ಸಿಗರೇಟ್ ಹಾಗೂ ಇತರೆ ತಂಬಾಕು ಉತ್ಪನ್ನಗಳ ಪೊಟ್ಟಣದ ಶೇ.85ರಷ್ಟು ಜಾಗದಲ್ಲಿ `ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕರ' ಎಂಬ ಚಿತ್ರ ಸಹಿತ ಎಚ್ಚರಿಕೆ ಸಂದೇಶ ಪ್ರಕಟಿಸುವ ಕುರಿತ ಕೇಂದ್ರ ಸರ್ಕಾರದ 2014ರ ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ (ಪ್ಯಾಕೇಜ್ ಹಾಗೂ ಲೇಬಲಿಂಗ್) ತಿದ್ದುಪಡಿ ಅಧಿನಿಯಮವನ್ನು ಹೈಕೋರ್ಟ್ ಶುಕ್ರವಾರ ರದ್ದುಪಡಿಸಿ ಮಹತ್ವದ ತೀರ್ಪು ನೀಡಿದೆ.

ಬೆಂಗಳೂರು (ಡಿ.16): ಸಿಗರೇಟ್ ಹಾಗೂ ಇತರೆ ತಂಬಾಕು ಉತ್ಪನ್ನಗಳ ಪೊಟ್ಟಣದ ಶೇ.85ರಷ್ಟು ಜಾಗದಲ್ಲಿ `ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕರ' ಎಂಬ ಚಿತ್ರ ಸಹಿತ ಎಚ್ಚರಿಕೆ ಸಂದೇಶ ಪ್ರಕಟಿಸುವ ಕುರಿತ ಕೇಂದ್ರ ಸರ್ಕಾರದ 2014ರ ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ (ಪ್ಯಾಕೇಜ್ ಹಾಗೂ ಲೇಬಲಿಂಗ್) ತಿದ್ದುಪಡಿ ಅಧಿನಿಯಮವನ್ನು ಹೈಕೋರ್ಟ್ ಶುಕ್ರವಾರ ರದ್ದುಪಡಿಸಿ ಮಹತ್ವದ ತೀರ್ಪು ನೀಡಿದೆ. ಈ ತಿದ್ದುಪಡಿ ಅಧಿನಿಯಮ ರೂಪಿಸುವಾಗ ಕೇಂದ್ರ ಸರ್ಕಾರ ಅಗತ್ಯ ದಾಖಲೆ ಪರಿಶೀಲಿಸಿಲ್ಲ ಮತ್ತು ತನ್ನ ವಿವೇಚನೆಯನ್ನು ಸಮರ್ಪಕವಾಗಿ ಬಳಸಿಲ್ಲ. ಹೀಗಾಗಿ ಅಧಿನಿಯಮ ರೂಪಿಸುವ ಪ್ರಕ್ರಿಯೆ ಸಮರ್ಪಕವಾಗಿ ನಡೆದಿಲ್ಲ ಎಂದು ಸೂಚಿಸಿ ಈ ಅನಿಯಮವನ್ನು ರದ್ದುಪಡಿಸಿದೆ.

Add Asianetnews Kannada as a Preferred SourcegooglePreferred

ಆದರೆ, ಕೇಂದ್ರ ಸರ್ಕಾರ ಅಥವಾ ಸಕ್ಷಮ ಪ್ರಾಧಿಕಾರವು ಸಂವಿಧಾನದ ಪರಿಚ್ಛೇದ 77(3)ರಡಿ ಕಾನೂನಿನ ಪ್ರಕಾರ ಹೊಸದಾಗಿ ತಿದ್ದುಪಡಿ ಪ್ರಕ್ರಿಯೆ ನಡೆಸಲು ಸ್ವತಂತ್ರವಾಗಿದೆ ಎಂದು ನ್ಯಾಯಪೀಠವು ಇದೇ ವೇಳೆ ಸ್ಪಷ್ಟಪಡಿಸಿದೆ. ಹೀಗಾಗಿ ಕೇಂದ್ರ ಸರ್ಕಾರಕ್ಕೆ ತನ್ನ ಈ ನೀತಿಯನ್ನು ಮರು ಜಾರಿಗೊಳಿಸುವ ಅವಕಾಶ ದೊರಕಿದಂತಾಗಿದೆ.

