Samarth Shamanur nomination:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಹಂಚಿಕೆ ಕಗ್ಗಂಟಾಗಿದೆ. ಅಲ್ಪಸಂಖ್ಯಾತರ ಒತ್ತಡದ ನಡುವೆಯೇ, ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ ಶಾಮನೂರು ಅವರು ಟಿಕೆಟ್ ಘೋಷಣೆಗೂ ಮುನ್ನವೇ ನಾಮಪತ್ರ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.
ಟಿಕೆಟ್ ಘೋಷಣೆಗೂ ಮೊದಲೇ ನಾಮಪತ್ರ ಸಲ್ಲಿಸಲು ಮುಂದಾದ ಸಮರ್ಥ
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ವಿಚಾರ ಕಾಂಗ್ರೆಸ್ ಪಾಲಿಗೆ ಕಗ್ಗಂಟಾಗಿದೆ. ಅಲ್ಪಸಂಖ್ಯಾತ ಸಮುದಾಯದ ಜನರು ಇಲ್ಲಿ ನಮ್ಮ ಸಮುದಾಯದ ಜನರಿಗೇ ಟಿಕೆಟ್ ನಿಡಬೇಕು ಎಂದು ಪಟ್ಟು ಹಿಡಿದಿರುವುದರಿಂದ ಮತ್ತೊಂದೆಡೆ ಹಾಲಿ ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗನಿಗೇ ಟಿಕೆಟ್ ನೀಡಬೇಕು ಎಂದು ಅವರ ಅಭಿಮಾನಿಗಳು ಒತ್ತಾಯಿಸ್ತಿರೋದ್ರಿಂದ ಇಲ್ಲಿನ ಟಿಕೆಟ್ ಘೋಷಣೆ ಕಾಂಗ್ರೆಸ್ಗೆ ಬಿಸಿತುಪ್ಪದಂತಾಗಿದೆ.
ಆದರೆ ಟಿಕೆಟ್ ಘೋಷಣೆಯ ಗೊಂದಲದ ನಡುವೆಯೇ ಇಂದು ಈ ದಾವಣಗೆರೆ ವಿಧಾನಸಭಾ ಕ್ಷೇತ್ರಕ್ಕೆ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಹಾಲಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಅವರ ಪುತ್ರ ಸಮರ್ಥ ಶಾಮನೂರು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ ಎಂದು ವರದಿಯಾಗಿದೆ. ಕಾಂಗ್ರೆಸ್ನ ಟಿಕೆಟ್ ಘೋಷಣೆಯಾಗುವ ಮೊದಲೇ ಸಮರ್ಥ ಶಾಮನೂರು ನಾಮಪತ್ರ ಸಲ್ಲಿಕೆಗೆ ಸಿದ್ಧತೆ ನಡೆಸಿದ್ದಾರೆ ಎಂಬ ಸುದ್ದಿಯೊಂದು ಕ್ಷೇತ್ರದಲ್ಲಿ ಹರಿದಾಡುತ್ತಿದೆ.
ಇಂದು ಶುಭದಿನ ಅಮೃತ ಸಿದ್ಧಿಯೋಗ ಹಿನ್ನೆಲೆ ನಾಮಪತ್ರ ಸಲ್ಲಿಕೆಗೆ ಸಿದ್ಧತೆ
ಏಪ್ರಿಲ್ 9ರಂದು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆ ನಡೆಯಲಿದ್ದು, ಹೀಗಾಗಿ ಇಂದು ಸಾಂಕೇತಿಕವಾಗಿ ಸಮರ್ಥ ಶಾಮನೂರು ಎರಡು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ ಎಂದು ವರದಿಯಾಗಿದೆ. ಇಂದು ಶುಭದಿನ ಅಮೃತ ಸಿದ್ಧಿಯೋಗ ಹಿನ್ನೆಲೆ ನಾಮಪತ್ರ ಸಲ್ಲಿಕೆಗೆ ಸಿದ್ಧತೆ ನಡೆಯಲಿದೆ. ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಒಂದು, ಪಕ್ಷೇತರ ಅಭ್ಯರ್ಥಿಯಾಗಿ ಇನ್ನೊಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.
