ಅರಣ್ಯ ಸಿಬ್ಬಂದಿ ಸಾವಿನ ಪರಿಹಾರ 30 ಲಕ್ಷಕ್ಕೇರಿಕೆ
ಹುತಾತ್ಮರಾದ ಅರಣ್ಯ ಇಲಾಖೆ ಸಿಬ್ಬಂದಿಗೆ ನೀಡುವ ಪರಿಹಾರದ ಮೊತ್ತವನ್ನು 20 ಲಕ್ಷ ರು.ಗಳಿಂದ 30 ಲಕ್ಷ ರು.ಗಳಿಗೆ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.
ಬೆಂಗಳೂರು [ಸೆ.12]: ಕರ್ತವ್ಯ ನಿರ್ವಹಿಸುವಾಗ ಹುತಾತ್ಮರಾದ ಅರಣ್ಯ ಇಲಾಖೆ ಸಿಬ್ಬಂದಿಗೆ ನೀಡುವ ಪರಿಹಾರದ ಮೊತ್ತವನ್ನು 20 ಲಕ್ಷ ರು.ಗಳಿಂದ 30 ಲಕ್ಷ ರು.ಗಳಿಗೆ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದರು.
ನಗರದ ಮಲ್ಲೇಶ್ವರಂನಲ್ಲಿರುವ ಅರಣ್ಯ ಭವನದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮ ಅರಣ್ಯ ಸಿಬ್ಬಂದಿಯ ಸ್ಮಾರಕಕ್ಕೆ ಗೌರವ ಸಲ್ಲಿಸಿದ ನಂತರ ಅವರು ಮಾತನಾಡಿದರು.
ಕರ್ತವ್ಯ ನಿರ್ವಹಿಸುವಾಗ ಮೃತ ಪಟ್ಟಪೊಲೀಸ್ ಸಿಬ್ಬಂದಿಗೆ ನೀಡುತ್ತಿದ್ದ ಪರಿಹಾರವನ್ನು 20 ಲಕ್ಷದಿಂದ 30 ಲಕ್ಷ ರು.ಗಳಿಗೆ ಹೆಚ್ಚಿಸಲಾಗಿದೆ. ಅದೇ ರೀತಿ ಅರಣ್ಯ ಸಿಬ್ಬಂದಿಗೂ ಇದೇ ಮೊತ್ತದ ಪರಿಹಾರ ನೀಡಲು ನಿರ್ಧರಿಸಲಾಗಿದೆ. ಜತೆಗೆ ಹುತಾತ್ಮರ ಕುಟುಂಬಗಳ ಕ್ಷೇಮಾಭಿವೃದ್ಧಿಗೂ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ರಾಜ್ಯದಲ್ಲಿ ಶೇ.22ರಷ್ಟುಅರಣ್ಯ ಪ್ರದೇಶ ಇರುವುದು ನೆಮ್ಮದಿ ನೀಡುವ ವಿಚಾರ. ಅದಕ್ಕಾಗಿ ಹಗಲಿರುಳು ಶ್ರಮಿಸುವ ಅರಣ್ಯ ಸಿಬ್ಬಂದಿ ಕಾಯಕ ಶ್ಲಾಘನೀಯ. ಅರಣ್ಯ ಸಂಪತ್ತು ಮತ್ತು ವನ್ಯ ಜೀವಿಗಳ ಸಂರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ಹಲವು ಮಂದಿ ಅರಣ್ಯಾಧಿಕಾರಿಗಳಿಂದಾಗಿ ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಇಂದಿಗೂ ಹಚ್ಚ ಹಸಿರಾಗಿವೆ. ಕುಖ್ಯಾತ ಕಾಡುಗಳ್ಳ ವೀರಪ್ಪನ್ ಮೋಸದ ಬಲೆಗೆ ಸಿಲುಕಿ ಐಎಫ್ಎಸ್ ಅಧಿಕಾರಿ ಪಿ.ಶ್ರೀನಿವಾಸ್ ಹುತಾತ್ಮರಾಗಿದ್ದರು. ಅವರ ಸೇವೆಯನ್ನು ಮೆಚ್ಚಿ ಭಾರತ ಸರ್ಕಾರ ಕೀರ್ತಿ ಚಕ್ರ ಶೌರ್ಯ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಿ ಗೌರವಿಸಿತ್ತು ಎಂದು ಮುಖ್ಯಮಂತ್ರಿಯವರು ಹೇಳಿದರು.