ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಬೆಂಬಲದ ವಿಚಾರ ಇದೀಗ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಮುಖಂಡರಿಬ್ಬರ ನಡುವೆ ವಾಗ್ವಾದ ನಡೆದಿದೆ.

ಕುಂದಗೋಳ : ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರಿಗೆ ಸ್ಪರ್ಧೆ ಮಾಡಲು ಹೇಳಿದ್ದು ನಾವಾ ಅಥವಾ ನೀವಾ ಎಂದು ಪ್ರಶ್ನಿಸುವ ಮೂಲಕ ಮೈತ್ರಿ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ವಿರುದ್ಧ ಕಿಡಿಕಾರಿದ್ದಾರೆ.

Add Asianetnews Kannada as a Preferred SourcegooglePreferred

ಕುಂದಗೋಳ ಕ್ಷೇತ್ರದ ಅರಳಿಕಟ್ಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮುಖಂಡರು ಬೆಂಕಿ ಹಚ್ಚುವಲ್ಲಿ ನಿಸ್ಸೀಮರು ಎಂದು ಆಕ್ರೋಶ ವ್ಯಕ್ತಪಡಿಸಿದರು. ಸುಮಲತಾ ಅವರಿಗೆ ಚುನಾವಣೆಯಲ್ಲಿ ಸಪೋರ್ಟ್‌ ಮಾಡಿದ್ದೇವೆಂದು ಶೆಟ್ಟರ್‌ ಹೇಳಿದ್ದು ಶುದ್ಧ ಸುಳ್ಳು. ಅವರಿಗೆ ಹೇಳಿಕೊಳ್ಳಲು ಯಾವ ವಿಷಯವಿಲ್ಲ. ಹೀಗಾಗಿ ಈ ರೀತಿ ಸುಳ್ಳು ಹೇಳುತ್ತಾ ಓಡಾಡುತ್ತಿದ್ದಾರೆ ಎಂದು ಆರೋಪಿಸಿದರು.

ಹಾಗೆಯೇ, ಮೈತ್ರಿ ಸರ್ಕಾರಕ್ಕೆ ಸಿದ್ದರಾಮಯ್ಯ ಟೈಂ ಬಾಂಬ್‌ ಫಿಕ್ಸ್‌ ಮಾಡಿದ್ದಾರೆಂದೂ ಹೇಳಿದ್ದು ಬೇಸರ ಮೂಡಿಸುತ್ತಿದೆ. ಸಮ್ಮಿಶ್ರ ಸರ್ಕಾರ ಉತ್ತಮವಾಗಿ ಆಡಳಿತ ನಡೆಸುತ್ತಿದೆ. ದೋಸ್ತಿ ಸರ್ಕಾರ ಇನ್ನೂ ನಾಲ್ಕು ವರ್ಷ ಭದ್ರವಾಗಿರುತ್ತದೆ. ಮೈತ್ರಿ ಸರ್ಕಾರ ಉರುಳುತ್ತದೆ ಎಂಬುದೆಲ್ಲ ಕನಸಿನ ಮಾತು. ಅವರ ಕನಸು ನನಸಾಗುವುದಿಲ್ಲ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದರು.