ಚಾಮುಂಡಿಬೆಟ್ಟಕ್ಕೆ ತೆರಳಿ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌, ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ ಭೇಟಿ ನೀಡಿ ಪೂಜೆ ಸಲ್ಲಿಸಿದರು. 

ಮೈಸೂರು : ಕಡೇ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ನಾಡದೇವತೆ ಶ್ರೀ ಚಾಮುಂಡೇಶ್ವರಿಗೆ ವಿಶೇಷ ಪೂಜೆ, ನೈವೇದ್ಯ ನೆರವೇರಿತು. ಮುಂಜಾನೆಯಿಂದಲೇ ವಿಶೇಷ ಪೂಜೆ ಇದ್ದ ಹಿನ್ನೆಲೆಯಲ್ಲಿ ಗುರುವಾರ ತಡರಾತ್ರಿಯಿಂದಲೇ ಬೆಟ್ಟದಲ್ಲಿ ಭಕ್ತ ಸಾಗರ ಸೇರಿತ್ತು.

Add Asianetnews Kannada as a Preferred SourcegooglePreferred

ಮುಂಜಾನೆ 4 ಗಂಟೆಯಿಂದ ರಾತ್ರಿ 10 ಗಂಟೆವರೆಗೂ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ವಿಶೇಷ ಪೂಜೆ ಹಿನ್ನೆಲೆಯಲ್ಲಿ ದೇವರಿಗೆ ಸಿಂಹವಾಹಿನಿ ಅಲಂಕಾರ ಮಾಡಲಾಗಿತ್ತು. ಗರ್ಭಗುಡಿಯಿಂದ ಮುಖ್ಯದ್ವಾರದವರೆಗೆ ಹೂವಿನಿಂದ ದೇವಾಲಯವನ್ನು ಅಲಂಕರಿಸಲಾಗಿತ್ತು.

ಜತೆಗೆ, ಲಲಿತಮಹಲ್‌ ಹೆಲಿಪ್ಯಾಡ್‌ನಿಂದ ಚಾಮುಂಡಿಬೆಟ್ಟಕ್ಕೆ ಉಚಿತ ಬಸ್‌ ಸೌಲಭ್ಯ ಕಲ್ಪಿಸಲಾಗಿತ್ತು. ಮೆಟ್ಟಿಲು ಹತ್ತಿಯೂ ಸಾವಿರಾರು ಮಂದಿ ಭಕ್ತರು ದೇವಾಲಯಕ್ಕೆ ಆಗಮಿಸಿದ್ದು, ಅನೇಕರು ಪ್ರತಿ ಮೆಟ್ಟಿಲಿಗೂ ಹರಿಶಿಣ, ಕುಂಕುಮವನ್ನಿಟ್ಟು ಪೂಜೆ ಸಲ್ಲಿಸಿ ಬೆಟ್ಟವನ್ನು ಏರಿದರೆ, ಮತ್ತೆ ಕೆಲವರು ಹೆಜ್ಜೆ ನಮಸ್ಕಾರದ ಮೂಲಕ ಹರಕೆ ಸಲ್ಲಿಸಿದರು.

ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟಕ್ಕೆ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌, ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮತ್ತೊಂದೆಡೆ ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್‌ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಭಕ್ತರಿಗೆ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು. ಸಚಿವ ಸಾ.ರಾ.ಮಹೇಶ್‌ ಕುಟುಂಬ ಸಮೇತರಾಗಿ ಆಗಮಿಸಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.