ಸರಕಾರಕ್ಕೆ ಅಭಿನಂದನೆ ಸಲ್ಲಿಸಿರುವ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾರಾ ಗೋವಿಂದು, ಕನ್ನಡ ಚಿತ್ರರಂಗ ಸಿಎಂ ಸಿದ್ದರಾಮಯ್ಯನವರಿಗೆ ಋಣಿಯಾಗಿರುತ್ತದೆ ಎಂದು ಹೇಳಿದ್ದಾರೆ.

ಬೆಂಗಳೂರು(ಮಾ. 15): 2017-18 ಸಾಲಿನ ಬಜೆಟ್'​ನಲ್ಲಿ ಸ್ಯಾಂಡಲ್'​ವುಡ್'​ಗೆ ಸಿಹಿ ಸಿಕ್ಕಿದೆ.. ಸಿಎಂ ಸಿದ್ದರಾಮಯ್ಯ ಅವರು ಕನ್ನಡ ಚಿತ್ರೋದ್ಯಮ ಅಭಿವೃದ್ಧಿಗೆ ಮೈಸೂರಿನಲ್ಲಿ ಚಿತ್ರನಗರಿ ಸ್ಥಾಪನೆ ಮಾಡುವುದಾಗಿ ಹೇಳಿದ್ದಾರೆ. ಮೈಸೂರಿನ ಹಿಮ್ಮಾವು ಎಂಬಲ್ಲಿ ಚಿತ್ರನಗರಿ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದ್ದು, ಇದಕ್ಕಾಗಿ ಪ್ರಸಕ್ತ ಸಾಲಿನ ಬಜೆಟ್'ನಲ್ಲಿ ಹಣ ಮೀಸಲಿಟ್ಟಿದ್ದು, ಮುಂದಿನ 2 ವರ್ಷಗಳ ಅವಧಿಯಲ್ಲಿ ಚಿತ್ರನಗರಿ ತಲೆ ಎತ್ತಲಿದೆ ಅಂತ ಹೇಳಿದ್ರು. ಅಂತೆಯೇ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ ಗರಿಷ್ಠ ಟಿಕೆಟ್ ದರವನ್ನು 200ರುಗೆ ನಿಗದಿ ಪಡಿಸಲಾಗಿದೆ. ಅಷ್ಟೇ ಅಲ್ಲ, ಮಲ್ಟಿಪ್ಲೆಕ್ಸ್'ಗಳಲ್ಲಿ ಕನ್ನಡ ಚಿತ್ರಪ್ರದರ್ಶನ ಕಡ್ಡಾಯ ಅಂತಲೂ ಮುಖ್ಯಮಂತ್ರಿ ಸಿದ್ರಾಮಯ್ಯ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದೇ ವೇಳೆ, ಮೈಸೂರಿನಲ್ಲಿ ಚಿತ್ರನಗರಿ ಸ್ಥಾಪಿಸುವ ಸರ್ಕಾರದ ನಿರ್ಧಾರಕ್ಕೆ ಕನ್ನಡ ಚಿತ್ರರಂಗ ಹರ್ಷ ವ್ಯಕ್ತಪಡಿಸಿದ್ದು, ಮಲ್ಟಿಪ್ಲೆಕ್ಸ್'ಗಳಲ್ಲಿ ಕನ್ನಡ ಚಿತ್ರ ಪ್ರದರ್ಶನ ಕಡ್ಡಾಯಗೊಳಿಸಿರುವ ಸಿಎಂ ಸಿದ್ದರಾಮಯ್ಯ ಅವರ ನಿರ್ಧಾರಕ್ಕೆ ಧನ್ಯವಾದ ತಿಳಿಸಿದೆ. ಬಜೆಟ್ ಬಳಿಕ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಚೇರಿಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. ಸರಕಾರಕ್ಕೆ ಅಭಿನಂದನೆ ಸಲ್ಲಿಸಿರುವ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾರಾ ಗೋವಿಂದು, ಕನ್ನಡ ಚಿತ್ರರಂಗ ಸಿಎಂ ಸಿದ್ದರಾಮಯ್ಯನವರಿಗೆ ಋಣಿಯಾಗಿರುತ್ತದೆ ಎಂದು ಹೇಳಿದ್ದಾರೆ.

ಶಿವಣ್ಣ ಪ್ರತಿಕ್ರಿಯೆ:
ಮಲ್ಟಿ ಫ್ಲೆಕ್ಸ್​​ಗಳಲ್ಲಿ ಕನ್ನಡ ಚಿತ್ರ ಪ್ರದರ್ಶನ ಕಡ್ಡಾಯ ಮಾಡಿ ಸಿಎಂ ಸಿದ್ದರಾಮಯ್ಯ ಒಳ್ಳೆಯ ನಿರ್ಧಾರ ತೆಗೆದುಕೊಂಡಿದ್ದಾರೆ. ಇದು ಒಂದು ಒಳ್ಳೆಯ ಬೆಳವಣಿಗೆ. ಮಲ್ಟಿಫ್ಲೆಕ್ಸ್ ಟಿಕೆಟ್ ದರ ಕಡಿಮೆಯಾಗಿರುವುದು ಕನ್ನಡದ ಅಭಿಮಾನಿಗಳಿಗೂ ಅನುಕೂಲವಾಗಿದೆ ಎಂದು ಸುವರ್ಣನ್ಯೂಸ್‌'ಗೆ ನಟ ಶಿವರಾಜ್ ಕುಮಾರ್ ಹೇಳಿಕೆ ನೀಡಿದ್ದಾರೆ.