9 ಕಾಂಗ್ರೆಸ್ ಮುಖಂಡರ ಉಚ್ಛಾಟನೆಗೆ ಯತ್ನ..?
ಸಚಿವ ಸಂಪುಟ ಪುನಾರಚನೆಯಿಂದ ಕಾಂಗ್ರೆಸ್ನಲ್ಲಿ ಅತೃಪ್ತಿ ಭುಗಿಲೆದ್ದಿರುವ ಬೆನ್ನಲ್ಲೇ ಇದೀಗ 9 ಮಂದಿಯನ್ನು ಉಚ್ಛಾಟನೆ ಮಾಡುವ ಬಗ್ಗೆ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರು : ಸಚಿವ ಸಂಪುಟ ಪುನಾರಚನೆಯಿಂದ ಕಾಂಗ್ರೆಸ್ನಲ್ಲಿ ಅತೃಪ್ತಿ ಭುಗಿಲೆದ್ದಿರುವ ಈ ಹಂತದಲ್ಲೇ ಕಳೆದ ವಿಧಾನಸಭಾ ಚುನಾವಣೆ ವೇಳೆಯ ಪಕ್ಷವಿರೋಧಿ ಚಟುವಟಿಕೆ ನಡೆಸಿದ್ದ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಸದಸ್ಯರು ಸೇರಿದಂತೆ ಒಂಭತ್ತು ಮಂದಿಯನ್ನು ಪಕ್ಷದಿಂದ ಉಚ್ಚಾಟಿಸುವ ಮೂಲಕ ಅತೃಪ್ತರಿಗೆ ಎಚ್ಚರಿಕೆಯ ಸಂದೇಶ ನೀಡುವ ಪ್ರಯತ್ನವನ್ನು ಪಕ್ಷ ಮಾಡಿದೆ.
ಸೋಮವಾರ ನಗರದ ಪಕ್ಷದ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಪಕ್ಷವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯ್ತಿಯ ಒಬ್ಬರು, ಮೈಸೂರು ಗ್ರಾಮಾಂತರ ಜಿಲ್ಲಾ ಪಂಚಾಯ್ತಿಯ ಇಬ್ಬರು ಮತ್ತು ನಂಜನಗೂಡು ತಾಲೂಕು ಪಂಚಾಯ್ತಿ ಅಧ್ಯಕ್ಷ ಸೇರಿದಂತೆ ಐವರು ಸದಸ್ಯರು ಹಾಗೂ ಮೂಡಿಗೆರೆ ಎಪಿಎಂಸಿ ಮಾಜಿ ಅಧ್ಯಕ್ಷ ಸೇರಿ ಒಟ್ಟು ಒಂಬತ್ತು ಮಂದಿ ಕಾಂಗ್ರೆಸ್ಸಿಗರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ತಿಳಿಸಿದರು.
2018ರ ವಿಧಾನಸಭಾ ಚುನಾವಣೆ ವೇಳೆ ದಾಖಲಾಗಿದ್ದ ಪಕ್ಷ ವಿರೋಧಿ ಚಟುವಟಿಕೆ ದೂರುಗಳ ಬಗ್ಗೆ ವಿಚಾರಣೆ ನಡೆಸಲು ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಅವರ ನೇತೃತ್ವದಲ್ಲಿ ಕೆಪಿಸಿಸಿ ಶಿಸ್ತು ಪಾಲನಾ ಸಮಿತಿ ರಚಿಸಲಾಗಿತ್ತು. ಈ ಸಮಿತಿ ನೀಡಿದ ಶಿಫಾರಸಿನ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಇನ್ನು ಮುಂದೆಯೂ ರಾಜ್ಯದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳು, ಪಕ್ಷದ ಟಿಕೆಟ್ ಆಕಾಂಕ್ಷಿಗಳು ಎಷ್ಟುಪ್ರಾಮಾಣಿಕವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ, ಪಕ್ಷಕ್ಕೆ ಎಷ್ಟುಶಿಸ್ತುಬದ್ಧವಾಗಿ ನಡೆದುಕೊಂಡಿದ್ದಾರೆ ಮತ್ತು ಪಕ್ಷದ ವರ್ಚಸ್ಸಿಗೆ ಧಕ್ಕೆ ಉಂಟಾಗುವಂತೆ ನಡೆದುಕೊಂಡಿದ್ದಾರೆಯೇ ಎಂಬುದನ್ನು ಗಮನಿಸಲಾಗುವುದು. ಯಾರೇ ಈ ಮಾನದಂಡ ಉಲ್ಲಂಘಿಸಿದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಪಕ್ಷ ವಿರೋಧಿ ಚಟುವಟಿಕೆ, ಬಹಿರಂಗ ಹೇಳಿಕೆ ನೀಡುವಂತಹ ಅಶಿಸ್ತು ತಡೆಯಲು ಹೈಕಮಾಂಡ್ ಎಲ್ಲ ಪ್ರದೇಶ ಕಾಂಗ್ರೆಸ್ಗೂ ಕಟ್ಟುನಿಟ್ಟಿನ ಸೂಚನೆ ನೀಡಿದೆ. ರಾಜಸ್ಥಾನದಲ್ಲಿ ಕೂಡ ಇಂತಹ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಕೆಲ ಶಾಸಕರಿಗೆ ಸಚಿವ ಸ್ಥಾನ ನೀಡದಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸೂಚಿಸಿದ್ದಾರೆ. ರಾಜ್ಯದಲ್ಲೂ ಕೂಡ ಯಾರೇ ಅಶಿಸ್ತು ಪ್ರದರ್ಶಿಸಿದರೂ ಇದೇ ನೀತಿ ಪಾಲಿಸಲಾಗುವುದು ಎಂದರು.
