ಜೆಡಿಎಸ್‌- ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದ 2ನೇ ಹಂತದ ಸಂಪುಟ ವಿಸ್ತರಣೆಯಲ್ಲಿ ನನಗೆ ಹೈಕಮಾಂಡ್‌ ಸಚಿವ ಸ್ಥಾನ ನೀಡಿದರೂ ನಾನು ಸ್ವೀಕರಿಸುವುದಿಲ್ಲ. ಪಕ್ಷದಲ್ಲಿ ಯಾವುದೇ ಹುದ್ದೆಯೂ ನನಗೆ ಬೇಡ. ಸಾಮಾನ್ಯ ಶಾಸಕನಾಗಿ ಪಕ್ಷದ ಸಂಘಟನೆಗೆ ಶ್ರಮಿಸುತ್ತೇನೆ ಎಂದು ಸಚಿವ ಸ್ಥಾನ ಸಿಗದೆ ಅತೃಪ್ತಗೊಂಡಿರುವ ಯಮಕನಮರಡಿ ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. 

ಬೆಳಗಾವಿ : ಜೆಡಿಎಸ್‌- ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದ 2ನೇ ಹಂತದ ಸಂಪುಟ ವಿಸ್ತರಣೆಯಲ್ಲಿ ನನಗೆ ಹೈಕಮಾಂಡ್‌ ಸಚಿವ ಸ್ಥಾನ ನೀಡಿದರೂ ನಾನು ಸ್ವೀಕರಿಸುವುದಿಲ್ಲ. ಪಕ್ಷದಲ್ಲಿ ಯಾವುದೇ ಹುದ್ದೆಯೂ ನನಗೆ ಬೇಡ. ಸಾಮಾನ್ಯ ಶಾಸಕನಾಗಿ ಪಕ್ಷದ ಸಂಘಟನೆಗೆ ಶ್ರಮಿಸುತ್ತೇನೆ ಎಂದು ಸಚಿವ ಸ್ಥಾನ ಸಿಗದೆ ಅತೃಪ್ತಗೊಂಡಿರುವ ಯಮಕನಮರಡಿ ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಪಕ್ಷದ ಹೈಕಮಾಂಡ್‌ ಬುಲಾವ್‌ ನೀಡಿಲ್ಲ. ಎಲ್ಲ ಅತೃಪ್ತ ಶಾಸಕರ ಪರವಾಗಿ ಮಾಜಿ ಸಚಿವ ಎಂ.ಬಿ. ಪಾಟೀಲ ಹೈಕಮಾಂಡ್‌ ಬಳಿಗೆ ತೆರಳಿದ್ದಾರೆ. ಅವರೇ ಎಲ್ಲ ವಿಚಾರಗಳನ್ನು ಹೈಕಮಾಂಡ್‌ ಎದುರು ಮಂಡಿಸುವರು. ಜೂ.11ರಂದು ಮತ್ತೊಂದು ಅತೃಪ್ತ ಶಾಸಕರ ಸಭೆ ನಡೆಯಲಿದ್ದು, ನಂತರ ಮುಂದಿನ ರಾಜಕೀಯ ನಡೆ ಕುರಿತು ತೀರ್ಮಾನಿಸಲಾಗುವುದು ಎಂದರು.

ರಮೇಶ ನಂಬಿಕೆಗೆ ಅರ್ಹರಲ್ಲ: ಸಚಿವ ರಮೇಶ ಜಾರಕಿಹೊಳಿ ನನಗಾಗಿ ಸಚಿವ ಸ್ಥಾನ ತ್ಯಾಗ ಮಾಡುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ. ಆದರೆ, ಅವರು ನುಡಿದಂತೆ ನಡೆದುಕೊಳ್ಳುವ ಮನುಷ್ಯನಲ್ಲ. ವಿನಾಕಾರಣ ಸಚಿವ ಸ್ಥಾನ ತ್ಯಾಗ ಮಾಡುವುದಾಗಿ ದಿಕ್ಕು ತಪ್ಪಿಸುತ್ತಿದ್ದಾರೆ. ಕಳೆದ 40 ವರ್ಷಗಳಿಂದ ನಾನು ರಮೇಶ ಅವರನ್ನು ಬಲ್ಲವನಾಗಿದ್ದು, ಅವರ ಹೇಳಿಕೆಯಿಂದ ಏನೂ ಆಗದು. ನಾವು ಜಾಗೃತರಾಗಬೇಕಿದೆ ಎಂದು ಹೇಳಿದರು.

ಪ್ರತಿಭಟನೆ ತಡೆಯಲಾರೆ: ನನಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಮಾನವ ಬಂಧುತ್ವ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳು ಬೀದಿಗಿಳಿದು ರಾಜ್ಯಾದ್ಯಂತ ಹೋರಾಟ ನಡೆಸುತ್ತಿವೆ. ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಎಲ್ಲ ಸಂಘಟನೆಗಳು ಹೋರಾಟ ಮಾಡುತ್ತಿವೆ. ಅದನ್ನು ನಾನು ತಡೆಯುವುದಿಲ್ಲ ಎಂದು ಹೇಳಿದರು.

ವಿಧಾನಸಭೆ ಚುನಾವಣೆಯಲ್ಲಿ ನಾನು ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಿದ್ದೇನೆ ಹೊರತು, ಯಾವೊಬ್ಬ ಅಭ್ಯರ್ಥಿಯ ಸೋಲಿಗೆ ನಾನು ಕಾರಣನಲ್ಲ. ಆದರೆ, ಕೆಲ ಮಾಧ್ಯಮಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಸೋಲಿಗೆ ನಾನೇ ಕಾರಣ ಎಂಬಂತೆ ಸುದ್ದಿ ಬರುತ್ತಿವೆ. ಇದು ಊಹಾಪೋಹದ ವರದಿಯಾಗಿದೆ ಎಂದು ಪ್ರತಿಕ್ರಿಯಿಸಿದರು.