ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸುಷ್ಮಾ ಸ್ವರಾಜ್ ಸ್ಪರ್ಧೆ ಇಲ್ಲ! ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ ಬಿಜೆಪಿ ಹಿರಿಯ ನಾಯಕಿ! ಅನಾರೋಗ್ಯದ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ಸ್ಪರ್ಧೆ ಮಾಡದಿರುವ ನಿರ್ಧಾರ! ಮಧ್ಯಪ್ರದೇಶದ ವಿಧಿಶಾ ಕ್ಷೇತ್ರದ ಬಿಜೆಪಿ ಸಂಸದೆ ಸುಷ್ಮಾ ಸ್ವರಾಜ್! ಸಕ್ಕರೆ ಕಾಯಿಲೆ ಮತ್ತು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ವಿದೇಶಾಂಗ ಸಚಿವೆ

ನವದೆಹಲಿ(ನ.20): ಅನಾರೋಗ್ಯದ ಹಿನ್ನೆಲೆಯಲ್ಲಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸ್ಪಷ್ಟಪಡಿಸಿದ್ದಾರೆ.

Add Asianetnews Kannada as a Preferred SourcegooglePreferred

ಈ ಕುರಿತು ಸ್ಪಷ್ಟನೆ ನೀಡಿರುವ ಸುಷ್ಮಾ ಸ್ವರಾಜ್, ತಮ್ಮ ಆರೋಗ್ಯ ಸರಿ ಇಲ್ಲದ ಕಾರಣ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡದಿರುವ ತೀರ್ಮಾನ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

ಮಧ್ಯಪ್ರದೇಶದ ವಿಧಿಶಾ ಕ್ಷೇತ್ರದ ಸಂಸದೆಯಾಗಿರುವ ಸುಷ್ಮಾ ಸ್ವರಾಜ್, ಮಧ್ಯಪ್ರದೇಶ ವಿಧಾನಸಭೆ ಚುನಾವಣೆ ಸಂದರ್ಭದಲ್ಲೇ ನಿವೃತ್ತಿ ಘೋಷಿಸಿರುವುದು ತೀವ್ರ ಚರ್ಚೆಗೆ ಎಡೆ ಮಾಡಿಕೊಟ್ಟಿದೆ.

ಇತ್ತೀಚಿಗೆ ವಿಧಿಶಾದಲ್ಲಿ ಕ್ಷೇತ್ರದ ಸಂಸದರು ಎಲ್ಲಿದ್ದಾರೆ ಎಂಬ ಗೋಡೆಬರಗಳು ಕಾಣಿಸಿಕೊಂಡಿದ್ದವು. ಸುಷ್ಮಾ ತಮ್ಮ ಸ್ವಕ್ಷೇತ್ರಕ್ಕೆ ಭೇಟಿ ಕೊಟ್ಟು ಬಹಳ ದಿನಗಳಾಗಿವೆ ಎಂಬುದು ಸ್ಥಳೀಯರ ಆರೋಪವಾಗಿದೆ.

ಆದರೆ ಎಲ್ಲದಕ್ಕೂ ಉತ್ತರ ನೀಡಿರುವ ಸುಷ್ಮಾ ಸ್ವರಾಜ್, ತಮಗೆ ಅನಾರೋಗ್ಯದ ಸಮಸ್ಯೆ ಕಾಡುತ್ತಿದ್ದು ಇದೇ ಕಾರಣಕ್ಕೆ ಕ್ಷೇತ್ರಕ್ಕೆ ಬರಲಾಗಿಲ್ಲ ಎಂದು ತಿಳಿಸಿದ್ದಾರೆ. ಅಲ್ಲದೇ ತಾವು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಸುಷ್ಮಾ ಘೋಷಿಸಿದರು.

ಆದರೆ ಸುಷ್ಮಾ ಅವರ ಅನುಪಸ್ಥಿತಿ ಬಯಸದ ಬಿಜೆಪಿ, ಅವರಿಗೆ ರಾಜ್ಯಸಭೆ ಟಿಕೆಟ್ ನೀಡಿ ಮತ್ತೆ ಸಂಸತ್ ಪ್ರವೇಶಿಸಲು ಅನುವು ಮಾಡಿಕೊಡುವ ಕುರಿತು ಗಂಭಿರ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

66 ವರ್ಷದ ಸುಷ್ಮಾ ಸ್ವರಾಜ್ ಸಕ್ಕರೆ ಖಾಯಿಲೆ ಮತ್ತು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದೇ ಕಾರಣಕ್ಕೆ ಇತ್ತಿಚಿಗೆ ಅವರು ದೆಹಲಿಯು ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದನ್ನು ಇಲ್ಲಿ ಸ್ಮರಿಸಬಹುದು.