2018ರ ಚುನಾವಣೆ ವೇಳೆ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಬಗ್ಗೆ ಶಿಸ್ತು ಪಾಲನಾ ಸಮಿತಿ ಮುಂದೆ 44 ದೂರುಗಳು ದಾಖಲಾಗಿದ್ದವು. ಇದರಲ್ಲಿ ಕಳೆದ ವಿಧಾನಸಭಾ ಚುನಾವಣೆ ವೇಳೆ ದಾಖಲಾಗಿದ್ದ 39 ದೂರುಗಳಲ್ಲಿ ಹೊಸಕೋಟೆ, ಟಿ.ನರಸೀಪುರ, ನಂಜನಗೂಡು ಮತ್ತು ಮೂಡಿಗೆರೆ ಕ್ಷೇತ್ರಗಳಲ್ಲಿ 9 ಮುಖಂಡರ ವಿರುದ್ಧ ಪಕ್ಷ ವಿರೋಧಿ ಚಟುವಟಿಕೆ ಸಾಬೀತಾಗಿದೆ. ಹಾಗಾಗಿ ಅವರನ್ನು ಉಚ್ಚಾಟಿಸಲಾಗಿದೆ. 18 ಪ್ರಕರಣಗಳಲ್ಲಿ ಮತ್ತೆ ತಪ್ಪು ಮರುಕಳಿಸದಂತೆ ಎಚ್ಚರಿಸಲಾಗಿದೆ. ಇನ್ನೂ 13 ಪ್ರಕರಣಗಳಲ್ಲಿ ವಿವಿಧ ಸಲಹೆ ನೀಡಿ ದೂರು ಮುಕ್ತಾಯಗೊಳಿಸಲಾಗಿದೆ ಎಂದು ವಿವರಿಸಿದರು.
ಉಚ್ಚಾಟಿತ 9 ಮುಖಂಡರು
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯ್ತಿ ಸದಸ್ಯ ಎಂ.ಮಂಜುನಾಥ್, ಮೈಸೂರು ಗ್ರಾಮಾಂತರ ಜಿಲ್ಲಾ ಪಂಚಾಯ್ತಿ ಸದಸ್ಯ ಎಂ.ಸುಧೀರ್, ಮೈಸೂರು ಗ್ರಾಮಾಂತರ ಜಿಲ್ಲಾ ಪಂಚಾಯ್ತಿ ಸದಸ್ಯ ಮಧು ಸುಬ್ಬಣ್ಣ, ನಂಜನಗೂಡು ತಾಲೂಕು ಪಂಚಾಯ್ತಿ ಅಧ್ಯಕ್ಷ ಬಿ.ಎಸ್.ಮಹದೇವಪ್ಪ, ಸದಸ್ಯರಾದ ಶಿವಣ್ಣ, ಗೀತಾ, ದೇವಮ್ಮ, ಮಾದಪ್ಪ ಮತ್ತು ಮೂಡಿಗೆರೆಯ ಮಾಜಿ ಎಪಿಎಂಸಿ ಅಧ್ಯಕ್ಷ ಎಂ.ಸಿ.ನಾಗೇಶ್