ರಾಜ್ಯದ ಆರ್ಥಿಕತೆಯ ಸದ್ಯದ ಪರಿಸ್ಥಿತಿ ಕುರಿತು ನೂತನ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಂಡಿದ್ದಾರೆ. 

 ಬೆಂಗಳೂರು : ರಾಜ್ಯದ ಆರ್ಥಿಕತೆಯ ಸದ್ಯದ ಪರಿಸ್ಥಿತಿ ಕುರಿತು ನೂತನ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಂಡಿದ್ದಾರೆ.

Add Asianetnews Kannada as a Preferred SourcegooglePreferred

ಶುಕ್ರವಾರ ಬಹುಮತ ಸಾಬೀತುಪಡಿಸಿದ ಬಳಿಕ ಕುಮಾರಸ್ವಾಮಿ ಅವರು ವಿಧಾನಸೌಧದಲ್ಲಿ ಶುಕ್ರವಾರ ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದರು. ಈ ವೇಳೆ ಆರ್ಥಿಕ ಆಯವ್ಯಯದ ಬಗ್ಗೆ ಅಧಿಕಾರಿಗಳು ಮುಖ್ಯಮಂತ್ರಿಗೆ ವಿಸ್ತೃತವಾಗಿ ವಿವರಿಸಿದರು. ಯಾವ ಇಲಾಖೆಗೆ ಎಷ್ಟುಅನುದಾನದ ಅಗತ್ಯ ಇದೆ ಮತ್ತು ಹಿಂದಿನ ಸರ್ಕಾರದಲ್ಲಿ ನೀಡಿರುವ ಅನುದಾನ ಎಷ್ಟುಎಂಬುದರ ಕುರಿತು ಮಾಹಿತಿಯನ್ನು ಸಂಗ್ರಹಿಸಿದರು.

ರೈತರ ಸಾಲ ಮನ್ನಾ ಸೇರಿದಂತೆ ರಾಜ್ಯಕ್ಕೆ ಆರ್ಥಿಕ ಹೊರೆಯಾಗದಂತೆ ಕೈಗೊಳ್ಳಬಹುದಾದ ಕ್ರಮಗಳು, ತೆರಿಗೆ ಸಂಗ್ರಹ ಸೇರಿದಂತೆ ಹಣದ ಮೂಲದ ಬಗ್ಗೆ ಪರಿಶೀಲನೆ ನಡೆಸಿದರು. ಅಲ್ಲದೇ, ಕೆಲವು ದಾಖಲೆಗಳ ವಿರ್ಮಶೆಗಳನ್ನು ನಡೆಸಿದರು ಎಂದು ಮೂಲಗಳು ತಿಳಿಸಿವೆ.

ಹೊಸದಾಗಿ ಬಜೆಟ್‌ ಮಂಡಿಸಬೇಕಾದ ಹಿನ್ನೆಲೆಯಲ್ಲಿ ಆಯವ್ಯಯದ ಲೆಕ್ಕಾಚಾರ ಹಾಕಬೇಕು. ಹೀಗಾಗಿ ಹಿಂದಿನ ಮತ್ತು ಮುಂದಿನ ಸಾಧಕ-ಬಾಧಕ ಕುರಿತು ಅಧಿಕಾರಿಗಳೊಂದಿಗೆ ಸುದೀರ್ಘವಾಗಿ ಸಮಾಲೋಚನೆ ನಡೆಸಿದರು. ಸಭೆಯಲ್ಲಿ ಆರ್ಥಿಕ ಇಲಾಖೆಯ ಅಧಿಕಾರಿಗಳು ರಾಜ್ಯದ ಆರ್ಥಿಕತೆಯ ಚಿತ್ರಣವನ್ನು ಮುಖ್ಯಮಂತ್ರಿಗಳಿಗೆ ವಿವರಿಸಿದರು ಎಂದು ತಿಳಿದು ಬಂದಿದೆ.