ಕಾಂಗ್ರೆಸ್ ಜೆಡಿಎಸ್ ಸರಕಾರದ ಸುಸೂತ್ರ ನಿರ್ಹವಣಗೆ ಉಭಯ ಪಕ್ಷಗಳು ಹಲವು ಸೂತ್ರಗಳಿಗೆ ಒಪ್ಪಂದ ಮಾಡಿಕೊಂಡಿವೆ. ಐದು ವರ್ಷಗಳ ಕಾಲ ಎಚ್.ಡಿ.ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಸರಕಾರದ ಸಮನ್ವಯದ ಹೊಣೆಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಹಿಸಲಾಗಿದೆ.

ಬೆಂಗಳೂರು: ನಿರೀಕ್ಷೆಯಂತೆಯೇ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟದ ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿಗೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಅಧ್ಯಕ್ಷತೆ ನೀಡುವ ಮೂಲಕ ಕಾಂಗ್ರೆಸ್‌ ಹೈಕಮಾಂಡ್‌ ಮಾಜಿ ಮುಖ್ಯಮಂತ್ರಿಗೆ ಮನ್ನಣೆ ನೀಡಿದೆ.

Add Asianetnews Kannada as a Preferred SourcegooglePreferred

ಮೈತ್ರಿಕೂಟ ರಚನೆಯ ನಂತರ ಸಿದ್ದರಾಮಯ್ಯಅವರನ್ನು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಮಾಡಲಾಗಿತ್ತು ಮತ್ತು ಸಮನ್ವಯ ಸಮಿತಿಗೆ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡುವ ಬಗ್ಗೆ ಕಾಂಗ್ರೆಸ್‌ ಹೈಕಮಾಂಡ್‌ ಒಲವು ಹೊಂದಿತ್ತು. ಆದರೆ, ಈ ವಿಚಾರದ ಬಗ್ಗೆ ಜೆಡಿಎಸ್‌ನೊಂದಿಗೆ ಚರ್ಚೆ ನಡೆದಾಗ ಅದಕ್ಕೆ ವಿರೋಧ ವ್ಯಕ್ತವಾಗಿತ್ತು ಎನ್ನಲಾಗಿದೆ.

ಚುನಾವಣೆ ಪ್ರಚಾರದ ವೇಳೆ ಜೆಡಿಎಸ್‌ ವಿರುದ್ಧ ಹರಿಹಾಯ್ದಿದ್ದ ಸಿದ್ದರಾಮಯ್ಯ ಅವರನ್ನು ಸಮನ್ವಯ ಸಮಿತಿಗೆ ಅಧ್ಯಕ್ಷರನ್ನಾಗಿ ಮಾಡುವುದಕ್ಕೆ ಜೆಡಿಎಸ್‌ ವರಿಷ್ಠರಿಂದಲೇ ವಿರೋಧ ವ್ಯಕ್ತವಾಗಿತ್ತು ಎನ್ನಲಾಗಿದೆ. ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರಿಗೆ ಸಮನ್ವಯ ಸಮಿತಿಯಲ್ಲದೆ ಇತರೆ ಯಾವುದೇ ಹುದ್ದೆ ನೀಡಿದರೂ ಅವರಿಗೆ ನ್ಯಾಯ ಕೊಟ್ಟಂತೆ ಆಗುತ್ತಿರಲಿಲ್ಲ. ಜೆಡಿಎಸ್‌ನ ವಿರೋಧವಿದೆ ಎಂಬ ಕಾರಣಕ್ಕೆ ಸಿದ್ದರಾಮಯ್ಯ ಅವರಿಗೆ ಪ್ರಮುಖ ಸ್ಥಾನ ನೀಡದಿದ್ದರೆ ಅದು ಅವರನ್ನು ನೆಚ್ಚಿರುವ ಅಹಿಂದ ವರ್ಗಕ್ಕೆ ತಪ್ಪು ಸಂದೇಶ ರವಾನೆ ಮಾಡಿದಂತಾಗುತ್ತದೆ ಎಂಬ ಆತಂಕ ಹೈಕಮಾಂಡ್‌ಗೆ ಇತ್ತು.

ಹೀಗಾಗಿ, ಹಣಕಾಸು ಹಾಗೂ ಇಂಧನದಂತಹ ಪ್ರಮುಖ ಖಾತೆಗಳಿಗೆ ಪಟ್ಟು ಹಿಡಿದಿದ್ದ ಜೆಡಿಎಸ್‌ಗೆ ಆ ಖಾತೆಗಳನ್ನು ಬಿಟ್ಟುಕೊಡಲು ಒಪ್ಪಿಂದ ಹೈಕಮಾಂಡ್‌, ಅದೇ ರೀತಿ ತಾನು ಕೂಡ ಸಿದ್ದರಾಮಯ್ಯ ಅವರಿಗೆ ಸಮನ್ವಯ ಸಮಿತಿ ಅಧ್ಯಕ್ಷತೆ ನೀಡುವಂತೆ ಪಟ್ಟು ಹಿಡಿದು ಜೆಡಿಎಸ್‌ ವರಿಷ್ಠರನ್ನು ಮಣಿಸಿದೆ ಎಂದು ಮೂಲಗಳು ಹೇಳಿವೆ.