ಸಚಿವ ಸ್ಥಾನ ಕಳೆದುಕೊಂಡ ಕೆಪಿಜೆಪಿ ಶಂಕರ್ ನಾಪತ್ತೆ?
ಸಚಿವ ಸ್ಥಾನ ಕಳೆದುಕೊಂಡಿರುವ ಶಂಕರ್ ನಾಪತ್ತೆಯಾಗಿದ್ದಾರೆ ಎಂದು ದೂರು ದಾಖಲಾಗಿದೆ. ಅವರನ್ನು ಹುಡುಕಿ ಕೊಡುವಂತೆ ಮನವಿ ಮಾಡಲಾಗಿದೆ.
ರಾಣಿಬೆನ್ನೂರು: ಸಚಿವ ಸಂಪುಟದಿಂದ ಕೊಕ್ ನೀಡಲಾಗಿರುವ ಸ್ಥಳೀಯ ಶಾಸಕ ಆರ್.ಶಂಕರ್ ಕ್ಷೇತ್ರದಿಂದ ಕಣ್ಮರೆಯಾಗಿದ್ದಾರೆಂದು ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಅವರನ್ನು ಹುಡುಕಿಕೊಡುವಂತೆ ಮನವಿ ಮಾಡಲಾಗಿದೆ.
ತಾಲೂಕು ರೈತ ಸಂಘದ ಅಧ್ಯಕ್ಷ ಹನುಮಂತಪ್ಪ ಕಬ್ಬಾರ ಶುಕ್ರವಾರ ರಾತ್ರಿ ಶಹರ ಪೊಲೀಸ್ ಠಾಣೆಗೆ ಅರ್ಜಿ ಸಲ್ಲಿಸಿದ್ದಾರೆ. ಕ್ಷೇತ್ರದ ಶಾಸಕರು ಕಳೆದ ಹಲವಾರು ದಿನಗಳಿಂದ ಕ್ಷೇತ್ರದಲ್ಲಿ ಎಲ್ಲಿಯೂ ಕಾಣಿಸಿಕೊಳ್ಳುತ್ತಿಲ್ಲ. ಅವರ ಮೊಬೈಲ್ಗೆ ಕರೆ ಮಾಡಿದರೂ ಸ್ವೀಕರಿಸುತ್ತಿಲ್ಲ. ಅವರು ಯಾವಾಗ ಇಲ್ಲಿಗೆ ಬರುತ್ತಾರೆ, ಯಾವಾಗ ಹೋಗುತ್ತಾರೆ, ಏನು ಕೆಲಸ ಮಾಡುತ್ತಾರೆ ಎಂಬುದು ಯಾರಿಗೂ ತಿಳಿಯದಾಗಿದೆ.
ಸದ್ಯ ರಾಜ್ಯ ಸರ್ಕಾರ ಗೊಂದಲದಲ್ಲಿರುವುದು ಹಾಗೂ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದರಿಂದ ಶಾಸಕರು ಅಪಾಯದಲ್ಲಿದ್ದಾರೆಯೇ ಎಂಬ ಸಂಶಯ ಮೂಡುತ್ತಿದೆ. ಆದ್ದರಿಂದ ಪೊಲೀಸ್ ಇಲಾಖೆ ಅಧಿಕಾರಿಗಳು ಶಾಸಕರನ್ನು ಪತ್ತೆ ಹಚ್ಚಿ ಸಾರ್ವಜನಿಕರಿಗೆ ಮಾಹಿತಿ ನೀಡಿದಲ್ಲಿ ಎಲ್ಲ ಗೊಂದಲಗಳಿಗೂ ಉತ್ತರ ಸಿಕ್ಕಂತಾಗುತ್ತದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.