ಕೇಂದ್ರ ಸರ್ಕಾರದ ಈ ಕ್ರಮದಿಂದಾಗಿ ಕೆಲವರಿಗೆ ಭಾರಿ ಸಮಸ್ಯೆ ಉಂಟಾಗಿದೆ. ಆದರೆ, ಇನ್ನೂ ಕೆಲವರಿಗೆ ಇದರ ಬಿಸಿಯೇ ತಟ್ಟದೇ ಹೋಗದಿದ್ದುದು ಹೇಗೆ ಎಂದು ನ್ಯಾಯಪೀಠ ಪ್ರಶ್ನಿಸಿದೆ.

ನವದೆಹಲಿ(ಡಿ.15): ಕೆಲವೇ ಕೆಲವು ಮಂದಿಗೆ ಮಾತ್ರ ಭಾರಿ ಸಂಖ್ಯೆಯಲ್ಲಿ ಹೊಸ ಮುಖ ಬೆಲೆಯ ನೋಟುಗಳು ಹೇಗೆ ಸಿಗುತ್ತಿವೆ ಎಂದು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರವನ್ನು ಖಾರವಾಗಿ ಪ್ರಶ್ನಿಸಿದೆ.

Add Asianetnews Kannada as a Preferred SourcegooglePreferred

ನೋಟು ಅಮಾನ್ಯ ಮಾಡಿದ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿದ್ದ ಹಲವು ಅರ್ಜಿಗಳ ವಿಚಾರಣೆ ವೇಳೆ ಮುಖ್ಯ ನ್ಯಾ. ಟಿ.ಎಸ್.ಠಾಕೂರ್ ನೇತೃತ್ವದ ನ್ಯಾಯಪೀಠ ಈ ಪ್ರಶ್ನೆ ಹಾಕಿದೆ. ಕೇಂದ್ರ ಸರ್ಕಾರದ ಈ ಕ್ರಮದಿಂದಾಗಿ ಕೆಲವರಿಗೆ ಭಾರಿ ಸಮಸ್ಯೆ ಉಂಟಾಗಿದೆ. ಆದರೆ, ಇನ್ನೂ ಕೆಲವರಿಗೆ ಇದರ ಬಿಸಿಯೇ ತಟ್ಟದೇ ಹೋಗದಿದ್ದುದು ಹೇಗೆ ಎಂದು ನ್ಯಾಯಪೀಠ ಪ್ರಶ್ನಿಸಿದೆ.

‘ಸಾಮಾನ್ಯ ಜನರಿಗೆ ಪ್ರತಿ ವಾರಕ್ಕೆ ₹24 ಸಾವಿರ ಸಿಗುವುದೇ ಕಷ್ಟವಾಗಿದೆ. ಆದರೆ ಕೆಲವರು ಮಾತ್ರ ಭಾರಿ ಮೊತ್ತದ ಹೊಸ ನೋಟುಗಳನ್ನು ಇಟ್ಟುಕೊಂಡಿರುವುದು ಹೇಗೆ ಎಂದು ನ್ಯಾ.ಟಿ.ಎಸ್.ಠಾಕೂರ್ ಅವರು ಅಟಾರ್ನಿ ಜನರಲ್ ಮುಕುಲ್ ರೋಹಟಗಿ ಅವರನ್ನು ಪ್ರಶ್ನಿಸಿದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅಟಾರ್ನಿ ಜನರಲ್ ಬ್ಯಾಂಕ್‌'ಗಳ ಕೆಲವು ಮ್ಯಾನೇಜರ್‌ಗಳು ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ. ಅವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದರು.

ಅರ್ಜಿದಾರರ ಪರ ವಾದ ಮಂಡಿಸಿದ ಮಾಜಿ ಸಚಿವ ಕಪಿಲ್ ಸಿಬಲ್ ‘‘ಪ್ರತಿ ವಾರಕ್ಕೆ ₹24 ಸಾವಿರ ವಿಥ್‌'ಡ್ರಾ ಮಿತಿ ಹೇರಿರುವ ಸರ್ಕಾರದ ನಿರ್ಧಾರದಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗಿದೆ. ಇದರಿಂದಾಗಿ ಹಲವಾರು ಮಂದಿಗೆ ಅಗತ್ಯವಾಗಿರುವ ಹಣ ಸಿಗುತ್ತಿಲ್ಲ,’’ ಎಂದು ವಾದಿಸಿದರು. ಅದಕ್ಕೆ ಉತ್ತರಿಸಿದ ರೋಹಟಗಿ ‘‘ಇದುವರೆಗೆ ₹5 ಲಕ್ಷ ಕೋಟಿ ನೋಟುಗಳನ್ನು ಮುದ್ರಿಸಲಾಗಿದೆ. ಕಡಿಮೆ ಮುಖ ಬೆಲೆಯ ನೋಟುಗಳು ಈಗಾಗಲೇ ಚಲಾವಣೆಯಲ್ಲಿವೆ ಎಂದರು.

ಡಿಸಿಸಿ ಬ್ಯಾಂಕ್‌ಗಳಿಗೆ ಅವಕಾಶ

ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌'ಗಳಲ್ಲಿ ಹಳೆಯ ಮುಖ ಬೆಲೆಯ ನೋಟುಗಳನ್ನು ಸ್ವೀಕರಿಸಿ ಅವುಗಳನ್ನು ಆರ್‌ಬಿಐಗೆ ಸಲ್ಲಿಸುವುದಕ್ಕೆ ಶೀಘ್ರದಲ್ಲಿಯೇ ಅವಕಾಶ ಮಾಡಿಕೊಡಲಾಗುತ್ತದೆ. ಈ ಬಗ್ಗೆ ನಿಮ್ಮ ಗ್ರಾಹಕರನ್ನು ಅರಿಯಿರಿ (ಕೆವೈಸಿ) ಫಾರಂಗಳನ್ನು ಭರ್ತಿ ಮಾಡುವ ಪ್ರಕ್ರಿಯೆನ್ನು ಅವುಗಳು ಪೂರ್ತಿಗೊಳಿಸಬೇಕು ಎಂದು ಅಟಾರ್ನಿ ಜನರಲ್ ಮುಕುಲ್ ರೋಹಟಗಿ ಸುಪ್ರೀಂಕೋರ್ಟ್‌'ಗೆ ಅರಿಕೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಅವರು ಅಫಿಡವಿಟ್ ಅನ್ನೂ ನ್ಯಾಯಪೀಠಕ್ಕೆ ಸಲ್ಲಿಕೆ ಮಾಡಿದ್ದಾರೆ.