ಓವೈಸಿ ಜತೆ ಮೈತ್ರಿ ಫೈನಲ್ ಆಗಿಲ್ಲ : ಎಚ್’ಡಿಡಿ
ಅಸಾದುದ್ದೀನ್ ಒವೈಸಿ ಅವರ ಎಐಎಂಐಎಂ ಪಕ್ಷದ ಜೊತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಖಚಿತ ತೀರ್ಮಾನಕ್ಕೆ ಬಂದಿಲ್ಲ. ಮುಂದೆ ಯಾವುದೇ ಕಾರಣಕ್ಕೂ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದರು.
ಹಾಸನ: ಅಸಾದುದ್ದೀನ್ ಒವೈಸಿ ಅವರ ಎಐಎಂಐಎಂ ಪಕ್ಷದ ಜೊತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಖಚಿತ ತೀರ್ಮಾನಕ್ಕೆ ಬಂದಿಲ್ಲ. ಮುಂದೆ ಯಾವುದೇ ಕಾರಣಕ್ಕೂ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಈಗ ಬಿಎಸ್ಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿರುವುದರ ಅರ್ಥ ಮತ್ತು ಸಂದೇಶ ಮುಂದೆ ಯಾವುದೇ ಕಾರಣಕ್ಕೂ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದೇ ಆಗಿದೆ.
ಮುಂದಿನ ಲೋಕಸಭೆ ಚುನಾವಣೆಯಲ್ಲೂ ಬಿಎಸ್ಪಿ ಜೊತೆ ಹೊಂದಾಣಿಕೆ ಮುಂದು ವರಿಯುತ್ತದೆ. ಈಗಾಗಲೇ ಎನ್ಸಿಪಿ ಜೊತೆಯೂ ಕೆಲ ಸೀಟುಗಳ ಹೊಂದಾಣಿಕೆ ಆಗಿದೆ. ಓವೈಸಿ ಪಕ್ಷದವರು ನಮ್ಮ ಬಳಿ ಹೊಂದಾಣಿಕೆ ಪ್ರಸ್ತಾಪ ಇಟ್ಟಿದ್ದು ನಿಜ. ಆದರೆ, ಖಚಿತ ಅಭಿಪ್ರಾಯಕ್ಕೆ ಬಂದಿಲ್ಲ ಎಂದರು.
ರಾಜ್ಯಸಭೆಗೆ ಅಭ್ಯರ್ಥಿ ಪ್ರಕಟಿಸ್ತೇವೆ: ನಂಜನಗೂಡು, ಗುಂಡ್ಲುಪೇಟೆ ವಿಧಾನಸಭಾ ಉಪ ಚುನಾವಣೆಯಲ್ಲಿ ಜೆಡಿಎಸ್ ನಿಂದ ಅಭ್ಯರ್ಥಿಗಳನ್ನು ಹಾಕದೆ ಬಿಟ್ಟುಕೊಟ್ಟಿರುವುದಲ್ಲದೆ, ಬೆಂಗಳೂರು ಮಹಾನಗರ ಪಾಲಿಕೆಯಲ್ಲೂ ತಲೆತಗ್ಗಿಸಿದ್ದೇನೆ. ರಾಜ್ಯಸಭಾ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಹಾಕುತ್ತೇವೆ. ಅಭ್ಯರ್ಥಿ ಹೆಸರನ್ನು ಸದ್ಯದಲ್ಲೇ ಪ್ರಕಟಿಸಲಾಗುವುದು ಎಂದು ಮಾಜಿ ಪ್ರಧಾನಿ ದೇವೇಗೌಡ ತಿಳಿಸಿದರು.
ಈ ಮೂಲಕ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ತಮ್ಮ ಅಭ್ಯರ್ಥಿಯನ್ನು ಬೆಂಬಲಿಸಬೇಕೆಂದು ಸೂಚ್ಯವಾಗಿ ತಿಳಿಸಿದರು.