗ್ಗೆಯೇ ಪ್ರಮುಖವಾಗಿ ನಡೆಯುತ್ತಿರುವ ಸಭೆಯಲ್ಲಿ ಕಡಿಮೆ ಅಂತರದಿಂದ ಸೋತಿರುವವರಿಗೆ ಮತ್ತೊಮ್ಮೆ ಅವಕಾಶ ನೀಡುವುದು, ನಾಯಕರು ತಮ್ಮ ಪುತ್ರರಿಗೆ ಟಿಕೆಟ್‌ಗೆ ಬೇಡಿಕೆ ಇಟ್ಟರೆ ಅದರ ನಿರ್ಧಾರಗಳನ್ನು ಹೈಕಮಾಂಡ್‌ಗೆ ಬಿಡುವುದೂ ಸೇರಿದಂತೆ ಹಲವು ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.