ಹೇಗೆ ಅಸ್ಥಿರತೆ ಉಂಟಾಗುತ್ತದೆ ಎಂದು ಊಹಿಸಲಸಾಧ್ಯ: ಎಚ್ಡಿಕೆ ಎಚ್ಚರಿಕೆ
ಮುಂದಿನ ಸರ್ಕಾರಕ್ಕೂ ಅಸ್ಥಿರತೆ: ಎಚ್ಡಿಕೆ ಎಚ್ಚರಿಕೆ| ಹೇಗೆ ಅಸ್ಥಿರತೆ ಉಂಟಾಗಲಿದೆ ಎಂದು ಊಹಿಸಲಸಾಧ್ಯ| ಪತ್ರಿಕಾಗೋಷ್ಠಿ ನಡೆಸಿ ಅಧಿಕಾರಿಗಳಿಗೆ ಧನ್ಯವಾದ ಹೇಳಿದ ಹಂಗಾಮಿ ಸಿಎಂ
ಬೆಂಗಳೂರು[ಜು.25]: ಸಮ್ಮಿಶ್ರ ಸರ್ಕಾರದಲ್ಲಿ ಎದುರಾದ ಅಸ್ಥಿರತೆಯು ಮುಂದಿನ ಅವಧಿಯಲ್ಲಿಯೂ ನಿರ್ಮಾಣವಾಗುವ ಸಂದರ್ಭಗಳು ಎದುರಾಗುತ್ತವೆ. ಯಾವ ರೀತಿಯಲ್ಲಿ ಆಗಲಿದೆ ಎಂಬುದನ್ನು ಊಹೆ ಮಾಡಲು ಸಾಧ್ಯವಿಲ್ಲ ಎಂದು ಹಂಗಾಮಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಂದಿನ ಸರ್ಕಾರದ ಅವಧಿಯಲ್ಲಿಯೂ ರಾಜಕೀಯ ಅಸ್ಥಿರತೆ ನಿರ್ಮಾಣವಾಗುವ ಸಂದರ್ಭಗಳು ಎದುರಾಗಲಿವೆ. ಆದರೆ, ಯಾವ ರೀತಿಯಲ್ಲಿ ಅಸ್ಥಿರತೆ ಪರಿಸ್ಥಿತಿ ಎದುರಾಗಲಿದೆ ಎಂಬುದನ್ನು ಊಹೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.
ರಾಜಕೀಯ ಅಸ್ಥಿರತೆ ಉಂಟು ಮಾಡಲು ಕಳೆದ 14 ತಿಂಗಳು ನಡೆದ ಪ್ರಯತ್ನ ನಡುವೆ ರಾಜ್ಯದ ಆರ್ಥಿಕ ಸ್ಥಿತಿ ಕಾಪಾಡಲು ಅಧಿಕಾರಿಗಳು ಸಹಕಾರ ನೀಡಿದ್ದು, ಅವರಿಗೆ ಧನ್ಯವಾದಗಳು. ಸರ್ಕಾರ ಅಸ್ಥಿರವಾದರೂ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಲು ಸಲಹೆ ನೀಡಿದ್ದೇನೆ. ಜನರ ಸ್ಪಂದನೆಗೆ ಸ್ಪಂದಿಸುವಂತೆ, ರಾಜ್ಯದ ಅಭಿವೃದ್ಧಿಗೆ ಪೂರಕವಾಗುವಂತೆ ಕಾರ್ಯನಿರ್ವಹಿಸಲು ತಿಳಿಸಲಾಗಿದೆ.
ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಕಳೆದ ಮೂರು ವಾರಗಳಿಂದ ಏನೇನಾಯ್ತು?
ಮುಖ್ಯಮಂತ್ರಿಯಾಗಿ ಪದತ್ಯಾಗ ಮಾಡಿದ ಹಿನ್ನೆಲೆಯಲ್ಲಿ ತಮ್ಮ ಆಡಳಿತದಲ್ಲಿ ಸಹಕರಿಸಿದ ಮುಖ್ಯಕಾರ್ಯದರ್ಶಿ ಸೇರಿದಂತೆ ಹಲವು ಅಧಿಕಾರಗಳಿಗೆ ಧನ್ಯವಾದ ಅರ್ಪಿಸಲು ಸಭೆ ನಡೆಸಿ ತಿಳಿಸಲಾಗಿದೆ. ಮುಂದಿನ ದಿನದಲ್ಲಿ ರಾಜ್ಯವನ್ನು ಆರ್ಥಿಕವಾಗಿ ಸದೃಢಗೊಳಿಸಲು ಕ್ರಮ ಕೈಗೊಳ್ಳುವುದು ಮತ್ತು ಒಂಭತ್ತು ಕೈಗಾರಿಕಾ ಕ್ಲಸ್ಟರ್ಗಳನ್ನು ವಿವಿಧ ಜಿಲ್ಲೆಗಳಲ್ಲಿ ಆರಂಭಿಸುವ ಯೋಜನೆ ಪ್ರಾರಂಭಿಸಲಾಗಿದ್ದು, ಅದನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವಂತೆ ತಿಳಿಸಲಾಗಿದೆ ಎಂದರು.
ತಮ್ಮ ಅಧಿಕಾರವಧಿಯಲ್ಲಿ ಎರಡು ಬಜೆಟ್ಗಳ ಮೂಲಕ ರೂಪಿಸಿದ ಯೋಜನೆಗಳನ್ನು ಅನುಷ್ಠಾನಗೊಳಿಸಲು ಅಧಿಕಾರಿಗಳು ಶ್ರಮಿಸಿದ್ದಾರೆ. ರಾಜ್ಯದಲ್ಲಿ ರಾಜಕೀಯ ವಿದ್ಯಮಾನಗಳು ಏನೇ ಇದ್ದರೂ ನಿರ್ಲಿಪ್ತರಾಗಿ ಜನಹಿತಕ್ಕಾಗಿ ಕಾರ್ಯ ನಿರ್ವಹಿಸಬೇಕು ಎಂದು ಹೇಳಿ ಅಧಿಕಾರಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಅಧಿಕಾರಿಗಳ ಪರವಾಗಿ ಮಾತನಾಡಿದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಕಳೆದ 14 ತಿಂಗಳ ಕಾರ್ಯ ನಿರ್ವಹಣೆಯ ಅವಧಿಯಲ್ಲಿ ಮುಖ್ಯಮಂತ್ರಿಯವರು ಅಧಿಕಾರಿಗಳನ್ನು ಸಹೋದರ ಭಾವದಿಂದ ವಿಶ್ವಾಸಕ್ಕೆ ತೆಗೆದುಕೊಂಡು ಕರ್ತವ್ಯ ನಿರ್ವಹಿಸಿದ್ದರು ಎಂದು ಸ್ಮರಿಸಿದರು.