ಐದು ಜಿಲ್ಲೆಗಳಿಗೆ ಅಪ್ಪಳಿಸಲಿದೆ ಭಾರೀ ಮಳೆ : ಜನರ ಸ್ಥಳಾಂತರ
ವಾಯುಭಾರ ಕುಸಿತದಿಂದ ಭಾರೀ ಚಂಡಮಾರುತ ಅಪ್ಪಳಿಸಿದ್ದು ಐದು ಜಿಲ್ಲೆಗಳಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಮಳೆ ಸುರಿದು ಅವಾಂತರ ಸೃಷ್ಟಿ ಮಾಡಲಿದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.
ಒಡಿಶಾ : ಬಂಗಾಳ ಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮವಾಗಿ ಆಂಧ್ರ ಪ್ರದೇಶ ಹಾಗೂ ಒಡಿಶಾ ಕರಾವಳಿ ತೀರಕ್ಕೆ ತಿತಲಿ ಚಂಡಮಾರುತ ಅಪ್ಪಳಿಸಿದೆ. ಇದರಿಂದ ಒಡಿಶಾ ಹಾಗೂ ಆಂಧ್ರ ಪ್ರದೇಶದಲ್ಲಿ ಭಾರೀ ಮಳೆ ಸುರಿಯುವ ಎಚ್ಚರಿಕೆ ನಿಡಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಮಳೆ ಸುರಿಯುವ ಸಾಧ್ಯತೆ ಇದ್ದು ಈ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಒಡಿಶಾದಲ್ಲಿ ಜನರನ್ನು ಸ್ಥಳಾಂತರ ಮಾಡಲಾಗುತ್ತಿದೆ.
ಒಡಿಶಾದ ಗಂಜಾಮ್, ಪುರಿ, ಖುರ್ದಾ, ಕೇಂದ್ರ ಪರಾ, ಜಗತ್ ಸಿಂಗ್ ಪುರ ಜಿಲ್ಲೆಯಲ್ಲಿ ಜನರನ್ನು ಶೀಘ್ರವಾಗಿ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡುವಂತೆ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಸೂಚಿಸಿದ್ದಾರೆ.
ಈಗಾಗಲೇ ಸುರಕ್ಷಿತ ಪ್ರದೇಶಗಳಿಗೆ ಜನರನ್ನು ಸ್ಥಳಾಂತರ ಮಾಡುವ ಪ್ರಕ್ರಿಯೆ ಆರಂಭವಾಗಿದ್ದು, ತಿತಲಿ ಚಂಡಮಾರುತ ಅಪ್ಪಳಿಸಿದ ಪರಿಣಾಮ ಭಾರಿ ಪ್ರಮಾಣದಲ್ಲಿ ಭೂ ಕುಸಿತದಂತಹ ಅಪಾಯಕಾರಿ ವಿದ್ಯಮಾನಗಳು ಸಂಭವಿಸುವ ಸಾಧ್ಯತೆ ಇದೆ ಎಂದು ಹವಾಮಾನ ಎಚ್ಚರಿಕೆ ನೀಡಲಾಗಿದೆ.