ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಮುಂದಾಗಿದೆ. ಮೈಸೂರಿನಲ್ಲಿ ನಾಲ್ವರು ಶಾಸಕರಿದ್ದು ಇದರಲ್ಲಿ ಯಾರು ಸಚಿವ ಸ್ಥಾನ ಪಡೆಯಲಿದ್ದಾರೆ ಎನ್ನುವುದು ಕುತೂಹಲ ಮೂಡಿದೆ. 

ಮೈಸೂರು [ಜು.25]: ರಾಜ್ಯದಲ್ಲಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವುದು ಖಚಿತವಾಗುತ್ತಿದ್ದಂತೆ ಅವಿಭಜಿತ ಮೈಸೂರು ಜಿಲ್ಲೆಯಿಂದ ಯಾರಿಗೆ ಸಚಿವ ಸ್ಥಾನ ಸಿಗಬಹುದು ಎಂಬ ಚರ್ಚೆ ಆರಂಭವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೈಸೂರು-ಚಾಮರಾಜನಗರ ಜಿಲ್ಲೆಗಳಲ್ಲೇ ಬಿಜೆಪಿ ನಾಲ್ವರು ಶಾಸಕರಿದ್ದಾರೆ. ಅವರೆಂದರೆ ಎಸ್‌.ಎ. ರಾಮದಾಸ್‌- ಕೃಷ್ಣರಾಜ, ಎಲ್‌. ನಾಗೇಂದ್ರ- ಚಾಮರಾಜ, ಬಿ. ಹರ್ಷವರ್ಧನ್‌- ನಂಜನಗೂಡು ಹಾಗೂ ಸಿ.ಎನ್‌. ನಿರಂಜನಕುಮಾರ್‌- ಗುಂಡ್ಲುಪೇಟೆ. ಈ ಪೈಕಿ ರಾಮದಾಸ್‌ ನಾಲ್ಕನೇ ಬಾರಿಗೆ ಶಾಸಕರು ಹಾಗೂ ಈ ಹಿಂದೆಯೂ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದರು. ಉಳಿದ ಮೂವರು ಪ್ರಥಮ ಬಾರಿ ವಿಧಾನಸಭೆಗೆ ಆಯ್ಕೆಯಾದವರು.

ನಾಗೇಂದ್ರ ಅವರು ಮೂರು ಬಾರಿ ನಗರ ಪಾಲಿಕೆ ಸದಸ್ಯರಾಗಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವವಿದೆ. ಇವರು 2013ರ ಚುನಾವಣೆಯಲ್ಲಿ ಸೋತಿದ್ದರು. ನಿರಂಜನಕುಮಾರ್‌ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದರು. ಅವರ ತಂದೆ ಶಿವಮಲ್ಲಪ್ಪ ಎರಡು ಬಾರಿ, ನಿರಂಜನ ಮೂರು ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರು.

ಹರ್ಷವರ್ಧನ್‌ ಮೊದಲು ಬಾರಿ ಶಾಸಕರು, ಚಾಮರಾಜನಗರ ಸಂಸದರಾದ ವಿ. ಶ್ರೀನಿವಾಸಪ್ರಸಾದ್‌ ಅವರ ಅಳಿಯ. ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಅತೃಪ್ತರನ್ನು ತೃಪ್ತಿಪಡಿಸಬೇಕಾದ ಹೊಣೆಗಾರಿಕೆ ಇರುವುದರಿಂದ ಈ ನಾಲ್ವರಲ್ಲಿ ಒಬ್ಬರಿಗೆ ಅವಕಾಶ ಸಿಗಬಹುದು.