ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಎಚ್’ಡಿಕೆ ಸವಾಲ್
ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಬದಲಾಗಿ ಸ್ವತಂತ್ರರಾಗಿ ಸ್ಪರ್ಧಿಸಿ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಸಾಮರ್ಥ್ಯ ತೋರಿಸಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.
ಬೆಂಗಳೂರು (ಜ.16): ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಬದಲಾಗಿ ಸ್ವತಂತ್ರರಾಗಿ ಸ್ಪರ್ಧಿಸಿ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಸಾಮರ್ಥ್ಯ ತೋರಿಸಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು 2006ರಲ್ಲಿ ಜೆಡಿಎಸ್ ತೊರೆದ ನಂತರ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ, ಕೇವಲ 200 ಮತಗಳ ಅಂತರದ ಪ್ರಯಾಸದ ಜಯ ಗಳಿಸಿದ್ದರು. ಆದರೆ ಸ್ವತಂತ್ರರಾಗಿ ಸ್ಪರ್ಧಿಸಿ ಗೆದ್ದಿರುವ ಉದಾಹರಣೆ ಇಲ್ಲ. ಆ ಸಾಮರ್ಥ್ಯವನ್ನು ಅವರು ಪ್ರದರ್ಶಿಸಲಿ ಎಂದು ಹೇಳಿದರು.
ಜೆಡಿಎಸ್ ಪಕ್ಷವನ್ನು ಇನ್ನಾವುದೇ ರಾಷ್ಟ್ರೀಯ ಪಕ್ಷದ ಹಂಗಿಲ್ಲದೇ ಸ್ವತಂತ್ರವಾಗಿ ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತಿದ್ದೇವೆಯೇ ಹೊರತು ಪರಿಸ್ಥಿತಿಯ ಲಾಭ ಪಡೆಯಲು ಹವಣಿಸಿಲ್ಲ. ಜೆಡಿಎಸ್ ಅಧಿಕಾರಕ್ಕಾಗಿ ಯಾವತ್ತೂ ರಾಷ್ಟ್ರೀಯ ಪಕ್ಷಗಳ ಮುಖಂಡರ ಮನೆ ಬಾಗಿಲಿಗೆ ಹೋಗುವುದಿಲ್ಲ.
ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಅವಕಾಶವಾದಿ, ಸಮಯ ಸಾಧಕ ಪಕ್ಷಗಳಾಗಿದ್ದು, ಪರಿಸ್ಥಿತಿಯ ಲಾಭ ಪಡೆದು ಪ್ರಾದೇಶಿಕ ಪಕ್ಷಗಳನ್ನು ಬಲಿ ಪಡೆಯುವ ಕೆಲಸ ಮಾಡುತ್ತಿವೆ ಎಂದು ವಾಗ್ದಾಳಿ ನಡೆಸಿದರು.