ಉನ್ನತ ಶಿಕ್ಷಣ ಇಲಾಖೆಯು ಸಿಬ್ಬಂದಿಗೆ ಪಾವತಿಸಿರುವ ತುಟ್ಟಿಭತ್ಯೆ ಹಾಗೂ ಇತರೆ ಭತ್ಯೆಗಳನ್ನು ಮರು ಪಾವತಿ ಮಾಡುವಂತೆ ಹೊರಡಿಸಿದ್ದ ಆದೇಶವನ್ನು ತಾತ್ಕಾಲಿಕವಾಗಿ ತಡೆಹಿಡಿಯುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಮೌಲ್ಯಮಾಪನ ಬಹಿಷ್ಕರಿಸಿ ನಡೆಸುತ್ತಿದ್ದ ಪ್ರತಿಭಟನೆಯನ್ನು ಪ್ರಾಧ್ಯಾಪಕರು ಹಿಂಪಡೆದಿದ್ದಾರೆ.

ಬೆಂಗಳೂರು (ಡಿ.30): ಉನ್ನತ ಶಿಕ್ಷಣ ಇಲಾಖೆಯು ಸಿಬ್ಬಂದಿಗೆ ಪಾವತಿಸಿರುವ ತುಟ್ಟಿಭತ್ಯೆ ಹಾಗೂ ಇತರೆ ಭತ್ಯೆಗಳನ್ನು ಮರು ಪಾವತಿ ಮಾಡುವಂತೆ ಹೊರಡಿಸಿದ್ದ ಆದೇಶವನ್ನು ತಾತ್ಕಾಲಿಕವಾಗಿ ತಡೆಹಿಡಿಯುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಮೌಲ್ಯಮಾಪನ ಬಹಿಷ್ಕರಿಸಿ ನಡೆಸುತ್ತಿದ್ದ ಪ್ರತಿಭಟನೆಯನ್ನು ಪ್ರಾಧ್ಯಾಪಕರು ಹಿಂಪಡೆದಿದ್ದಾರೆ. ಶನಿವಾರದಿಂದ ಮೌಲ್ಯಮಾಪನ ಕಾರ್ಯ ಆರಂಭವಾಗಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನಲ್ಲಿ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಅವರು ಪ್ರಾಧ್ಯಾಪಕರೊಂದಿಗೆ ನಡೆಸಿದ ಸಭೆಯಲ್ಲಿ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ನೀಡಿದ್ದು, ಪ್ರಾಧ್ಯಾಪಕರು ಪ್ರತಿಭಟನೆಯಿಂದ ಹಿಂದೆ ಸರಿದಿದ್ದಾರೆ. ಸಭೆಯಲ್ಲಿ ಮಾತನಾಡಿದ ಸಚಿವ ಬಸವರಾಜ ರಾಯರೆಡ್ಡಿ, ತುಟ್ಟಿಭತ್ಯೆ ವಿಚಾರ ಆರ್ಥಿಕ ಇಲಾಖೆಯಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕಿದೆ. ಉನ್ನತ ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶ ಪರಿಶೀಲನೆ ಹಂತದಲ್ಲಿದೆ.

ತುಟ್ಟಿ ಭತ್ಯೆ ವಸೂಲಾತಿ ಕ್ರಮವನ್ನು ಸರ್ಕಾರದ ಮುಂದಿನ ನಿರ್ದೇಶನದವರೆಗೆ ತಾತ್ಕಾಲಿಕವಾಗಿ ತಡೆಹಿಡಿಯುವಂತೆ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರಿಗೆ ಸೂಚಿಸುವುದಾಗಿ ತಿಳಿಸಿದರು. ಸಚಿವರ ಭರವಸೆ ಹಿನ್ನೆಲೆಯಲ್ಲಿ ಪ್ರಾಧ್ಯಾಪಕರು ಶನಿವಾರದಿಂದ ಮೌಲ್ಯಮಾಪನ ಆರಂಭಿಸಲಿದ್ದಾರೆ ಎಂದು ಕಾಲೇಜು ಪ್ರಾಧ್ಯಾಪಕರ ಸಂಘದ ಅಧ್ಯಕ್ಷ ಪ್ರಕಾಶ್ ತಿಳಿಸಿದ್ದಾರೆ.

2006 ಪರಿಷ್ಕೃತ ವೇತನ ಶ್ರೇಣಿಯಲ್ಲಿ ದಿನಾಂಕ 2006ರ ಜ.1ರಿಂದ 2009ರ ಸೆ.23ರ ವರೆಗೆ ಯುಜಿಸಿ ಹಿಂಬಾಕಿ ಮೊತ್ತದಲ್ಲಿ ಪಡೆದಿರುವ ತುಟ್ಟಿಭತ್ಯೆ ವಸೂಲಿ ಹಿಂಪಡೆಯಬೇಕೆಂಬ ಪ್ರಮುಖ ಬೇಡಿಕೆ ಮುಂದಿಟ್ಟುಕೊಂಡು ಪ್ರಾಧ್ಯಾಪಕರು ಡಿ.26ರಿಂದ ಪ್ರತಿಭಟನೆ ನಡೆಸುತ್ತಿದ್ದರು. ಸಭೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಸಿ.ರಾಮಣ್ಣ, ಎಂ.ಆರ್. ಶಶಿಧರ್ ಪಾಲ್ಗೊಂಡಿದ್ದರು.