ರಾಜ್ಯ ಗೃಹ ಸಚಿವರು ಸ್ವತಂತ್ರವಾಗಿ ಕೆಲಸ ಮಾಡಲು ಬಿಡದೆ ಮುಖ್ಯಮಂತ್ರಿಗಳು ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

ಬೆಂಗಳೂರು : ರಾಜ್ಯ ಗೃಹ ಸಚಿವರು ಸ್ವತಂತ್ರವಾಗಿ ಕೆಲಸ ಮಾಡಲು ಬಿಡದೆ ಮುಖ್ಯಮಂತ್ರಿಗಳು ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

Add Asianetnews Kannada as a Preferred SourcegooglePreferred

ಚಾಕು ಇರಿತಕ್ಕೊಳಗಾಗಿ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲೋಕಾಯುಕ್ತ ನ್ಯಾ.ಪಿ.ವಿಶ್ವನಾಥ್‌ ಶೆಟ್ಟಿಅವರನ್ನು ಮಂಗಳವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಗೃಹ ಸಚಿವರು ಮುಕ್ತವಾಗಿ ಕೆಲಸ ಮಾಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ವತಂತ್ರವಾಗಿ ಗೃಹ ಸಚಿವರನ್ನು ಕೆಲಸ ಮಾಡಲು ಬಿಡದೆ ಮುಖ್ಯಮಂತ್ರಿಗಳು ಹಸ್ತಕ್ಷೇಪ ಮಾಡುತ್ತಿದ್ದಾರೆ. ಇದರಿಂದ ಸಮರ್ಥವಾಗಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ದೇಶದಲ್ಲಿಯೇ ಇಂತಹ ದುರ್ಘಟನೆ ಮೊದಲ ಬಾರಿಗೆ ರಾಜ್ಯದಲ್ಲಿ ನಡೆದಿದೆ ಎಂದು ವಾಗ್ದಾಳಿ ನಡೆಸಿದರು.

ಐಪಿಎಸ್‌ ಅಧಿಕಾರಿ ಹಾಗೂ ರಾಜ್ಯ ಐಪಿಎಸ್‌ ಅಸೋಸಿಯೇಷನ್‌ ಅಧ್ಯಕ್ಷ ಆರ್‌.ಪಿ.ಶರ್ಮಾ ಅವರು ಸರ್ಕಾರದ ನಡೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ವಿಷಯಕ್ಕೆ ಸಂಬಂಧಪಟ್ಟಂತೆ ಬೇಸರ ವ್ಯಕ್ತಪಡಿಸಿದ ದೇವೇಗೌಡ, ಐಎಎಸ್‌ ಮತ್ತು ಐಪಿಎಸ್‌ ಅಧಿಕಾರಿಗಳು ಮುಖ್ಯಮಂತ್ರಿಯ ಹಿಡಿತದಲ್ಲಿರಬೇಕು. ಆದರೆ, ಅವರು ಸರ್ಕಾರದ ಹಿಡಿತದಲ್ಲಿಲ್ಲ. ಬದಲಿಗೆ ಬೇರೆ ಯಾರದ್ದೋ ಮುಷ್ಟಿಯಲ್ಲಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.