ಕರ್ನಾಟಕ ನೂತನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರಜಾ ದಿನವೂ ಕೂಡ ಕೆಲಸ ಕಾರ್ಯ ಮುಂದುವರಿಸಿದರು. 

ಬೆಂಗಳೂರು [ಜು.28] :  ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮರುದಿನ 4ನೇ ಶನಿವಾರವಾದ ಕಾರಣ ಸರ್ಕಾರಿ ರಜೆ ಇದ್ದರೂ ಬಿ.ಎಸ್‌. ಯಡಿಯೂರಪ್ಪ ಅವರು ವಿಧಾನಸೌಧಕ್ಕೆ ತೆರಳಿ ರಾಜ್ಯದ ಮೂಲಸೌಕರ್ಯ ಯೋಜನೆಗಳ ಬಗ್ಗೆ ಪರಿಶೀಲನಾ ಸಭೆ ನಡೆಸಿದರು.

Add Asianetnews Kannada as a Preferred SourcegooglePreferred

ಮಂಡ್ಯ ಪ್ರವಾಸ ಮುಗಿಸಿ ವಾಪಸಾದ ಯಡಿಯೂರಪ್ಪ ಅವರು ವಿಧಾನಸೌಧಕ್ಕೆ ತೆರಳಿ ಮೊದಲಿಗೆ ಸೋಮವಾರ ವಿಧಾನಸಭೆಯಲ್ಲಿ ಮಂಡಿಸಬೇಕಾಗಿರುವ ಹಣಕಾಸು ವಿಧೇಯಕ ಕುರಿತು ಕೆಲಕಾಲ ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ನಂತರ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗದ ಪ್ರಮುಖ ಮೂಲಸೌಕರ್ಯ ಯೋಜನೆಗಳ ಬಗ್ಗೆ ಪ್ರತ್ಯೇಕವಾಗಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿಗಳು, ದೀರ್ಘ ಕಾಲದಿಂದ ಬಾಕಿ ಉಳಿದಿರುವ ಯೋಜನೆಗಳ ಬಗ್ಗೆ ತಮ್ಮ ಮುಂದಿನ ದೆಹಲಿ ಭೇಟಿ ವೇಳೆ ಕೇಂದ್ರ ಸರ್ಕಾರದ ಸಂಬಂಧಪಟ್ಟಇಲಾಖೆಗಳ ಸಚಿವರ ಗಮನಕ್ಕೆ ತರಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರಿನ ನಮ್ಮ ಮೆಟ್ರೋ, ಕಲಬುರಗಿ ವಿಮಾನ ನಿಲ್ದಾಣ ಸೇರಿದಂತೆ ವಿವಿಧ ಯೋಜನೆಗಳ ಬಗ್ಗೆಯೂ ಸಭೆಯಲ್ಲಿ ಪ್ರಸ್ತಾಪವಾಗಿದೆ ಎಂದು ಮೂಲಗಳು ತಿಳಿಸಿವೆ.