ರಾಜ್ಯದ ಮತ್ತೊಬ್ಬ ಶಾಸಕರ ರಾಜೀನಾಮೆ : ಬಿಜೆಪಿ ಸೇರ್ಪಡೆ ಘೋಷಣೆ
ಹಿಂದೆ ಮೂರು ಬಾರಿ ಬಿಜೆಪಿಯಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಹೀಗಾಗಿ ಬಿಜೆಪಿ ಋಣ ನನ್ನ ಮೇಲಿದೆ.
ರಾಣೆಬೆನ್ನೂರು(ಜ.31): ಉಡುಪಿ ಜಿಲ್ಲೆಯ ಕುಂದಾಪುರ ಕ್ಷೇತ್ರದ ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ನಿರೀಕ್ಷೆಯಂತೆಯೇ ಬಿಜೆಪಿಗೆ ಸೇರ್ಪಡೆಯಾಗುತ್ತಿ ದ್ದಾರೆ.
ಮಂಗಳವಾರ ಸಂಜೆ ನಗರದ ಪ್ರವಾಸಿ ಮಂದಿರದಲ್ಲಿ ವಿಧಾನ ಸಭಾಧ್ಯಕ್ಷ ಕೆ.ಬಿ. ಕೋಳಿವಾಡ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ಮೂರು ಬಾರಿ ಬಿಜೆಪಿಯಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಹೀಗಾಗಿ ಬಿಜೆಪಿ ಋಣ ನನ್ನ ಮೇಲಿದೆ. ಎಲ್ಲ ಪಕ್ಷಗಳಲ್ಲಿಯೂ ಭಿನ್ನಮತವಿರುವುದು ಸಹಜ. ಪ್ರಧಾನಿ ನರೇಂದ್ರ ಮೋದಿ ಮೇಲೆ ಅಪಾರ ಗೌರವವಿದ್ದು, ಸ್ವಇಚ್ಛೆಯಿಂದ ಯಾವುದೇ ಷರತ್ತಿಲ್ಲದೆ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದೇನೆ. ಸ್ಥಳೀಯ ಜನತೆ ಹಾಗೂ ಆತ್ಮೀಯರ ಒತ್ತಾಸೆ ಮೇರೆಗೆ ನಾನು ಈ ನಿರ್ಧಾರಕ್ಕೆ ಬಂದಿದ್ದೇನೆ ಎಂದರು.
ಈ ಹಿಂದೆ ಬಿಜೆಪಿಯಲ್ಲೇ ಇದ್ದ ಹಾಲಾಡಿ ಕಳೆದ ಚುನಾವಣೆ ವೇಳೆ ರಾಜ್ಯ ಮುಖಂಡರ ಬಗ್ಗೆ ಮುನಿಸಿಕೊಂಡು ಪಕ್ಷ ತೊರೆದಿದ್ದರು. ಬಳಿಕ ಪಕ್ಷೇತರನಾಗಿ ಸ್ಪರ್ಧಿಸಿ ಭಾರಿ ಅಂತರದಲ್ಲಿ ಜಯಿಸಿದ್ದರು.