ಪರೀಕ್ಷೆ ಬರೆಯಲು ವಂಚಿತರಾದ ಅಭ್ಯರ್ಥಿಗಳಿಗೆ ನೆರವಾದ ಸಿಎಂ
ಹುಬ್ಬಳ್ಳಿಯಲ್ಲಿ ರೈಲು ವಿಳಂಬವಾದ ಕಾರಣ ಕೆಲ ಅಭ್ಯರ್ಥಿಗಳು ಪರೀಕ್ಷೆಯಿಂದ ವಂಚಿತರಾಗಿದ್ದರು. ಈ ಕುರಿತು ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗಿತ್ತು.
ಹುಬ್ಬಳ್ಳಿ[ಆ.05]: ರಾಣಿ ಚೆನ್ನಮ್ಮ ಎಕ್ಸ್ ಪ್ರೆಸ್ ರೈಲು ವಿಳಂಬವಾಗಿ ಸಶಸ್ತ್ರ ಮೀಸಲು ಪಡೆ ನೇಮಕಾತಿ ಪರೀಕ್ಷೆ ಬರೆಯಲಾಗದ ಅಭ್ಯರ್ಥಿಗಳಿಗೆ ಇನ್ನೊಂದು ಅವಕಾಶ ಒದಗಿಸುವ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ರೈಲು ವಿಳಂಬವಾದ ಕಾರಣ ಕೆಲ ಅಭ್ಯರ್ಥಿಗಳು ಪರೀಕ್ಷೆಯಿಂದ ವಂಚಿತರಾಗಿದ್ದರು. ಈ ಕುರಿತು ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗಿತ್ತು. ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಪರೀಕ್ಷೆಯಿಂದ ವಂಚಿತರಾದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ನಡೆಸುವ ಬಗ್ಗೆ ಅವಕಾಶ ಕಲ್ಪಿಸಲು ಎಡಿಜಿಪಿ ಅವರಿಗೆ ಸೂಚನೆ ನೀಡಿ, ಅಭ್ಯರ್ಥಿಗಳು ಯಾರೂ ಗಾಬರಿಯಾಗಬೇಕಿಲ್ಲ. ಶೀಘ್ರವೇ ಪರೀಕ್ಷೆಯ ಮುಂದಿನ ದಿನಾಂಕ ಪ್ರಕಟಿಸಲಾಗುವುದು ಎಂದು ತಿಳಿಸಿದರು.
ರೈಲು ವಿಳಂಬವಾದ ಕುರಿತು ರೈಲ್ವೆ ಸಚಿವರ ಗಮನ ಸೆಳೆದು ಇಂತಹ ಅಚಾತುರ್ಯಗಳಾಗದಂತೆ ಕ್ರಮ ವಹಿಸಲು ಕೊರಲಾಗುವುದು. ಹುಬ್ಬಳ್ಳಿಯಲ್ಲಿ ಪರೀಕ್ಷಾ ಕೇಂದ್ರ ಸ್ಥಾಪಿಸುವ ಕುರಿತು ಸಹ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ತಿಳಿಸಿದರು.