ಐದಕ್ಕೆ ಐದೂ ಸ್ಥಾನಗಳಲ್ಲಿ ಕಾಂಗ್ರಸ್ ಪಕ್ಷವು ವಿಯವನ್ನು ಸಾಧಿಸಲಿದೆ ಎಂದು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು : ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆ ನಂತರ ಮೈತ್ರಿ ಸರ್ಕಾರ ಇನ್ನಷ್ಟುದೃಢವಾಗಲಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಭವಿಷ್ಯ ನುಡಿದಿದ್ದಾರೆ.

Add Asianetnews Kannada as a Preferred SourcegooglePreferred

ಬುಧವಾರ ವಿಧಾನಸೌಧ ಮುಂಭಾಗ ನಾಸಿಕ್‌ನಲ್ಲಿರುವ ದೀಕ್ಷಾ ಭೂಮಿಗೆ ತೆರಳಲಿರುವ ಯಾತ್ರಾರ್ಥಿಗಳ ಬೀಳ್ಕೊಡುಗೆ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಉಭಯ ಪಕ್ಷಗಳು ಚರ್ಚಿಸಿಯೇ ಕ್ಷೇತ್ರವನ್ನು ಹಂಚಿಕೊಂಡಿದ್ದೇವೆ. ಐದು ಕ್ಷೇತ್ರಗಳಲ್ಲೂ ಮೈತ್ರಿ ಪಕ್ಷಗಳ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದರು.

ಕಾಂಗ್ರೆಸ್‌ ಗೆಲ್ಲಲು ಸಾಧ್ಯವಿಲ್ಲ ಎಂಬ ಕಾರಣದಿಂದ ಶಿವಮೊಗ್ಗದಲ್ಲಿ ಜೆಡಿಎಸ್‌ಗೆ ಕ್ಷೇತ್ರ ಬಿಟ್ಟುಕೊಟ್ಟಿಲ್ಲ. ಇದೆಲ್ಲ ಯಡಿಯೂರಪ್ಪ, ಶೋಭಾ ಕರಂದ್ಲಾಜೆ ಅವರ ವಿಶ್ಲೇಷಣೆ. ರಾಜಕೀಯ ಲೆಕ್ಕಾಚಾರ ಹಾಕಿಕೊಂಡು ಎರಡು ಪಕ್ಷಗಳು ಚುನಾವಣೆಗೆ ಸ್ಪರ್ಧಿಸಿವೆ. ಕ್ಷೇತ್ರಗಳ ಹಂಚಿಕೆ ಅಥವಾ ಅಭ್ಯರ್ಥಿಗಳ ಆಯ್ಕೆ ವಿಷಯದಲ್ಲಿ ಪಕ್ಷದಲ್ಲಿ ಭಿನ್ನಮತ ಅಥವಾ ಅಸಮಾಧಾನ ಇಲ್ಲ. ಎಲ್ಲರ ಜೊತೆ ಚರ್ಚಿಸಿ ಕಾಂಗ್ರೆಸ್‌ನಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ ಎಂದು ಹೇಳಿದರು.

ಮೈಸೂರು ದಸರಾ ಉತ್ಸವಕ್ಕೆ ಕಾಂಗ್ರೆಸ್‌ ಶಾಸಕರನ್ನು ಆಹ್ವಾನಿಸಿಲ್ಲ ಎಂಬ ಮೈಸೂರಿನ ಕಾಂಗ್ರೆಸ್‌ ಶಾಸಕರ ಹೇಳಿಕೆಯನ್ನು ನಾನು ಗಮನಿಸಿದ್ದೇನೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಮಾತನಾಡಿದ್ದೇನೆ. ಸಂಪರ್ಕ ಕೊರತೆಯಿಂದ ಈ ರೀತಿ ಆಗಿದೆ ಅಷ್ಟೆ. ಉಸ್ತುವಾರಿ ಸಚಿವರು ಸಹ ಎಲ್ಲವನ್ನು ಸರಿಪಡಿಸುವುದಾಗಿ ತಿಳಿಸಿದ್ದಾರೆ ಎಂದರು. ಜತೆಗೆ ಈ ಬಾರಿ ದಸರಾ ಉತ್ಸವದ ಹಿನ್ನೆಲೆಯಲ್ಲಿ ಯಾವುದೇ ಉಪ ಸಮಿತಿ ರಚಿಸಿಲ್ಲ. ಹೀಗಾಗಿ ಕಾಂಗ್ರೆಸ್‌ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಅವಕಾಶ ಸಿಕ್ಕಿಲ್ಲ. ನಾಡಹಬ್ಬದಲ್ಲಿ ರಾಜಕೀಯ ಬೆರೆಸುವುದು ಸರಿಯಲ್ಲ ಎಂದು ಪರಮೇಶ್ವರ್‌ ಹೇಳಿದರು. ಈ ಸಂದ​ರ್ಭ​ದಲ್ಲಿ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್‌ ಖರ್ಗೆ ಇದ್ದ​ರು.