ದೇವೇಗೌಡ, ರಾಮುಲು ಸೂಚಿಸಿದರೆ ಗಂಗಾವತಿಯಿಂದ ಸ್ಪರ್ಧೆ: ಶ್ರೀನಾಥ್
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಮಾಜಿ ಸಂಸದ, ನನ್ನ ತಂದೆ ಎಚ್.ಜಿ.ರಾಮುಲು ಸೂಚಿಸಿದರೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ವಿಧಾನ ಪರಿಷತ್ ಮಾಜಿ ಸದಸ್ಯ ಎಚ್.ಆರ್.ಶ್ರೀನಾಥ್ ಹೇಳಿದರು.
ಗಂಗಾವತಿ : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಮಾಜಿ ಸಂಸದ, ನನ್ನ ತಂದೆ ಎಚ್.ಜಿ.ರಾಮುಲು ಸೂಚಿಸಿದರೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ವಿಧಾನ ಪರಿಷತ್ ಮಾಜಿ ಸದಸ್ಯ ಎಚ್.ಆರ್.ಶ್ರೀನಾಥ್ ಹೇಳಿದರು.
ತಮ್ಮ ನಿವಾಸದಲ್ಲಿ ಮಂಗಳವಾರ ಪತ್ರಕರ್ತರೊಂದಿಗೆ ಮಾತನಾಡಿ ರಾಜ್ಯದಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಪಕ್ಷ ಸಂಘಟನೆಗೊಳ್ಳುತ್ತಿದ್ದು, ಹೈದರಾಬಾದ್ ಕರ್ನಾಟಕದ 38 ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಹೊಣೆಗಾರಿಕೆ ನನಗೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಆ ಪ್ರದೇಶದಲ್ಲಿ ಪ್ರವಾಸ ಕೈಗೊಳ್ಳುವುದಾಗಿ ತಿಳಿಸಿದರು.
ಆಡಳಿತಾರೂಢ ಸಿದ್ದರಾಮಯ್ಯ ಸರ್ಕಾರದ ದುರಾಡಳಿತ ಮತ್ತು ವರಿಷ್ಠರ ನಿರ್ಲಕ್ಷ್ಯ ಧೋರಣೆ ವಿರೋಧಿಸಿ ಕಾಂಗ್ರೆಸ್ಗೆ ಗುಡ್ ಬೈ ಹೇಳಿ ಜೆಡಿಎಸ್ ಸೇರಿದ್ದೇನೆ. ಸೇರ್ಪಡೆಯಾಗಿ ಸ್ವಲ್ಪ ದಿನದಲ್ಲೇ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ. ಈ ಮೂಲಕ ಹೆಚ್ಚಿನ ಹೊಣೆಗಾರಿಕೆ ಹೆಗಲೇರಿದೆ ಎಂದು ಮಾಹಿತಿ ನೀಡಿದರು.
ದೇವೇಗೌಡರು ಮತ್ತು ನನ್ನ ತಂದೆ ಎಚ್.ಜಿ.ರಾಮುಲು ಸೂಚಿಸಿದರೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವೆ.
- ಎಚ್.ಆರ್. ಶ್ರೀನಾಥ, ಜೆಡಿಎಸ್ ಮುಖಂಡ