ಈವರೆಗೂ ಕೃಷ್ಣ ಅವರಿಗೆ ಬಿಜೆಪಿಯಲ್ಲಿ ಯಾವ ಸ್ಥಾನಮಾನ ನೀಡಲಾಗುತ್ತದೆ ಎಂಬುದರ ಬಗ್ಗೆ ಸ್ಪಷ್ಟ ಚಿತ್ರಣ ಇಲ್ಲ. ಕೃಷ್ಣ ಅವರು ಯಾವುದೇ ಸ್ಥಾನಮಾನ ಕೇಳುವ ಮನಸ್ಥಿತಿಯಲ್ಲಿ ಇಲ್ಲ ಎಂಬ ಮಾತೂ ಕೇಳಿಬರುತ್ತಿದೆ.

ಬೆಂಗಳೂರು(ಮಾ.11): ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಇದೇ ತಿಂಗಳ 15ರಂದು (ಬುಧವಾರ) ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.

ಅಂದು ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದು, ರಾಜ್ಯ ಬಿಜೆಪಿಯ ಹಿರಿಯ ನಾಯಕರೂ ಉಪಸ್ಥಿತರಿರಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅದಕ್ಕೂ ಮೊದಲು 14ರಂದು ಕೃಷ್ಣ ಅವರು ದೆಹಲಿಗೆ ತೆರಳಿ ಅಮಿತ್ ಶಾ ಅವರೊಂದಿಗೆ ಪೂರ್ವಭಾವಿಯಾಗಿ ಮಾತುಕತೆ ನಡೆಸುವ ಸಾಧ್ಯತೆಯಿದೆ. ಈವರೆಗೂ ಕೃಷ್ಣ ಅವರಿಗೆ ಬಿಜೆಪಿಯಲ್ಲಿ ಯಾವ ಸ್ಥಾನಮಾನ ನೀಡಲಾಗುತ್ತದೆ ಎಂಬುದರ ಬಗ್ಗೆ ಸ್ಪಷ್ಟ ಚಿತ್ರಣ ಇಲ್ಲ. ಕೃಷ್ಣ ಅವರು ಯಾವುದೇ ಸ್ಥಾನಮಾನ ಕೇಳುವ ಮನಸ್ಥಿತಿಯಲ್ಲಿ ಇಲ್ಲ ಎಂಬ ಮಾತೂ ಕೇಳಿಬರುತ್ತಿದೆ.

ಉತ್ತರಪ್ರದೇಶದಲ್ಲಿನ ಚುನಾವಣೆಯ ಭರ್ಜರಿ ಜಯಭೇರಿ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಮುಂದಿನ ತಿಂಗಳ 9ರಂದು ನಡೆಯುವ ರಾಜ್ಯದ ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯನ್ನೂ ಗೆಲ್ಲುವ ಉತ್ಸಾಹದಲ್ಲಿದ್ದಾರೆ. ಆ ಮೂಲಕ ಕಾಂಗ್ರೆಸ್ ಸರ್ಕಾರಕ್ಕೆ ಮುಖಭಂಗ ಉಂಟು ಮಾಡುವ ಉದ್ದೇಶವಿದೆ. ಅದಕ್ಕೆ ಪೂರಕವಾಗಿ ಕೃಷ್ಣ ಅವರೂ ವಿಳಂಬ ಮಾಡದೆ ಸೇರ್ಪಡೆಯಾಗಲಿ ಎಂಬ ನಿಲುವು ರಾಜ್ಯದ ಬಿಜೆಪಿ ನಾಯಕರದ್ದು.

(ಕನ್ನಡಪ್ರಭ ವಾರ್ತೆ)