ಎಚ್ಡಿಕೆಗೆ ಖರ್ಗೆ, ಡಿಕೆಶಿ ವಿರೋಧ ಯಾಕೆ ?
ಎಚ್.ಡಿ.ಕುಮಾರಸ್ವಾಮಿ ಅವರಿಗೆ ಐದು ವರ್ಷಗಳ ಕಾಲ ಮುಖ್ಯಮಂತ್ರಿ ಹುದ್ದೆ ನೀಡಲು ತೀರ್ಮಾನಿಸಿದ ಕಾಂಗ್ರೆಸ್ ಹೈಕಮಾಂಡ್ನ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ರಾಜ್ಯ ನಾಯಕರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಮನವಿ ಮಾಡುವ ಸಾಧ್ಯತೆಯಿದೆ.
ಬೆಂಗಳೂರು : ಎಚ್.ಡಿ.ಕುಮಾರಸ್ವಾಮಿ ಅವರಿಗೆ ಐದು ವರ್ಷಗಳ ಕಾಲ ಮುಖ್ಯಮಂತ್ರಿ ಹುದ್ದೆ ನೀಡಲು ತೀರ್ಮಾನಿಸಿದ ಕಾಂಗ್ರೆಸ್ ಹೈಕಮಾಂಡ್ನ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ರಾಜ್ಯ ನಾಯಕರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಮನವಿ ಮಾಡುವ ಸಾಧ್ಯತೆಯಿದೆ.
ಹೈಕಮಾಂಡ್ ತೀರ್ಮಾನದಂತೆ ಮೈತ್ರಿಕೂಟದಲ್ಲಿ ಮುಖ್ಯಮಂತ್ರಿ ಹುದ್ದೆಯನ್ನು ಪರಿಪೂರ್ಣ ಐದು ವರ್ಷಗಳ ಕಾಲ ನೀಡುವ ಕುರಿತು ಈಗಾಗಲೇ ಅಧಿಕೃತ ಘೋಷಣೆ ಮಾಡಲಾಗಿದೆ. ಆದರೆ, ಈ ಘೋಷಣೆ ತರಾತುರಿಯಲ್ಲಿ ಆಗಿದ್ದು, ಇದರಿಂದ ಪಕ್ಷದ ಮೇಲೆ ಮಾರಕ ಪರಿಣಾಮವಾಗಲಿದೆ. ಹೀಗಾಗಿ ಈ ನಿರ್ಧಾರವನ್ನು ಪುನರ್ ಪರಿಶೀಲಿಸಬೇಕು ಎಂದು ರಾಹುಲ್ ಗಾಂಧಿ ಅವರನ್ನು ರಾಜ್ಯ ನಾಯಕರು ಮಂಗಳವಾರ ನಡೆಯಲಿರುವ ಸಭೆಯಲ್ಲಿ ಕೋರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ವಿಚಾರವನ್ನು ಹೈಕಮಾಂಡ್ನ ಇತರ ಪ್ರಮುಖ ನಾಯಕರಿಗೂ ಮನವರಿಕೆ ಮಾಡಿಕೊಡಲು ಹಿರಿಯ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿ.ಕೆ. ಶಿವಕುಮಾರ್ ಜತೆಯಾಗಿಯೇ ಸೋಮವಾರ ಸಂಜೆ ದೆಹಲಿಗೆ ತೆರಳಿದರು.
ಐದು ವರ್ಷ ಸಂಪೂರ್ಣವಾಗಿ ಹುದ್ದೆ ನೀಡುವ ಬಗ್ಗೆ ಹೈಕಮಾಂಡ್ ತರಾತುರಿಯಲ್ಲಿ ನಿರ್ಧಾರ ಕೈಗೊಂಡು ಅದನ್ನು ಪ್ರಕಟಿಸುವ ಅಗತ್ಯವಿರಲಿಲ್ಲ ಎಂಬುದು ರಾಜ್ಯ ನಾಯಕತ್ವದ ನಿಲುವು. ಮೈತ್ರಿಕೂಟ ಯಶಸ್ವಿ ಯಾಗಬೇಕು ಎಂಬ ಕಾರಣಕ್ಕೆ ಹೈಕಮಾಂಡ್ ಈ ನಿಲುವು ತೆಗೆದುಕೊಂಡಿದೆ. ರಾಜ್ಯ ಉಸ್ತುವಾರಿ ವೇಣುಗೋಪಾಲ್ ಅವರು ಈ ವಿಷಯ ಪ್ರಕಟಿಸಿದ್ದಾರೆ. ಆದರೆ, ಇದರಿಂದ ರಾಜ್ಯದಲ್ಲಿ ಪಕ್ಷದ ಮೇಲೆ ಮಾರಕ ಪರಿಣಾಮವಾಗುವ ಸಾಧ್ಯತೆಯಿದೆ. ಹೀಗಾಗಿ ಈ ತೀರ್ಮಾನವನ್ನು ಪುನರ್ ಪರಿಶೀಲಿಸುವ ಮನವಿಯನ್ನು ರಾಜ್ಯ ನಾಯಕರು ಹೈಕಮಾಂಡ್ ಮುಂದೆ ಮಂಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.