ಮತ್ತೆ ರಾಜ್ಯದಲ್ಲಿ ಭಾರಿ ಮಳೆ : ಹವಾಮಾನ ಇಲಾಖೆ ಎಚ್ಚರಿಕೆ
ಕಳೆದ ಕೆಲ ದಿನಗಳಿಂದ ಕ್ಷೀಣಿಸಿರುವ ಮುಂಗಾರು ಮಳೆ ಮತ್ತೆ ಬಿರುಸಾಗುವ ಲಕ್ಷಣಗಳು ಕಂಡುಬರುತ್ತಿದ್ದು, ಜು.6ರಿಂದ 11ರವರೆಗೆ ಕರಾವಳಿಯಾದ್ಯಂತ ಮತ್ತು ಒಳನಾಡಿನ ಹಲವೆಡೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬೆಂಗಳೂರು : ಕಳೆದ ಕೆಲ ದಿನಗಳಿಂದ ಕ್ಷೀಣಿಸಿರುವ ಮುಂಗಾರು ಮಳೆ ಮತ್ತೆ ಬಿರುಸಾಗುವ ಲಕ್ಷಣಗಳು ಕಂಡುಬರುತ್ತಿದ್ದು, ಜು.6ರಿಂದ 11ರವರೆಗೆ ಕರಾವಳಿಯಾದ್ಯಂತ ಮತ್ತು ಒಳನಾಡಿನ ಹಲವೆಡೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಜು.6ರಿಂದ ಮುಂದಿನ ಐದಾರು ದಿನಗಳವರೆಗೆ ಕರಾವಳಿಯ ಬಹುತೇಕ ಕಡೆ ಹಾಗೂ ಉತ್ತರ ಒಳನಾಡಿನ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲೂ ಭಾರೀ ಮಳೆಯ ನಿರೀಕ್ಷೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.
ಪ್ರಮುಖವಾಗಿ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಅಲ್ಲಲ್ಲಿ 115 ಮಿ.ಮೀ.ಗೂ ಹೆಚ್ಚು ಅತಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಇನ್ನು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಅತಿ ಭಾರೀ ಮಳೆ ಬೀಳುವ ಸಾಧ್ಯತೆ ಇದೆ. ಅದೇ ರೀತಿ ದಕ್ಷಿಣ ಒಳನಾಡಿನಲ್ಲೂ ಸಾಧಾರಣ ಮಳೆಯ ನಿರೀಕ್ಷೆ ಮಾಡಲಾಗಿದ್ದು, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳ ವಿವಿಧೆಡೆ ಅತಿ ಭಾರೀ ಮಳೆಯಾಗುವ ಮುನ್ಸೂಚನೆ ಪ್ರಸ್ತುತ ಹವಾಮಾನ ಬದಲಾವಣೆಯಲ್ಲಿ ಕಂಡುಬರುತ್ತಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.
ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಅಧಿಕಾರಿಗಳು ಕೂಡ ಇದೇ ಮಾಹಿತಿ ನೀಡಿದ್ದು, ಜುಲೈ 6ರಿಂದ ಮುಂದಿನ ಐದಾರು ದಿನಗಳ ಕಾಲ ರಾಜ್ಯಾದ್ಯಂತ ಚದುರಿದಂತೆ ವ್ಯಾಪಕ ಮಳೆಯಾಗಲಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಅತಿ ಭಾರೀ ಮಳೆ ನಿರೀಕ್ಷಿಸಲಾಗಿದೆ ಎಂದು ಕೇಂದ್ರದ ನಿರ್ದೇಶಕ ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.