ಮೈತ್ರಿ ಸರ್ಕಾರದ ಬಗ್ಗೆ ದೇವೇಗೌಡರು ನೀಡಿದ ಎಚ್ಚರಿಕೆ ಸಂದೇಶವೇನು..?
ಮಾಜಿ ಪ್ರಧಾನಿ ಜೆಡಿಎಸ್ ಮುಖಂಡ ಎಚ್.ಡಿ.ದೇವೇಗೌಡ ಅವರು ಎಚ್ಚರಿಕೆ ಸಂದೇಶವೊಂದನ್ನು ನೀಡಿದ್ದಾರೆ. ಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಒಂದು ಪಕ್ಷ ಮೈತ್ರಿ ಧರ್ಮವನ್ನು ಉಲ್ಲಂಘಿಸಿದರೆ ಅದು ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರದ ಪತನಕ್ಕೆ ನಾಂದಿ ಹಾಡಲಿದೆ ಎಂದು ಹೇಳಿದ್ದಾರೆ.
ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಒಂದು ಪಕ್ಷ ಮೈತ್ರಿ ಧರ್ಮವನ್ನು ಉಲ್ಲಂಘಿಸಿದರೆ ಅದು ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರದ ಪತನಕ್ಕೆ ನಾಂದಿ ಹಾಡಲಿದೆ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಎಚ್ಚರಿಕೆ ನೀಡಿದ್ದಾರೆ.
ಭಾನುವಾರ ಪಿಟಿಐ ಸುದ್ದಿಸಂಸ್ಥೆಗೆ ಸಂದರ್ಶನ ನೀಡಿರುವ ದೇವೇಗೌಡ, ‘ಒಂದು ವೇಳೆ ಯಾರಾದರೂ ತಾವು ಎಲ್ಲರಿಗಿಂತ ಮೇಲು ಮತ್ತು ಜೊತೆಗಾರ ಪಕ್ಷದ ಮೇಲೆ ಹಿಡಿತ ಸಾಧಿಸುವ ಯೋಚನೆ ಹೊಂದಿದ್ದರೆ ಅದು ಅಂತಿಮವಾಗಿ ದುರಂತಕ್ಕೆ ಕಾರಣವಾಗಲಿದ್ದು, ಕೋಮುವಾದಿ ಶಕ್ತಿಗಳಿಗೆ ಪ್ರಯೋಜನವಾಗಲಿದೆ’ ಎಂದು ಹೇಳಿದ್ದಾರೆ.
ಇತ್ತೀಚೆಗೆ ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಅವರು ಕಾಂಗ್ರೆಸ್ ಪಕ್ಷ ಮೈತ್ರಿ ಧರ್ಮವನ್ನು ಉಲ್ಲಂಘಿಸುತ್ತಿದೆ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಸುಗಮವಾಗಿ ಕಾರ್ಯನಿರ್ವಹಿಸಲು ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿದ್ದ ಬೆನ್ನಲ್ಲೇ, ದೇವೇಗೌಡರು ಮೈತ್ರಿ ಧರ್ಮ ಪರಿಪಾಲನೆಯ ಮಾತನಾಡಿದ್ದಾರೆ.
ಅಲ್ಲದೇ, ಕರ್ನಾಟಕದಲ್ಲಿ ಕೋಮುವಾದಿ ಶಕ್ತಿಗಳನ್ನು ದೂರ ಇಡುವ ಉದ್ದೇಶ ದಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಸಮ್ಮಿಶ್ರ ಸರ್ಕಾರದ ಸುಗಮ ಕಾರ್ಯನಿರ್ವ ಹಣೆಗಾಗಿ ಸೂತ್ರವೊಂದನ್ನು ಕಂಡುಕೊಳ್ಳುವ ನಿಟ್ಟಿನಿಂದ ಕಾರ್ಯ ನಿರ್ವಹಿಸುತ್ತಿವೆ ಎಂದು ದೇವೇಗೌಡ ಹೇಳಿದ್ದಾರೆ. ಇದೇ ವೇಳೆ, ಸಮ್ಮಿಶ್ರ ಸರ್ಕಾರ ಸುಗಮವಾಗಿ ಕಾರ್ಯನಿರ್ವಹಿಸು ವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಾಸಕ್ತಿ ಹೊಂದಿದ್ದಾರೆ ಎಂದು ಬಸವರಾಜ ಹೊರಟ್ಟಿ ಅವರ ಹೇಳಿಕೆಯನ್ನು ದೇವೇಗೌಡ ತಳ್ಳಿಹಾಕಿದ್ದಾರೆ.
‘ಸಿದ್ದರಾಮಯ್ಯ ಅವರಿಗೆ ಇಂತಹ ಉದ್ದೇಶ ಇಲ್ಲ. ಏಕೆಂದರೆ ಅವರು 5 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಇದ್ದವರು. ಹೀಗಾಗಿ ಸಹಜವಾಗಿಯೇ ತಮ್ಮ ಆಡಳಿತ ಅವಧಿಯಲ್ಲಿ ಜಾರಿಗೊಳಿಸಿದ ಯೋಜನೆಗಳನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ಬಯಸಿದ್ದಾರೆ.
ಕೆಲವರಿಗೆ ಈ ರೀತಿ ಹೇಳುವ ಅಧಿಕಾರ ಇದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇವೆಲ್ಲಾ ಸಹಜ ಮತ್ತು ಎಲ್ಲಾ ಪಕ್ಷಗಳಲ್ಲೂ ಇರುತ್ತವೆ’ ಎಂದು ಹೇಳಿದ್ದಾರೆ.