ಸದ್ಯಕ್ಕಿಲ್ವಂತೆ ಸಚಿವ ಸಂಪುಟ ವಿಸ್ತರಣೆ, ಹಾಗಾದ್ರೆ ಮತ್ಯಾವಾಗ?
ರಾಜ್ಯದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರ್ಕಾರ ಆಡಳಿತಕ್ಕೆ ಬಂದು 3 ತಿಂಗಳು ಕಳೆದಿವೆ. ಆದರೆ, 2ನೇ ಹಂತದ ಸಂಪುಟ ವಿಸ್ತರಣೆ ಕಗ್ಗಂಟಾಗಿಯೇ ಉಳಿದಿದೆ.
ಬೆಂಗಳೂರು, (ಸೆ.18): ರಾಜ್ಯದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರ್ಕಾರ ಆಡಳಿತಕ್ಕೆ ಬಂದು 3 ತಿಂಗಳು ಕಳೆದಿವೆ. ಆದರೆ, 2ನೇ ಹಂತದ ಸಂಪುಟ ವಿಸ್ತರಣೆ ಕಗ್ಗಂಟಾಗಿಯೇ ಉಳಿದಿದೆ.
ಇದೇ ಸೆಸ್ಟೆಂಬರ್ 3ನೇ ವಾರದಲ್ಲಿ ಸಂಪುಟ ವಿಸ್ತರಣೆ ಮಾಡಲು ನಿರ್ಧರಿಸಲಾಗಿತ್ತು. ಆದರೆ, ಕಳೆದೆರೆಡು ವಾರಗಳಿಂದ ಪ್ರಸಕ್ತ ರಾಜ್ಯ ರಾಜಕಾರಣದಲ್ಲಿ ಕ್ಷಿಪ್ರ ಬೆಳವಣಿಗೆಗಳು ಜೋರಾಗಿ ನಡೆದಿದ್ದು, ಸಮ್ಮಿಶ್ರ ಸರ್ಕಾರ ಅಲುಗಾಡುತ್ತಿದೆ.
ಇಂತಹ ಸಂದರ್ಭದಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡಿದರೆ ಜೇನುಗೂಡಿಗೆ ಕಲ್ಲು ಹೊಡೆದಂತೆ ಎಂದು ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಅರಿತುಕೊಂಡಿದ್ದಾರೆ.. ಈ ಹಿನ್ನೆಲೆಯಲ್ಲಿ ಇದೇ ಸೆಪ್ಟೆಂಬರ್ 3ನೇ ವಾರದಲ್ಲಿ ನಡೆಯಬೇಕಿದ್ದ ಸಂಪುಟ ವಿಸ್ತರಣೆ ಸಹ ಮುಂದೂಡಲಾಗಿದೆ. ಈ ಬಗ್ಗೆ ಸ್ವತಃ ಸಮನ್ಚ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ.
ಇಂದು (ಮಂಗಳವಾರ) ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಮಾಜಿ ಸಿಎಂ ಹಾಗೂ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ, ವಿಧಾನ ಪರಿಷತ್ ಸದಸ್ಯರ ಆಯ್ಕೆಗೆ ಚುನಾವಣೆ ಇದೆ. ಹಾಗಾಗಿ ಸೆಪ್ಟೆಂಬರ್ ಮೂರನೇ ವಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.