ಜೆಡಿಎಸ್ ನಲ್ಲೂ ಅಸಮಾಧಾನದ ಹೊಗೆ
ಜೆಡಿಎಸ್ ನಲ್ಲೂ ಇದೀಗ ಅಸಮಾಧಾನದ ಹೊಗೆಯೊಂದು ಭುಗಿಲೆದ್ದಿದೆ. ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್ ಅಭ್ಯರ್ಥಿಯಾಗಿ ಎಚ್.ಎಂ. ರಮೇಶ್ಗೌಡ ನಾಮಪತ್ರ ಸಲ್ಲಿಸಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಲಾಗಿದೆ
ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಎಚ್.ಎಂ. ರಮೇಶ್ಗೌಡ ನಾಮಪತ್ರ ಸಲ್ಲಿಸಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಪಕ್ಷದ ಅತೃಪ್ತ ನಾಯಕರು ಬುಧವಾರ ಸಭೆ ನಡೆಸಿ ಮುಂದಿನ ನಡೆಯ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಯಿದೆ.
ಪಕ್ಷದ ಬೆಂಗಳೂರು ನಗರ ಘಟಕದ ಅಧ್ಯಕ್ಷ ಆರ್.ಪ್ರಕಾಶ್ ಅಧ್ಯಕ್ಷತೆಯಲ್ಲಿ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಸಭೆ ನಡೆಸಲು ನಿರ್ಧರಿಸಲಾಗಿದೆ. ಸಭೆಯಲ್ಲಿ ಬೆಂಗಳೂರು ಮಹಾನಗರದ ಪ್ರಮುಖ ನಾಯಕರು ಭಾಗವಹಿಸಿ ಮುಂದಿನ ನಡೆಯ ಬಗ್ಗೆ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಜ್ಯಾಧ್ಯಕ್ಷರಿಗೂ ಬೆಲೆ ಇಲ್ವಾ?: ರಮೇಶ್ ಗೌಡ ಅವರಿಗೆ ಅವಕಾಶ ನೀಡಲು ಸ್ವತಃ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಸಹ ವಿರೋಧ ವ್ಯಕ್ತಪಡಿಸಿದ್ದರು. ಜೆಡಿಎಸ್ನ ರಾಜ್ಯಾಧ್ಯಕ್ಷರಿಗೂ ಪಕ್ಷದಲ್ಲಿ ಬೆಲೆ ಇಲ್ಲದಂತಾಗಿದೆ.
ಪಕ್ಷದ ವರಿಷ್ಠರಾದ ಎಚ್.ಡಿ.ದೇವೇಗೌಡ ಮತ್ತು ಕುಮಾರಸ್ವಾಮಿ ಅವರನ್ನು ನಂಬಿ ಜೆಡಿಎಸ್ನಲ್ಲಿ ರಾಜಕಾರಣ ಮಾಡುತ್ತಿದ್ದರೂ ಸೂಕ್ತ ಸ್ಥಾನ-ಮಾನ ಸಿಕ್ಕಿಲ್ಲ. ಹೀಗಾಗಿ ಪಕ್ಷದಲ್ಲಿನ ಬೆಳವಣಿಗೆಯಿಂದ ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.