ಕುಟುಂಬದ ಮನೆ ದೇವರ ದರ್ಶನ ಪಡೆದು ನಾಮಪತ್ರ ಸಲ್ಲಿಕೆ
ಈ ಹಿನ್ನೆಲೆ ಇಂದು ಬೆಳಗ್ಗೆ 6.30ಕ್ಕೆ ಸಮರ್ಥ ಶಾಮನೂರು ಅವರು ತಮ್ಮ ಕುಟುಂಬದ ಮನೆ ದೇವರ ದರ್ಶನ ಪಡೆದು ಬಂದಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಹಿರೇಎಮ್ಮಿಗನೂರಿನಲ್ಲಿರುವ ತಮ್ಮ ಮನೆ ದೇವರಾದ ಕಲ್ಲೇಶ್ವರ ದೇವಸ್ಥಾನಕ್ಕೆ ತೆರಳಿ ಅವರು ದೇವರ ದರ್ಶನ ಪಡೆದು ಬಂದಿದ್ದಾರೆ.
ದಾವಣಗೆರೆ ಟಿಕೆಟ್ ಹಂಚಿಕೆ ಕಗ್ಗಂಟು: ಇಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಸಭೆ
ಇತ್ತ ದಾವಣಗೆರೆಯಲ್ಲಿ ತಮ್ಮ ಸಮುದಾಯದ ನಾಯಕರಿಗೆ ಟಿಕೆಟ್ ನೀಡಬೇಕು ಎಂದು ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯ ತೀವ್ರ ಒತ್ತಡ ಹೇರಿದೆ. ಈ ಹಿನ್ನೆಲೆ ಇಂದು ಬೆಂಗಳೂರಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲಾ ಅವರು ಸಭೆ ನಡೆಸಲಿದ್ದಾರೆ. ಇದೆಲ್ಲದರ ಮಧ್ಯೆ ಇಂದು ಸಮರ್ಥ ಶಾಮನೂರು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಮಧ್ಯಾಹ್ನ 12 ಗಂಟೆ ಬಳಿಕ(ರಾಹು ಕಾಲ ಬಳಿಕ) ನಾಮಪತ್ರ ಸಲ್ಲಿಕೆಗೆ ಸಿದ್ದತೆ ನಡೆದಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: ದಾವಣಗೆರೆ ದಕ್ಷಿಣ ಬಿಜೆಪಿ ಟಿಕೆಟ್ ಸಿಗ್ತಿದ್ದಂತೆ ಹಮಾಲಿಯಾಗಿದ್ದ ತಂದೆಯ ನೆನೆದು ಭಾವುಕರಾದ ಶ್ರೀನಿವಾಸ್ ದಾಸಕರಿಯಪ್ಪ
ಈ ಕ್ಷೇತ್ರಕ್ಕೆ ಬಿಜೆಪಿ ಈಗಾಗಲೇ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದು, ಶ್ರೀನಿವಾಸ ದಾಸಕರಿಯಪ್ಪ ಅವರು ಇಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಕ್ಷೇತ್ರದ ಅನೇಕ ಹಿರಿಯ ಬಿಜೆಪಿ ನಾಯಕರನ್ನು ಅವರು ಈಗಾಗಲೇ ಭೇಟಿ ಮಾಡಿ ಬೆಂಬಲ ನೀಡುವಂತೆ ಕೋರಿದ್ದಾರೆ. ಈ ವಿಧಾನಸಭಾ ಕ್ಷೇತ್ರದಲ್ಲಿ ಏಪ್ರಿಲ್ 9ರಂದು ಚುನಾವಣೆ ನಡೆಯಲಿದ್ದು, ಮೇ4 ರಂದು ಫಲಿತಾಂಶ ಹೊರಬರಲಿದೆ.
ಇದನ್ನೂ ಓದಿ: ದಾವಣಗೆರೆಯಲ್ಲಿ ಕೊನೆಕ್ಷಣದಲ್ಲಿ ಏನಾದರೂ ಆಗಬಹುದು: ಶಾಮನೂರು ಕುಟುಂಬಕ್ಕೆ ಬಿಜೆಪಿ ಟಿಕೆಟ್ ಕೊಟ್ಟರು ಅಚ್ಚರಿಯಿಲ್ಲ: ಯತ್ನಾಳ್


