ಸಿಎಂ BSY ಭೇಟಿ : ಬಿಜೆಪಿಯತ್ತ ಜೆಡಿಎಸ್ ಶಾಸಕ?
ಹಠಾತ್ ರಾಜಕೀಯ ಬೆಳವಣಿಗೆಯೊಂದರಲ್ಲಿ ಜೆಡಿಎಸ್ ಶಾಸಕರೋರ್ವರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಭೇಟಿ ಮಾಡಿದ್ದಾರೆ. ಈ ಭೇಟಿ ಅಚ್ಚರಿಗೆ ಕಾರಣವಾಗಿದೆ.
ಬೆಂಗಳೂರು [ಆ.13]: ಇತ್ತೀಚೆಗೆ ಸ್ವಪಕ್ಷೀಯರ ವಿರುದ್ಧ ಬೇಸರ ವ್ಯಕ್ತಪಡಿಸಿ ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡಿದ್ದ ಜೆಡಿಎಸ್ನ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಜಿ.ಟಿ.ದೇವೇಗೌಡ ಹಠಾತ್ ರಾಜಕೀಯ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವುದು ತೀವ್ರ ಕುತೂಹಲ ಮೂಡಿಸಿದೆ.
ಸೋಮವಾರ ರಾತ್ರಿ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ ಜಿ.ಟಿ.ದೇವೇಗೌಡ ಕೆಲ ಕಾಲ ಮಾತುಕತೆ ನಡೆಸಿದರು. ಅವರಿಗೆ ಜೆಡಿಎಸ್ನ ಬಂಡಾಯ ನಾಯಕ ಎಚ್.ವಿಶ್ವನಾಥ್ ಮತ್ತು ಕಾಂಗ್ರೆಸ್ನ ಬಂಡಾಯ ನಾಯಕ ಎಸ್.ಟಿ.ಸೋಮಶೇಖರ್ ಅವರು ಸಾಥ್ ನೀಡಿದ್ದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಅನರ್ಹ ಶಾಸಕರೊಂದಿಗೆ ಯಡಿಯೂರಪ್ಪ ಅವರನ್ನು ಭೇಟಿ ಮಾಡುವ ಮೂಲಕ ಬಿಜೆಪಿಯತ್ತ ಒಲವು ತೋರಿದ್ದಾರೆಯೇ ಎಂಬ ಅನುಮಾನಗಳು ವ್ಯಕ್ತವಾಗಿವೆ.
ಕರ್ನಾಟಕ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಮೈಸೂರು ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆಗೆ ಸಂಬಂಧಿಸಿದಂತೆ ಭೇಟಿಯಾಗಿದ್ದು, ಯಾವುದೇ ರಾಜಕೀಯ ಕಾರಣಕ್ಕಾಗಿ ಅಲ್ಲ ಎಂದು ದೇವೇಗೌಡ ಅವರು ನಂತರ ಸುದ್ದಿಗಾರರಿಗೆ ಸ್ಪಷ್ಟನೆ ನೀಡಿದರು.