‘ಎಲ್ಲಾ ಮಿತಿಯನ್ನು ಮೀರುತ್ತಿದೆ ಕೇಂದ್ರ ಸರ್ಕಾರ’
ದಿನ ದಿನಕ್ಕೆ ಪೆಟ್ರೋಲ್ , ಡೀಸೆಲ್ ಬೆಲೆ ಗಗನಕ್ಕೆ ಏರುತ್ತಿದ್ದು ಈ ಏರಿಕೆ ಖಂಡಿಸಿ ವಿಪಕ್ಷಗಳು ನಡೆಸುತ್ತಿರುವ ಭಾರತ್ ಬಂದ್ ವೇಳೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ ಸರ್ಕಾರ ಎಲ್ಲಾ ಮಿತಿಗಳನ್ನು ಮೀರುತ್ತಿದೆ ಎಂದಿದ್ದಾರೆ.
ನವದೆಹಲಿ : ನಿರಂತರವಾಗಿ ಗಗನಕ್ಕೆ ಏರುತ್ತಿರುವ ತೈಲ ಬೆಲೆಯನ್ನು ಖಂಡಿಸಿ ಕಾಂಗ್ರೆಸ್ ದೇಶದಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು ಈ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.
ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಬಗ್ಗೆ ಯಾವುದೇ ರೀತಿಯ ಕಾಳಜಿಯನ್ನು ತೋರಿಸುತ್ತಿಲ್ಲ. ತನ್ನ ಎಲ್ಲಾ ರೀತಿಯ ಮಿತಿಗಳನ್ನು ಮೀರುತ್ತಿದೆ ಎಂದು ಹೇಳಿದ್ದಾರೆ. ಜನರ ಬಗ್ಗೆ ಕನಿಷ್ಟ ಕಾಳಜಿಯೂ ಕೂಡ ಕೇಂದ್ರಕ್ಕೆ ಇಲ್ಲದಂತಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಲ್ಲದೇ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸಲು ವಿಪಕ್ಷಗಳು ಯತ್ನಿಸುತ್ತಿವೆ. ಆದರೆ ಕೇಂದ್ರ ಸರ್ಕಾರ ಈ ಬಗ್ಗೆ ಯಾವುದೇ ರೀತಿಯ ಗಮನ ನೀಡುತ್ತಿಲ್ಲ ಎಂದು ಹೇಳಿದರು.
ತೈಲ ಬೆಲೆ ಏರಿಕೆ ಖಂಡಿಸಿ ವಿಪಕ್ಷಗಳು ಭಾರತ್ ಬಂದ್ ನಡೆಸುತ್ತಿದ್ದು, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ ಘಾಟ್ ನಲ್ಲಿ ಪ್ರತಿಭಟನೆ ಆರಂಭಿಸಿದ್ದರು.