ರಾಜ್ಯದಲ್ಲಿ ಎದುರಾಗಿರುವ  ಉಪಚುನಾವಣೆಗಳಿಗೆ ಬಿಜೆಪಿ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟವಾಗಿದ್ದು, ಯಾರು? ಯಾವ ಕ್ಷೇತ್ರಕ್ಕೆ? ಎನ್ನುವ ಸಪೂರ್ಣ ಮಾಹಿತಿ ಈ ಕೆಳಗಿನಂತಿದೆ.

ಬೆಂಗಳೂರು, [ಅ.09]: ರಾಜ್ಯದಲ್ಲಿ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಉಪ ಚುನಾವಣೆಗಳಿಗೆ ಈಗಾಗಲೇ ದಿನಾಂಕ ನಿಗದಿಯಾಗಿದ್ದು, ಇದಕ್ಕಾಗಿ ಬಿಜೆಪಿ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಗೊಂಡಿದೆ.

ಇಂದು [ಮಂಗಳವಾರ] ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ. ಅಷ್ಟೇ ಅಲ್ಲದೇ ಆಯಾ ಕ್ಷೇತ್ರಗಳಿಗೆ ಉಸ್ತುವಾರಿಗಳನ್ನು ಸಹ ನೇಮಿಸಲಾಗಿದೆ.

ರಾಮನಗರ ವಿಧಾನಸಭಾ ಕ್ಷೇತ್ರ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಹೊರತುಪಡಿಸಿ ಉಳಿದ ಎಲ್ಲಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ.

ಬಳ್ಳಾರಿ ಲೋಕಸಭಾ ಕ್ಷೇತ್ರ - ಜೆ.ಶಾಂತಾ, ಶಿವಮೊಗ್ಗ ಲೋಕಸಭಾ ಕ್ಷೇತ್ರ - ಬಿ.ವೈ. ರಾಘವೇಂದ್ರ., ಜಮಖಂಡಿ ವಿಧಾನಸಭಾ ಕ್ಷೇತ್ರ - ಶ್ರೀಕಾಂತ್ ಕುಲಕರ್ಣಿ ಅಂತಿಮ ಅಭ್ಯರ್ಥಿ ಎಂದು ಘೋಷಿಸಲಾಗಿದೆ.

ಇನ್ನು ರಾಮನಗರ ವಿಧಾನಸಭಾ ಕ್ಷೇತ್ರ ಮತ್ತು ಮಂಡ್ಯ ಲೋಕಸಭಾ ಕ್ಷೇತ್ರ ಬಾಕಿ ಇದ್ದು, ಎರಡೂ ಕಡೆಗೂ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಬಿಎಸ್​ವೈ ವಿವೇಚನೆಗೆ ಬಿಡಲಾಗಿದೆ ಎಂದು ಕೋರ್ ಕಮಿಟಿ ಸಭೆಯಲ್ಲಿ ನಿರ್ಣಯವಾಗಿದೆ. 

ಇದೇ ನವೆಂಬರ್ 3ರಂದು ಎಲ್ಲಾ ಉಪಚುನಾವಣೆಗಳಿಗೆ ಮತದಾನ ನಡೆಯಲಿದ್ದು, ನವೆಂಬರ್ 6ರಂದು ಮತ ಎಣಿಕೆ ನಡೆಯಲಿದೆ.