ಕಾವೇರಿ ವಿಚಾರ: ಇಂದು ಸುಪ್ರೀಂಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಲಿರುವ ಸರ್ಕಾರ
ಬೆಂಗಳೂರು(ಸೆ.26): ನಿತ್ಯ 6 ಸಾವಿರ ಕ್ಯೂಸೆಕ್ ನೀರು ಬಿಡಲು ನೀಡಿರುವ ಆದೇಶವನ್ನು ಮಾರ್ಪಾಡು ಮಾಡುವಂತೆ ಕೋರಿ ಸೋಮವಾರ ಸುಪ್ರೀಂಕೋರ್ಟ್ನಲ್ಲಿ ರಾಜ್ಯ ಸರ್ಕಾರ ಮರು ಪರಿಶೀಲನಾ ಅರ್ಜಿ ಸಲ್ಲಿಸಲಿದೆ.
ಸೆ. 20ರಂದು ಸುಪ್ರೀಂಕೋರ್ಟ್ ನೀಡಿರುವ ಆದೇಶ ಪಾಲನೆ ಮಾಡಲು ಉಂಟಾಗಿರುವ ಸಂಕಷ್ಟ ಪರಿಸ್ಥಿತಿಯನ್ನು ಸುಪ್ರೀಂಕೋರ್ಟ್ಗೆ ಮನವರಿಕೆ ಮಾಡಿಕೊಡಲು ಸರ್ಕಾರ ನಿರ್ಧರಿಸಿದೆ. ಜೊತೆಗೆ ಕಾವೇರಿ ಜಲಾನಯನ ಭಾಗದ ಕಬಿನಿ, ಹಾರಂಗಿ, ಕೆಆರ್ಎಸ್ ಹಾಗೂ ಹೇಮಾವತಿ ಜಲಾಶಯಗಳಲ್ಲಿರುವ ನೀರನ್ನು ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸಿಕೊಳ್ಳಲು ರಾಜ್ಯ ವಿಧಾನಮಂಡಲದ ಉಭಯ ಸದನಗಳಲ್ಲಿ ಕೈಗೊಂಡಿರುವ ನಿರ್ಣಯವನ್ನು ಸುಪ್ರೀಂಕೋರ್ಟ್ಗೆ ಮನವರಿಕೆ ಮಾಡಿಕೊಡಲಾಗುತ್ತದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಕಾವೇರಿ ನಿರ್ವಹಣಾ ಮಂಡಳಿಯನ್ನು ಕೇಂದ್ರ ಸರ್ಕಾರ ರಚಿಸುವಂತೆ ನೀಡಿರುವ ಆದೇಶವನ್ನು ಕೂಡ ಮಾರ್ಪಾಡು ಮಾಡುವಂತೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ನಲ್ಲಿ ಮನವಿ ಮಾಡಲಿದೆ.