ಲೋಕಸಭೆಗೆ ಜೆಡಿಎಸ್ -ಕಾಂಗ್ರೆಸ್ ಮೈತ್ರಿ : ಯಾರಿಗೆ ಯಾವ ಕ್ಷೇತ್ರ..?
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆಯನ್ನು ಎದುರಿಸಲಿದ್ದು, ಚುನಾವಣೆಗೆ ಸಿದ್ದರಾಮಯ್ಯ ಸ್ಪರ್ಧೆ ಇನ್ನೂ ಖಚಿತವಾಗಿಲ್ಲ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆಗೆ ಸ್ಪರ್ಧಿಸುವ ವಿಚಾರದ ಬಗ್ಗೆ ಇನ್ನೂ ಯಾವುದೇ ತೀರ್ಮಾನವಾಗಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಸ್ಪರ್ಧೆ ವಿಚಾರವನ್ನು ಪಕ್ಷದ ವೇದಿಕೆಯಲ್ಲಿ ಚರ್ಚಿಸಲಾಗುವುದು.
ಈ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ಆದರೆ, ಇದುವರೆಗೂ ಯಾವುದೇ ರೀತಿಯ ತೀರ್ಮಾನ ಕೈಗೊಳ್ಳಲಾಗಿಲ್ಲ ಎಂದರು. ಇನ್ನು ಜೆಡಿಎಸ್ನೊಂದಿಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುವುದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಷ್ಟವಿಲ್ಲ ಎನ್ನುವುದು ಕೇವಲ ಸುಳ್ಳು. ಮುಂಬರುವ ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ ಜೆಡಿಎಸ್ನೊಂದಿಗೆ ಚುನಾವಣಾ ಮೈತ್ರಿ ಮಾಡಿಕೊಳ್ಳಲಿದೆ
ಎಂದು ಸ್ಪಷ್ಟಪಡಿಸಿದರು.
ಜೆಡಿಎಸ್ ಜೊತೆ ಮೈತ್ರಿ ಇಷ್ಟವಿಲ್ಲ ಎಂದು ಸಮನ್ವಯ ಸಮಿತಿ ಅಧ್ಯಕ್ಷರೂ ಆದ ಸಿದ್ದರಾಮಯ್ಯ ಅವರು ಎಲ್ಲಿಯೂ ಹೇಳಿಲ್ಲ. ಮೈತ್ರಿಗೆ ಅವರ ವಿರೋಧವಿದೆ ಎಂಬುದು ಸುಳ್ಳು. ಈ ಬಗ್ಗೆ ಇಲ್ಲದ ಊಹಾಪೋಹ ಹಡುವುದು ಬೇಡ. ಮೈತ್ರಿ ವಿಚಾರವಾಗಿ ಅವರು ಎಐಸಿಸಿ ಕಾರ್ಯಾಕಾರಿಣಿ ಸಭೆಯಲ್ಲಿ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಹಾಗಾಗಿ ಲೋಕಸಭಾ ಚುನಾವಣೆ ವೇಳೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಜೊತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಲಿದೆ.
ಈ ಬಗ್ಗೆ ದೆಹಲಿಯಲ್ಲಿ ಹೈಕಮಾಂಡ್ ನಾಯಕರು ಚರ್ಚೆ ಮಾಡಿ ತೀರ್ಮಾನ ಮಾಡಿದ್ದಾರೆ ಎಂದು ಸ್ಪಷ್ಟಪಡಿಸಿದರು. ಲೋಕಸಭಾ ಚುನಾವಣೆ ಮೈತ್ರಿ ಸಂಬಂಧ ಮಾಜಿ ಸಚಿವ ಎ.ಮಂಜು ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮಂಜು ಅವರು ಹಾಸನ ಮತ್ತು ಮಂಡ್ಯ ಕ್ಷೇತ್ರಗಳನ್ನು ಬಿಟ್ಟುಕೊಡಲಿ ಎಂದು ಹೇಳಿರುವುದು ನನಗೆ ಗೊತ್ತಿಲ್ಲ. ಆದರೆ, ಪಕ್ಷ ಹೇಳಿದಂತೆ ನಡೆಯಲು ಸಿದ್ಧ ಎಂದು ಹೇಳಿರುವುದನ್ನು ಗಮನಿಸಿದ್ದೇನೆ ಎಂದರು. ಮಂಜು ಅವರ ವೈಯಕ್ತಿಕ ಅಭಿಪ್ರಾಯ ಹೇಳಿರಬಹುದು. ಆದರೆ, ಈಗಲೇ ಯಾವ ಕ್ಷೇತ್ರ ಇಟ್ಟುಕೊಳ್ಳಬೇಕು, ಯಾವುದನ್ನು ಬಿಟ್ಟುಕೊಡಬೇಕು ಎಂಬುದರ ಬಗ್ಗೆ ಚರ್ಚಿಸುವುದು ಬೇಡ ಎಂದರು.