ಇಂದು ಸರ್ಕಾರಿ ಆಸ್ಪತ್ರೆ ಸೇವೆ ವ್ಯತ್ಯಯ?
ಆರೋಗ್ಯ ಇಲಾಖೆ ಗುತ್ತಿಗೆ ನೌಕರರು ಗುರುವಾರ ಒಂದು ದಿನದ ರಾಜ್ಯವ್ಯಾಪಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದು, ಸರಕಾರಿ ಆಸ್ಪತ್ರೆಗಳಲ್ಲಿ ಸ್ವಲ್ಪಮಟ್ಟಿಗೆ ಆರೋಗ್ಯ ಸೇವೆ ಯಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ.
ಬೆಂಗಳೂರು : ಸಮಾನ ವೇತನ ಹಾಗೂ ಸೇವಾ ಭದ್ರತೆಗೆ ಆಗ್ರಹಿಸಿ ಆರೋಗ್ಯ ಇಲಾಖೆ ಗುತ್ತಿಗೆ ನೌಕರರು ಗುರುವಾರ ಒಂದು ದಿನದ ರಾಜ್ಯವ್ಯಾಪಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದು, ಸರಕಾರಿ ಆಸ್ಪತ್ರೆಗಳಲ್ಲಿ ಸ್ವಲ್ಪಮಟ್ಟಿಗೆ ಆರೋಗ್ಯ ಸೇವೆ ಯಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ. ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್ ಎಚ್ಎಂ) ಅಡಿಯಲ್ಲಿ ಕಾರ್ಯನಿರ್ವಹಿಸು ತ್ತಿರುವ ಸುಮಾರು 22 ಸಾವಿರ ಹಾಗೂ ಇನ್ನಿತರ ಆರೋಗ್ಯ ಕಾರ್ಯಕ್ರಮಡಿ 8 ಸಾವಿರ ಗುತ್ತಿಗೆ ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ.
ರಾಷ್ಟ್ರೀಯ ಮಟ್ಟದಲ್ಲಿ ಎನ್ಎಚ್ಎಂ ಗುತ್ತಿಗೆ ನೌಕರರು ಧರಣಿ ಸತ್ಯಾಗ್ರಹಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿರುವ ಎನ್ಎಚ್ಎಂ ಹಾಗೂ ಎನ್ಎಚ್ಯೇತರ ಗುತ್ತಿಗೆ ನೌಕರರು ಸೇರಿ 30 ಸಾವಿರ ಮಂದಿ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ವೇದಿಕೆ ನೇತೃತ್ವದಲ್ಲಿ ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆ ಯಲ್ಲಿ ಭಾಗವಹಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿರುವ ಕೆಲ ಪ್ರಾಥಮಿಕ ಆರೋಗ್ಯಕೇಂದ್ರ, ತಾಲೂಕು ಆರೋಗ್ಯ ಕೇಂದ್ರಗಳಲ್ಲಿ ಸ್ವಲ್ಪ ಮಟ್ಟಿಗೆ ಸಿಬ್ಬಂದಿ ಕೊರತೆ ಉಂಟಾಗಿ ಸಮಸ್ಯೆಯಾಗಲಿದೆ. ಈ ಸಮಸ್ಯೆ ನಿವಾರಿಸುವ ಸಲುವಾಗಿ ಆರೋಗ್ಯ ಇಲಾಖೆಯು ಅಗತ್ಯವಿರುವ ಸ್ಥಳಗಳಿಗೆ ಕಾಯಂ ಸಿಬ್ಬಂದಿ ನೇಮಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಆದೇಶ ನೀಡಿದೆ. ಜತಗೆ ಗುರುವಾರ ಕಾಯಂ ಸಿಬ್ಬಂದಿಯ ರಜೆ ರದ್ದುಗೊಳಿಸಿ ಆರೋಗ್ಯಾ ಧಿಕಾರಿಗಳು ದಿನ ನಿತ್ಯದ ಆರೋಗ್ಯ ಸೇವೆಗಳಿಗೆ ಯಾವುದೇ ತೊಂದರೆ ಆಗದಂತೆ ನಿಗಾವಹಿಸಲು ಸೂಚಿಸಿದೆ.
ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ 22 ಸಾವಿರ ಮಂದಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದಾರೆ. ಇದರಲ್ಲಿ ಸುಮಾರು ಒಂದು ಸಾವಿರ ಮಂದಿ ಶುಶ್ರೂಷಕರು, ಸುಮಾರು 600 ಮಂದಿ ಆಯುಷ್ ವೈದ್ಯರು, ನೂರಾರು ಫಾರ್ಮಾಸಿಸ್ಟ್, ಲ್ಯಾಬ್ ಟೆಕ್ನಿಷಿಯನ್ಸ್ಕಾರ್ಯನಿರ್ವಹಿಸುತ್ತಿದ್ದಾರೆ.