ಸಾಮೂಹಿಕ ರಾಜೀನಾಮೆಗೆ ಮುಂದಾದ ಕಾಂಗ್ರೆಸ್ ಮುಖಂಡರು
ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ಕೈತಪ್ಪಿದ್ದನ್ನು ಖಂಡಿಸಿ ಕೆಲ ಕಾಂಗ್ರೆಸ್ ನಾಯಕರ ಬೆಂಬಲಿಗರ ಪ್ರತಿಭಟನೆಗಳು ರಾಜ್ಯದಲ್ಲಿ ಭಾನುವಾರವೂ ಮುಂದುವರಿದಿದ್ದು, ಪಕ್ಷದ ಇನ್ನಷ್ಟುಪದಾಧಿಕಾರಿಗಳು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಬೆಂಗಳೂರು : ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ಕೈತಪ್ಪಿದ್ದನ್ನು ಖಂಡಿಸಿ ಕೆಲ ಕಾಂಗ್ರೆಸ್ ನಾಯಕರ ಬೆಂಬಲಿಗರ ಪ್ರತಿಭಟನೆಗಳು ರಾಜ್ಯದಲ್ಲಿ ಭಾನುವಾರವೂ ಮುಂದುವರಿದಿದ್ದು, ಪಕ್ಷದ ಇನ್ನಷ್ಟುಪದಾಧಿಕಾರಿಗಳು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಬೆಳಗಾವಿಯ ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಹಾವೇರಿ ಹಾಗೂ ಬೆಳಗಾವಿಯ ಬೈಲಹೊಂಗಲದಲ್ಲಿ ಬೆಂಬಲಿಗರು ರಸ್ತೆ ತಡೆದು, ಟೈಯರ್ಗೆ ಬೆಂಕಿ ಹಚ್ಚಿ ಪ್ರತಿಭಟಿಸಿದ್ದಾರೆ. ಜತೆಗೆ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ರಾಜ್ಯ ಉಸ್ತುವಾರಿ ವೇಣುಗೋಪಾಲ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತಿತರ ಮುಖಂಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ವಿಜಯಪುರ ಜಿಲ್ಲೆಯ ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಬಬಲೇಶ್ವರದಲ್ಲಿ ನಡೆಯುತ್ತಿರುವ ನಿರಶನದಲ್ಲಿ ಅಂಬಿಗರ ಚೌಡಯ್ಯ ಸಂಘಟನೆ ಸದಸ್ಯರು ಭಾಗವಹಿಸಿ ಬೆಂಬಲಿಸಿದ್ದಾರೆ. ಈ ನಡುವೆ, ಎಂ.ಬಿ.ಪಾಟೀಲರನ್ನು ಬೆಂಬಲಿಸಿ ನಡೆಯುತ್ತಿರುವ ಈ ನಿರಶನ 4ನೇ ದಿನಕ್ಕೆ ಕಾಲಿಟ್ಟಿದೆ.
ಖಂಡ್ರೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿ: ಬೀದರ್ ಜಿಲ್ಲೆಯ ಭಾಲ್ಕಿ ಶಾಸಕ ಈಶ್ವರ ಖಂಡ್ರೆ ಅವರಿಗೆ ಸಚಿವ ಸ್ಥಾನ ನೀಡದಿರುವುದರಿಂದ ಬೇಸತ್ತು ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಉಪಾಧ್ಯಕ್ಷರು, ಪಕ್ಷದ ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡುತ್ತಿದ್ದೇವೆ ಎಂದು ರಾಜ್ಯ ಉಪಾಧ್ಯಕ್ಷ ಪಪ್ಪು ಪಾಟೀಲ್ ಖಾನಾಪೂರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಖಂಡ್ರೆ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ ಮಾತ್ರ ಜಿಲ್ಲೆಯಲ್ಲಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಉಳಿಯಲಿದೆ ಎಂದು ಡಾ.ಜಿ.ಪರಮೇಶ್ವರ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದೇವೆ ಎಂದು ಅವರು ಮಾಹಿತಿ ನೀಡಿದರು.