ತಕರಾರು: ಕೇಂದ್ರ ಸರ್ಕಾರ ಈ ತಿದ್ದುಪಡಿ ಅಧಿನಿಯಮವನ್ನು ದೇಶದ ವಿವಿಧ ಸಿಗರೇಟ್ ಉತ್ಪಾದನಾ ಕಂಪನಿಗಳು ತಮ್ಮ ರಾಜ್ಯಗಳಲ್ಲಿ ನ್ಯಾಯಾಲಯಕ್ಕೆ ತಕರಾರು ಅರ್ಜಿ ಸಲ್ಲಿಸಿದ್ದವು. ದೇಶಾದ್ಯಂತ ಇಂತಹ 50ಕ್ಕೂ ಹೆಚ್ಚು ತಕರಾರು ಅರ್ಜಿಗಳು ಆಯಾ ರಾಜ್ಯದ ಹೈಕೋರ್ಟ್ಗಳಲ್ಲಿ ದಾಖಲಾಗಿತ್ತು. ಹೀಗಾಗಿ ಸುಪ್ರೀಂಕೋರ್ಟ್ ಈ ಎಲ್ಲಾ ತಕರಾರು ಅರ್ಜಿಗಳ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ಗೆ ರವಾನಿಸಿತ್ತು. ಕಳೆದ ಹತ್ತು ತಿಂಗಳ ಹಿಂದೆ ಈ ಎಲ್ಲಾ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಮತ್ತು ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರಿದ್ದ ವಿಭಾಗೀಯ ಪೀಠ ಶುಕ್ರವಾರಕ್ಕೆ ತೀರ್ಪು ಕಾಯ್ದಿರಿಸಿತ್ತು. ಅದರಂತೆ ಶುಕ್ರವಾರ ಕೇಂದ್ರ ಸರ್ಕಾರ ರೂಪಿಸಿರುವ ತಿದ್ದುಪಡಿ ನಿಯಮವು ಅಕ್ರಮ ಹಾಗೂ ಕಾನೂನು ಬಾಹಿರವಾಗಿದೆ ಎಂದು ಅಂತಿಮ ತೀರ್ಪು ಘೋಷಿಸಿದೆ.

ತೀರ್ಪಿನ ವಿವರ: `ಯಾವ ಮಾದರಿಯ ಎಚ್ಚರಿಕೆ ಸಂದೇಶಗಳನ್ನು ಪ್ರಕಟಿಸಲು ಅನುಮತಿ ನೀಡಬೇಕು ಎಂಬುದನ್ನು ನಿರ್ಧರಿಸುವುದು ಕೋರ್ಟ್’ಗೆ ಸಂಬಂಧಿಸಿದ್ದಲ್ಲ. ಹಾಗೆಯೇ, ಪೊಟ್ಟಣದ ಮೇಲೆ ಚಿತ್ರಸಹಿತ ಎಚ್ಚರಿಕೆ ಸಂದೇಶಗಳು ಸುಳ್ಳಿನಿಂದ ಕೂಡಿವೆ ಎಂಬ ಬಗ್ಗೆ ವಿಚಾರಣೆ ನಡೆಸುವುದು ಕೋರ್ಟ್ಗೆ ಸಾಧ್ಯವಿಲ್ಲ. ಆದರೆ, ಸಿಗರೇಟ್ ಸೇರಿದಂತೆ ತಂಬಾಕು ಉತ್ಪನ್ನಗಳ ಪ್ಯಾಕೆಟ್ ಮೇಲೆ ಚಿತ್ರ ಸಹಿತ ಎಚ್ಚರಿಕೆ ಸಂದೇಶ ಪ್ರಕಟಿಸುವ ಜಾಗದ ಪ್ರಮಾಣವನ್ನು ಶೇ.40ರಿಂದ ಶೇ.85ಕ್ಕೆ ಹೆಚ್ಚಿಸಿರುವುದು ವಿಶ್ವಾಸಾರ್ಹ ಉತ್ಪಾದಕರು, ವರ್ತಕರು ಹಾಗೂ ಸಗಟುದಾರರ ಮೇಲೆ ದುಷ್ಪರಿಣಾಮ ಉಂಟಾಗಲಿದೆ' ಎಂದು ಪೀಠ ಅಭಿಪ್ರಾಯಪಟ್ಟಿದೆ.