ಅತೃಪ್ತಿ ಇದೆ, ಪಕ್ಷ ಬಿಡಲು ನಿರ್ಧರಿಸಿಲ್ಲ: ವಿಜಯಶಂಕರ್
ನಾನು ಅಸಮಾಧಾನ ಹೊರಹಾಕಿದ್ದೇನೆಯೇ ಹೊರತು ಇನ್ನೂ ಪಕ್ಷ ಬಿಡುವ ನಿರ್ಧಾರ ಮಾಡಿಲ್ಲ ಎಂದು ಮಾಜಿ ಸಚಿವ ಸಿ.ಎಚ್. ವಿಜಯಶಂಕರ್ ಸ್ಪಷ್ಟಪಡಿಸಿದ್ದಾರೆ.
ಮೈಸೂರು: ನಾನು ಅಸಮಾಧಾನ ಹೊರಹಾಕಿದ್ದೇನೆಯೇ ಹೊರತು ಇನ್ನೂ ಪಕ್ಷ ಬಿಡುವ ನಿರ್ಧಾರ ಮಾಡಿಲ್ಲ ಎಂದು ಮಾಜಿ ಸಚಿವ ಸಿ.ಎಚ್. ವಿಜಯಶಂಕರ್ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಭಾನುವಾರ ಹಮ್ಮಿಕೊಂಡಿದ್ದ ಪಾದಯಾತ್ರೆಯಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿ, ಪಕ್ಷದಲ್ಲಿ ನನಗೆ ಯಾವುದೇ ಸಮಸ್ಯೆ ಇಲ್ಲ. ಆದರೆ, ಸ್ಥಳೀಯ ನಾಯಕರು ಹಿಂದುಳಿದ ವರ್ಗಕ್ಕೆ ಸೇರಿದ ನನ್ನನ್ನು ತುಳಿಯುವ ಕೆಲಸ ಮಾಡುತ್ತಿದ್ದಾರೆ. ಈ ಬಗ್ಗೆ ನನ್ನ ಅಸಮಾಧಾನ ಹೊರಹಾಕಿದ್ದು, ಪಕ್ಷದ ನಾಯಕರು ಬಗೆಹರಿಸುವ ಭರವಸೆ ನೀಡಿದ್ದಾರೆ ಎಂದು ಅವರು ತಿಳಿಸಿದರು.
ಕಳೆದ ಚುನಾವಣೆಯಲ್ಲಿ ಮೈಸೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಸ್ಥಳೀಯ ನಾಯಕರು ಟಿಕೆಟ್ ತಪ್ಪಿಸಿದ್ದರು. ಹಾಸನ ಜಿಲ್ಲೆಗೆ ಕಳುಹಿಸಿ ಸೋಲಿಸಿದರು. ಮೈಸೂರಿನಿಂದ ಟಿಕೆಟ್ ನೀಡಿದ್ದರೆ, ಜಯ ನಿಶ್ಚಿತವಾಗಿತ್ತು. ಈಗಿರುವ ಬಿಜೆಪಿ ಸಂಸದರ ಪೈಕಿ ಹಿಂದುಳಿದ ವರ್ಗಕ್ಕೆ ಸೇರಿದವರು ಯಾರೂ ಇಲ್ಲ. ಮೂರು ವರ್ಷಗಳಿಂದ ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಸಕ್ರಿಯನಾಗಿದ್ದೇನೆ. ಈ ಕ್ಷೇತ್ರದಿಂದಲೂ ನನ್ನನ್ನು ಹೊರ ಹಾಕಲು ಕೆಲವರು ಯತ್ನಿಸುತ್ತಿದ್ದಾರೆ. ಈ ಎಲ್ಲ ಬೆಳವಣಿಗೆ ಬಗ್ಗೆ ನನ್ನ ಅಸಮಾಧಾನ ಹೊರ ಹಾಕಿದ್ದೇನೆ. ಪಕ್ಷ ಬಿಡುವ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ. ಒಂದು ವೇಳೆ ಸಮಸ್ಯೆ ಬಗೆಹರಿಯದಿದ್ದರೆ ಬೆಂಬಲಿಗರು, ಕಾರ್ಯಕರ್ತರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಅವರು ಹೇಳಿದರು.